ಸಾರಾಂಶ
ಶುಕ್ರವಾರ ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಕುರಿತು ಸಂವೇದನೆ ಮೂಡಿಸಲು ನಡೆದ ಮಾಹಿತಿ ಕಾರ್ಯಾಗಾರದಲ್ಲಿ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ಪಾಲ್ಗೊಂಡು ಮಾತನಾಡಿದರು.
ಕನ್ನಡಪ್ರಭ ವಾರ್ತೆ ಉಡುಪಿ
ಲಿಂಗತ್ವ ಅಲ್ಪಸಂಖ್ಯಾತರು ತಮ್ಮ ಅಗತ್ಯ ಕೆಲಸಗಳಿಗಾಗಿ ಸರ್ಕಾರಿ ಕಚೇರಿಗಳಿಗೆ ಬಂದಾಗ ಅವರೊಂದಿಗೆ ಗೌರವಯುತವಾಗಿ ನಡೆದುಕೊಂಡು, ನಿಯಮಾನುಸಾರ ಕೆಲಸ ಕಾರ್ಯಗಳನ್ನು ಮಾಡಿಕೊಡಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.ಶುಕ್ರವಾರ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಕುರಿತು ಸಂವೇದನೆ ಮೂಡಿಸಲು ನಡೆದ ಮಾಹಿತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.ಕಾನೂನಿನ ಮುಂದೆ ಎಲ್ಲರೂ ಸಮಾನರು. ಸಾಂವಿಧಾನಿಕವಾಗಿ ಯಾವುದೇ ಜಾತಿ, ಜನಾಂಗ, ಲಿಂಗ ಆಧಾರದ ಮೇಲೆ ಯಾವುದೇ ರೀತಿಯ ತಾರತಮ್ಯ ಮಾಡುವಂತಿಲ್ಲ. ಸಮಾಜದಲ್ಲಿ ಎಲ್ಲಾ ಜನರೂ ಒಂದೇ ಎಂಬ ಭಾವನೆಯಿಂದ ನೋಡಬೇಕು. ಲಿಂಗತ್ವ ಅಲ್ಪಸಂಖ್ಯಾತರು ಕಚೇರಿಗಳಿಗೆ ಬಂದಾಗ ಅವರನ್ನೂ ಸಹ ಇತರರೊಂದಿಗೆ ನಡೆದುಕೊಳ್ಳುವ ರೀತಿಯಲ್ಲಿಯೇ ನಡೆದುಕೊಳ್ಳಬೇಕು. ಅವರೊಂದಿಗೆ ಅಗೌರವವಾಗಿ ವರ್ತಿಸಿದ್ದಲ್ಲಿ ಅಂತಹ ಸರ್ಕಾರಿ ನೌಕರರ ಮೇಲೆ ಕಾನೂನಿನ ಕ್ರಮ ಕೈಗೊಳ್ಳಲಾಗುವುದು ಎಂದರು.ಸರ್ಕಾರ ಲಿಂಗತ್ವ ಅಲ್ಪಸಂಖ್ಯಾತರ ಶ್ರೇಯೋಭಿವೃದ್ಧಿಗೆ ಅನೇಕ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. ಅವರಿಗೆ ಈ ಯೋಜನೆಗಳ ಬಗ್ಗೆ ಅರಿವು ಮೂಡಿಸಿ ಅವರನ್ನು ಇದರ ಫಲಾನುಭವಿಗಳನ್ನಾಗಿಸಬೇಕು. ಗ್ಯಾರಂಟಿ ಯೋಜನೆಗಳನ್ನು ಸಹ ಇವರು ಪಡೆಯಲು ಅರ್ಹರಿದ್ದು, ಇವರುಗಳನ್ನು ಫಲಾನುಭವಿಗಳನ್ನಾಗಿಸಬೇಕು ಎಂದ ಅವರು, ಈ ಸಮುದಾಯದವರು ವಾಸಿಸಲು ಮನೆ, ಉದ್ಯೋಗ ಸೇರಿದಂತೆ ಮತ್ತಿತರ ಸೌಲಭ್ಯಗಳನ್ನು ಕಲ್ಪಿಸುವಂತೆ ಕೋರಿಕೆಗಳೂ ಇವೆ. ಇವುಗಳನ್ನು ಆದ್ಯತೆಯ ಮೇಲೆ ನೀಡಲು ಮುಂದಾಗಬೇಕು ಎಂದರು.ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಮಾತನಾಡಿ, ಲಿಂಗತ್ವ ಅಲ್ಪಸಂಖ್ಯಾತರು ಆದಾಯೋತ್ಪನ್ನ ಚಟುವಟಿಕೆ ಕೈಗೊಳ್ಳಲು ಎನ್.ಆರ್.ಎಲ್.ಎಂ. ನಲ್ಲಿ ಅವಕಾಶವಿದೆ. ಸ್ವ-ಸಹಾಯ ಸಂಘಗಳ ಗುಂಪುಗಳನ್ನು ಮಾಡಿಕೊಂಡು ಬಂದಲ್ಲಿ ಅವರಿಗೆ ಸ್ವಯಂ ಉದ್ಯೋಗಗಳನ್ನು ಕೈಗೊಳ್ಳಲು ಕೌಶಲ್ಯಾಭಿವೃದ್ಧಿ ತರಬೇತಿ ಹಾಗೂ ಆರ್ಥಿಕ ಸೌಲಭ್ಯಗಳನ್ನು ಕಲ್ಪಿಸಲು ಅವಕಾಶವಿದೆ. ಇದರ ಪ್ರಯೋಜನ ಪಡೆದುಕೊಳ್ಳಬಹುದು ಎಂದರು.ಲಿಂಗತ್ವ ಅಲ್ಪಸಂಖ್ಯಾತರು ನಿವೇಶನ ಅಥವಾ ವಸತಿ ಸೌಲಭ್ಯಗಳನ್ನು ಪಡೆಯಲು ಗ್ರಾಮ ಪಂಚಾಯತಿಗಳಲ್ಲಿ ಅರ್ಜಿ ಸಲ್ಲಿಸಿದ್ದಲ್ಲಿ, ಅಂತಹವರಿಗೆ ಆದ್ಯತೆಯ ಮೇಲೆ ನೀಡಲು ಅವಕಾಶ ಕಲ್ಪಿಸಲಾಗುವುದು ಎಂದ ಅವರು, ಸರ್ಕಾರದ ಹೊರಗುತ್ತಿಗೆ ಸಂಘದಲ್ಲಿ ವಿದ್ಯಾರ್ಹತೆ ಹೊಂದಿದವರಿಗೆ ಉದ್ಯೋಗ ನಿರ್ವಹಿಸಲು ಅವಕಾಶ ಕಲ್ಪಿಸುವುದಾಗಿ ತಿಳಿಸಿದರು.ಲಿಂಗತ್ವ ಅಲ್ಪಸಂಖ್ಯಾತರ ಹಕ್ಕುಗಳ ಕಾರ್ಯಕರ್ತೆ ಹಾಗೂ ಒಂದೆಡೆ ಸಂಸ್ಥೆಯ ಸ್ಥಾಪಕಿ ಡಾ.ಅಕೈ ಪದ್ಮಾಶಾಲಿ ಮಾತನಾಡಿ, ಸಾಧನೆಗೆ ಲಿಂಗ ತಾರತಮ್ಯವಿಲ್ಲ. ಭಾರತದ ನ್ಯಾಯಾಂಗ ವ್ಯವಸ್ಥೆಯು ಲಿಂಗತ್ವ ಅಲ್ಪಸಂಖ್ಯಾತರ ಸಮುದಾಯದವರ ಹಕ್ಕುಗಳನ್ನು ಎತ್ತಿ ಹಿಡಿಯುವುದರೊಂದಿಗೆ ಸ್ವತಂತ್ರವಾಗಿ ಜೀವಿಸಲು ಸಹಕಾರ ನೀಡುತ್ತಿದೆ. ಲಿಂಗತ್ವ ಅಲ್ಪಸಂಖ್ಯಾತ ಸಮುದಾಯವದರು ಶಿಕ್ಷಣವಂತರಾಗಿ, ಉನ್ನತ ಹುದ್ದೆಗಳನ್ನು ಅಲಂಕರಿಸುವ ಅವಕಾಶ ಕಲ್ಪಿಸಬೇಕು ಎಂದರು.ಕಾರ್ಯಾಗಾರದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾದಿಕಾರದ ಸದಸ್ಯ ಕಾರ್ಯದರ್ಶಿ ಯೋಗೇಶ್ ಪಿ.ಆರ್., ಎಎಸ್ಪಿ ಪಿ.ಎ.ಹೆಗಡೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಶ್ಯಾಮಲಾ ಸಿ.ಕೆ., ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ನಾರಾಯಣಸ್ವಾಮಿ, ಡಿಡಿಪಿಐ ಅಶೋಕ್ ಕಾಮತ್, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು, ವಿವಿಧ ಲಿಂಗತ್ವ ಅಲ್ಪಸಂಖ್ಯಾತರ ಸಮುದಾಯದ ಅಧ್ಯಕ್ಷರು, ಪದಾಧಿಕಾರಿಗಳು ಮತ್ತಿತರರಿದ್ದರು.