ಮೂಲ್ಕಿ: ತುಳುವರ್ಲ್ಡ್ ಫೌಂಡೇಶನ್ನ ಅಧ್ಯಕ್ಷರಾಗಿ ಭಾನುಮತಿ ಶೆಟ್ಟಿ ಕಕ್ವಗುತ್ತು ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ವಸಂತ ರೈ ಕುತ್ತೆತ್ತೂರು ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಭಾನುಮತಿ ಶೆಟ್ಟಿ ಕಕ್ವಗುತ್ತು ಅವರು ಜರ್ಮನಿಯ ಕೋಲೋನ್ ವಿಶ್ವವಿದ್ಯಾಲಯದಲ್ಲಿ ಉನ್ನತ ಶಿಕ್ಷಣ ಪಡೆದು, ಪ್ರವಾಸೋದ್ಯಮದಲ್ಲಿ ಡಿಪ್ಲೊಮಾ ಪಡೆದಿದ್ದು ಸುಮಾರು 39 ವರ್ಷಗಳ ಕಾಲ ಜರ್ಮನಿಯಲ್ಲಿ ನೆಲೆಸಿ ತಮ್ಮದೇ ಆದ ಟ್ರಾವೆಲ್ ಏಜೆನ್ಸಿಯನ್ನು ಯಶಸ್ವಿಯಾಗಿ ನಡೆಸಿದ್ದಾರೆ. ವಿದೇಶದಲ್ಲಿದ್ದರೂ ತುಳು ಭಾಷೆ, ಸಂಸ್ಕೃತಿ ಹಾಗೂ ಪರಂಪರೆಯೊಂದಿಗೆ ನಿಕಟ ಸಂಪರ್ಕವನ್ನು ಉಳಿಸಿಕೊಂಡಿರುವ ಅವರು ಅಟಿಲು ಮಲ್ಪುಲೆ ತುಳು ಕಲ್ಪುಲೆ ಯೂಟ್ಯೂಬ್ ವಾಹಿನಿಯ ಮೂಲಕ ತುಳುನಾಡಿನ ಪರಂಪರೆಯನ್ನು ಜನರಿಗೆ ಪರಿಚಯಿಸುತ್ತಿದ್ದಾರೆ. ಇತ್ತೀಚೆಗೆ ಮೂಲ್ಕಿಯಲ್ಲಿ ಅಪ್ಪೆ ಬೇರ್ ದ ತುಳುನಾಡ್ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಿದ್ದಾರೆ.
ಪ್ರಸ್ತುತ ಅವರು ಮೂಲ್ಕಿ ತಾಲೂಕು ಶಾಂಭವಿ ಸಂಜೀವಿನಿ ಒಕ್ಕೂಟ ಅಧ್ಯಕ್ಷೆಯಾಗಿ ಲಯನ್ಸ್ ಕ್ಲಬ್ ಹಾಗೂ ಮೂಲ್ಕಿ ರೋಟರಿ ಕ್ಲಬ್ ನಲ್ಲಿ ಸಕ್ರಿಯರಾಗಿದ್ದು, 2026–27ನೇ ಸಾಲಿಗೆ ರೋಟರಿ ಕ್ಲಬ್, ಮೂಲ್ಕಿಯ ಪ್ರಥಮ ಮಹಿಳಾ ಅಧ್ಯಕ್ಷೆಯಾಗಿ ಆಯ್ಕೆಯಾಗಿದ್ದಾರೆ.ವಸಂತ ರೈ ಕುತ್ತೆತ್ತೂರು ಅವರು ಹಿಂದುಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್(ಎಚ್ ಪಿ ಸಿ ಎಲ್) ನಲ್ಲಿ ಮುಖ್ಯ ಪರಚಾಲನ ಪ್ರಬಂಧಕರಾಗಿ ದೀರ್ಘಕಾಲ ಸೇವೆ ಸಲ್ಲಿಸಿ ನಿವೃತ್ತರಾಗಿದ್ದಾರೆ. ಆಡಳಿತ, ಯೋಜನಾ ನಿರ್ವಹಣೆ ಹಾಗೂ ಸಂಘಟನಾ ಕೌಶಲ್ಯದಲ್ಲಿ ಅಪಾರ ಅನುಭವ ಹೊಂದಿರುವ ಅವರು, ನಿವೃತ್ತಿಯ ಬಳಿಕ ತುಳು ಭಾಷೆ, ಸಂಸ್ಕೃತಿ ಹಾಗೂ ಪರಂಪರೆಯ ಉಳಿವು ಮತ್ತು ಅಭಿವೃದ್ಧಿಗೆ ತಮ್ಮನ್ನು ಸಮರ್ಪಿಸಿಕೊಂಡಿದ್ದಾರೆ. ಇತ್ತೀಚೆಗೆ ತುಳುವರ್ಲ್ಡ್ ಫೌಂಡೇಶನ್ ಮುಖಾಂತರ ಬಸ್ರೂರಿನ ಶ್ರೀ ತುಳುವೇಶ್ವರ ದೇವಸ್ಥಾನದ ಪುನರುದ್ಧಾರ ಮತ್ತು ಅಭಿವೃದ್ಧಿ ಕಾರ್ಯಗಳಿಗೆ ಹಾಗೂ ನಿನ್ನಿಕಲ್ಲು ಪಾದೆಯನ್ನು ರಾಷ್ಟ್ರೀಯ ಮತ್ತು ಜಾಗತಿಕ ಪರಂಪರೆಯ ತಾಣವಾಗಿ ಅಭಿವೃದ್ಧಿಪಡಿಸುವ ಯೋಜನೆಗೆ ಮಹತ್ವದ ಕೊಡುಗೆ ನೀಡಿ ವಿಶೇಷ ಶ್ರಮ ವಹಿಸಿದ್ದಾರೆ.