ಸಾರಾಂಶ
ಹಾಸನ ಜಿಲ್ಲೆಯಲ್ಲಿ ಚಿತ್ರಕಲೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿದ್ದು, ಮಕ್ಕಳಿಂದ ಸ್ಥಳದಲ್ಲೇ ಚಿತ್ರ ಬರೆಯುವ ಹಾಗೂ ಕಲಾಕೃತಿಗಳನ್ನು ಪ್ರದರ್ಶಿಸಿದ ಅತ್ಯುತ್ತಮ ಚಿತ್ರಗಳಿಗೆ ಬಹುಮಾನ ವಿತರಣೆ ಮಾಡಲಾಗುವುದು ಎಂದು ಚಿತ್ರಕಲಾವಿದ ಶಿವಕುಮಾರ್ ತಿಳಿಸಿದರು. ನಗರದ ಅರಳೀಕಟ್ಟೆ ವೃತ್ತದ ಬಳಿ ಇರುವ ಸಂಸ್ಕೃತ ಭವನದಲ್ಲಿ ಸೆ. 15 ಮತ್ತು 16ರಂದು ಎರಡು ದಿನಗಳ ಕಾಲ ಚಿತ್ರಕಲಾ ಸ್ಪರ್ಧೆ ಹಾಗೂ ಕಲಾಕೃತಿಗಳ ಪ್ರದರ್ಶನ ಆಯೋಜಿಸಲಾಗಿದೆ ಎಂದು ಚಿತ್ರಕಲಾವಿದ ಶಿವಕುಮಾರ್ ತಿಳಿಸಿದರು.
ಕನ್ನಡಪ್ರಭ ವಾರ್ತೆ ಹಾಸನ
ನಗರದ ಅರಳೀಕಟ್ಟೆ ವೃತ್ತದ ಬಳಿ ಇರುವ ಸಂಸ್ಕೃತ ಭವನದಲ್ಲಿ ಸೆ. 15 ಮತ್ತು 16ರಂದು ಎರಡು ದಿನಗಳ ಕಾಲ ಚಿತ್ರಕಲಾ ಸ್ಪರ್ಧೆ ಹಾಗೂ ಕಲಾಕೃತಿಗಳ ಪ್ರದರ್ಶನ ಆಯೋಜಿಸಲಾಗಿದೆ ಎಂದು ಚಿತ್ರಕಲಾವಿದ ಶಿವಕುಮಾರ್ ತಿಳಿಸಿದರು.ಪತ್ರಿಕಾಗೋಷ್ಠಿಯಲ್ಲಿ ಶುಕ್ರವಾರ ಮಾತನಾಡಿದ ಅವರು, ಶಿಲ್ಪ ಕಲೆಗಳ ತವರೂರು ಆಗಿರುವ ಹಾಸನ ಜಿಲ್ಲೆಯಲ್ಲಿ ಚಿತ್ರಕಲೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿದ್ದು, ಮಕ್ಕಳಿಂದ ಸ್ಥಳದಲ್ಲೇ ಚಿತ್ರ ಬರೆಯುವ ಹಾಗೂ ಕಲಾಕೃತಿಗಳನ್ನು ಪ್ರದರ್ಶಿಸಿದ ಅತ್ಯುತ್ತಮ ಚಿತ್ರಗಳಿಗೆ ಬಹುಮಾನ ವಿತರಣೆ ಮಾಡಲಾಗುವುದು ಎಂದರು.
ಕಾರ್ಯಕ್ರಮವನ್ನು ಅಂತಾರಾಷ್ಟ್ರೀಯ ಚಿತ್ರ ಕಲಾವಿದ ಕೆ.ಟಿ ಶಿವಪ್ರಸಾದ್ ಉದ್ಘಾಟಿಸಲಿದ್ದು, ಇದೇ ವೇಳೆ ನಿರ್ಮಲಾ ಕಲಾ ಶಾಲೆಯ ಕರದಕಟ್ಟಿ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ಅಧ್ಯಕ್ಷ ನಾಯಕರಹಳ್ಳಿ ಮಂಜೇಗೌಡ, ನಗರಸಭೆ ಅಧ್ಯಕ್ಷ ಚಂದ್ರೇಗೌಡ, ಸಾಹಿತಿ ಗೊರೂರು ಅನಂತರಾಜು, ಚಿತ್ರಕಲಾ ಅಕಾಡೆಮಿ ಸದಸ್ಯ ಎಚ್.ಎಸ್. ಮಂಜುನಾಥ್, ಹಿರಿಯ ಚಿತ್ರಕಲಾವಿದ ಅಮೃತಚಾರಿ ಇತರರು ಪಾಲ್ಗೊಳ್ಳಲಿದ್ದಾರೆ. ಇನ್ನು ಸೆ. 16ರ ಬೆಳಿಗ್ಗೆ 10 ಗಂಟೆಗೆ ಮಕ್ಕಳಿಗೆ ಬಹುಮಾನ ವಿತರಣೆ ಮಾಡುವ ಸಮಾರೋಪ ಸಮಾರಂಭದಲ್ಲಿ ಟೈಮ್ಸ್ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಗಂಗಾಧರ್, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ಗೌರವಾಧ್ಯಕ್ಷ ರವಿನಾಕಲಗೂಡು, ಅಂತಾರಾಷ್ಟ್ರೀಯ ಚಿತ್ರಕಲಾವಿದ ಕೆ.ಟಿ. ಶಿವಪ್ರಸಾದ್, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಗೌರವ ಕಾರ್ಯದರ್ಶಿ ಬೊಮ್ಮೇಗೌಡ, ಲೇಖಕಿ ಸಿ. ಸುವರ್ಣ ಇತರರು ಭಾಗವಹಿಸಲಿದ್ದಾರೆ.ಪತ್ರಿಕಾಗೋಷ್ಠಿಯಲ್ಲಿ ಅಂತಾರಾಷ್ಟ್ರೀಯ ಚಿತ್ರಕಲಾವಿದ ಕೆ.ಟಿ. ಶಿವಪ್ರಸಾದ್, ಲೇಖಕಿ ಸಿ. ಸುವರ್ಣ, ಲತಾ, ಬಸವರಾಜ್, ಯೋಗಾನಂದ ಇತರರು ಉಪಸ್ಥಿತರಿದ್ದರು.