ಸಾರಾಂಶ
ದುರಂತಕ್ಕೆ ನಿರ್ದಿಷ್ಟ ಕಾರಣಗಳೇನು ಎನ್ನುವುದು ಇನ್ನೂ ಸ್ಪಷ್ಟ ಮಾಹಿತಿ ಇಲ್ಲ. ಆಕಸ್ಮಿಕವಾಗಿ ಮೂವರು ಆವರಣವಿಲ್ಲದ ಬಾವಿಗೆ ಬಿದ್ದರೆ ಅಥವಾ ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆಯ ಪ್ರಯತ್ನಕ್ಕೆ ಮುಂದಾಗಿದ್ದರೆ ಎನ್ನುವುದು ಪೊಲೀಸರ ತನಿಖೆಯಿಂದ ತಿಳಿಯಬೇಕಾಗಿದೆ.
ಕನ್ನಡಪ್ರಭ ವಾರ್ತೆ ಕುಂದಾಪುರ
ಮನೆಯ ಸಮೀಪದ ಗದ್ದೆಯಲ್ಲಿನ ಆವರಣವಿಲ್ಲದ ಬಾವಿಗೆ ಬಿದ್ದು ಎರಡು ಮಕ್ಕಳು ಮೃತಪಟ್ಟು, ತಾಯಿ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾದ ದಾರುಣ ಘಟನೆ ತಾಲೂಕಿನ ಬೆಳ್ಳಾಲ ಗ್ರಾಮದ ಹೊಟ್ನಬೈಲು ಎಂಬಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ.ಸ್ಥಳೀಯ ನಿವಾಸಿ ಶೀಲಾ (34) ಗಂಭೀರವಾಗಿದ್ದು, ಇವರ ಮಕ್ಕಳಾದ ಪುತ್ರ ಧೀರಜ್ (13) ಹಾಗೂ ಪುತ್ರಿ ಛಾಯಾ (8) ಮೃತರು. ಶನಿವಾರ ಮಧ್ಯಾಹ್ನ ಸುಮಾರು 3 ಗಂಟೆಯ ವೇಳೆಗೆ ದುರಂತ ನಡೆದಿದೆ ಎನ್ನಲಾಗಿದೆ. ಇಬ್ಬರು ಮಕ್ಕಳೊಂದಿಗೆ ತಾಯಿ ಬಾವಿಗೆ ಬಿದ್ದಿರುವುದನ್ನು ನೋಡಿದ ಸ್ಥಳೀಯರು ಮೂವರನ್ನು ರಕ್ಷಣೆ ಮಾಡಲು ಯತ್ನಿಸಿದರಾದರೂ ಮಕ್ಕಳಿಬ್ಬರನ್ನು ಉಳಿಸಿಕೊಳ್ಳಲಾಗಲಿಲ್ಲ. ತಾಯಿ ಶೀಲಾ ಅವರನ್ನು ಚಿಕಿತ್ಸೆಗಾಗಿ ಕುಂದಾಪುರ ಆದರ್ಶ ಆಸ್ಪತ್ರೆಗೆ ದಾಖಲಿಸಲಾಗಿದೆ.
ದುರಂತಕ್ಕೆ ನಿರ್ದಿಷ್ಟ ಕಾರಣಗಳೇನು ಎನ್ನುವುದು ಇನ್ನೂ ಸ್ಪಷ್ಟ ಮಾಹಿತಿ ಇಲ್ಲ. ಆಕಸ್ಮಿಕವಾಗಿ ಮೂವರು ಆವರಣವಿಲ್ಲದ ಬಾವಿಗೆ ಬಿದ್ದರೆ ಅಥವಾ ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆಯ ಪ್ರಯತ್ನಕ್ಕೆ ಮುಂದಾಗಿದ್ದರೆ ಎನ್ನುವುದು ಪೊಲೀಸರ ತನಿಖೆಯಿಂದ ತಿಳಿಯಬೇಕಾಗಿದೆ. ಪ್ರಕರಣದ ಕುರಿತಂತೆ ಹೆಚ್ಚಿನ ಮಾಹಿತಿಗಳು ತಿಳಿದುಬಂದಿಲ್ಲ. ಕೊಲ್ಲೂರು ಠಾಣಾಧಿಕಾರಿ ಜಯಶ್ರೀ ಸ್ಥಳಕ್ಕೆ ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ.