ಸಾರಾಂಶ
ಕನ್ನಡಪ್ರಭ ವಾರ್ತೆ ತುಮಕೂರು
ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರ 75ನೇ ಹುಟ್ಟುಹಬ್ಬ ಹಾಗೂ ಅಭಿನಂದನಾ ಗ್ರಂಥ ಬಿಡುಗಡೆ ಸಮಾರಂಭ ಜೂ. 21ರ ಶನಿವಾರ ತುಮಕೂರಿನ ಜೂನಿಯರ್ ಕಾಲೇಜು ಮೈದಾನದಲ್ಲಿ ನಡೆಯಲಿದ್ದು, ಸಕಲ ಸಿದ್ಧತೆ ಆಗಿದೆ.ಹುಟ್ಟುಹಬ್ಬ ಹಿನ್ನೆಲೆಯಲ್ಲಿ ರಾಜಣ್ಣ ಅವರ ಕಟೌಟ್ಗಳು ಹಾಗೂ ಫ್ಲೆಕ್ಸ್ಗಳ ಭರಾಟೆ ಜೋರಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಸಂಪುಟದ 19 ಮಂದಿ ಸಚಿವರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಹುಟ್ಟುಹಬ್ಬ ಸಂಭ್ರಮಕ್ಕೆ ಬೃಹತ್ ವೇದಿಕೆ ಸಜ್ಜಾಗಿದ್ದು, ಶನಿವಾರ ಬೆಳಗ್ಗೆ 11ಕ್ಕೆ ಕಾರ್ಯಕ್ರಮ ನಡೆಯಲಿದೆ. ಶನಿವಾರ ಬೆಳಗ್ಗೆ 10.45ಕ್ಕೆ ಮುಖ್ಯಮಂತ್ರಿಗಳು ತುಮಕೂರಿಗೆ ಆಗಮಿಸಲಿದ್ದಾರೆ. ರಾಜ್ಯದ ಮೂಲೆ ಮೂಲೆಯಿಂದ ರಾಜಣ್ಣ ಅವರ ಅಭಿಮಾನಿಗಳು ಆಗಮಿಸಲಿದ್ದಾರೆ.
ರಾಜಣ್ಣ ಅವರ ಹುಟ್ಟಹಬ್ಬ ಸಂಭ್ರಮಕ್ಕೆ ತುಮಕೂರು ನಗರ ಸಿಂಗಾರಗೊಂಡಿದೆ. ಪ್ರಮುಖ ರಸ್ತೆಗಳಲ್ಲಿ ಸಹಕಾರ ಸಚಿವರ ಭಾವಚಿತ್ರವಿರುವ ಬಾವುಟಗಳು ರಾರಾಜಿಸುತ್ತಿವೆ.ಕಾರ್ಯಕ್ರಮಕ್ಕೆ ಅಭಿಮಾನಿಗಳನ್ನು ಕರೆತರಲು ಬಸ್ ವ್ಯವಸ್ಥೆ ಮಾಡಲಾಗಿದೆ. ನಗರದ ಹಲವೆಡೆ ವಾಹನಗಳ ನಿಲುಗಡೆಗೆ ಪ್ರತ್ಯೇಕ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿದೆ. ತುಮಕೂರು ಜಿಲ್ಲೆ ಸೇರಿದಂತೆ ಹಲವು ಕಡೆಗಳಿಂದ ಸುಮಾರು 4000 ವಾಹನಗಳು ಬರುತ್ತವೆ. ಅದರಲ್ಲಿ 2000 ಬಸ್ಗಳು ಇರುತ್ತವೆ. 14 ಸ್ಥಳಗಳಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಈಗಾಗಲೇ ರೂಟ್ ಮ್ಯಾಪ್ ಕೊಡಲಾಗಿದೆ. ಕಾರ್ಯಕ್ರಮಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಿದ್ದು, ಬಂದೋಬಸ್ತ್ಗೆ 2000 ಸಿಬ್ಬಂದಿ ನಿಯೋಜಿಸಲಾಗಿದೆ. ಕಾರ್ಯಕ್ರಮಕ್ಕೆ 1 ಲಕ್ಷಕ್ಕೂ ಅಧಿಕ ಜನರು ಭಾಗಿಯಾಗುವ ನಿರೀಕ್ಷೆ ಇದೆ. ಎಂದು ಪೊಲೀಸರು ತಿಳಿಸಿದ್ದಾರೆ.