ಸಾರಾಂಶ
ಕನ್ನಡಪ್ರಭ ವಾರ್ತೆ, ತುಮಕೂರುಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ನಿಧನಕ್ಕೆ ಜಿಲ್ಲಾ ಜೆಡಿಎಸ್ನಿಂದ ಮಂಗಳವಾರ ನಗರದಲ್ಲಿ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು.ಜಿಲ್ಲಾ ಜೆಡಿಎಸ್ ಅಧ್ಯಕ್ಷ ಆರ್.ಸಿ.ಆಂಜನಪ್ಪ, ಕಾರ್ಯಾಧ್ಯಕ್ಷ ಟಿ.ಆರ್.ನಾಗರಾಜು, ಮಾಜಿ ಶಾಸಕ ಕೆ.ಎಂ.ತಿಮ್ಮರಾಯಪ್ಪ ಮೊದಲಾದವರು ಎಸ್.ಎಂ.ಕೃಷ್ಣರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗೌರವ ಸಮರ್ಪಿಸಿದರು.ಜಿಲ್ಲಾಧ್ಯಕ್ಷ ಆರ್.ಸಿ.ಆಂಜನಪ್ಪ ಮಾತನಾಡಿ, ಶಿಸ್ತಿನ ರಾಜಕಾರಣಿ ಎಂದೇ ಹೆಸರಾದ ಎಸ್.ಎಂ.ಕೃಷ್ಣ ಅವರು ಬೆಂಗಳೂರು ನಗರ ಈ ಮಟ್ಟದಲ್ಲಿ ಸಾಫ್ಟ್ ವೇರ್ ನಲ್ಲಿ ವಿಶ್ವವಿಖ್ಯಾತರಾಗಲು ಕಾರಣರಾಗಿದ್ದರು. ಇವರು ಮುಖ್ಯಮಂತ್ರಿಯಾಗಿದ್ದಾಗ ಅನೇಕ ಯೋಜನೆಗಳು, ಬಡವರ ಪರ ಕಾರ್ಯಕ್ರಮಗಳನ್ನು ಜಾರಿಗೆ ತಂದು ನೆರವಾಗಿದ್ದರು. ಇವರ ಅಗಲಿಕೆಯಿಂದ ರಾಜ್ಯದ ಪ್ರಮುಖ ರಾಜಕೀಯ ಮುತ್ಸದ್ದಿಯೊಬ್ಬರನ್ನು ಕಳೆದುಕೊಂಡಂತಾಗಿದೆ ಎಂದರು.ಮಾಜಿ ಶಾಸಕ ಕೆ.ಎಂ.ತಿಮ್ಮರಾಯಪ್ಪ, ಜಿಲ್ಲಾ ಜೆಡಿಎಸ್ ಕಾರ್ಯಾಧ್ಯಕ್ಷ ಟಿ.ಆರ್.ನಾಗರಾಜು ಅವರು ಎಸ್.ಎಂ.ಕೃಷ್ಣ ಅವರು ನಾಡಿಗೆ ನೀಡಿದ ಕೊಡುಗೆ ಸ್ಮರಿಸಿದರು. ಎಸ್ಟಿ ಘಟಕದ ರಾಜ್ಯ ಉಪಾಧ್ಯಕ್ಷ ಸೋಲಾರ್ ಕೃಷ್ಣಮೂರ್ತಿ, ಸೇವಾ ದಳ ಜಿಲ್ಲಾಧ್ಯಕ್ಷ ಕೆಂಪರಾಜು, ಭೈರೇಶ್, ತಾಹೇರಾ ಕುಲ್ಸಂ, ಲಕ್ಷ್ಮೀದೇವಮ್ಮ ಮತ್ತಿತರರು ಭಾಗವಹಿಸಿದ್ದರು.