ಸಾರಾಂಶ
ಬೆಂಗಳೂರು : ಐಪಿಎಲ್ ಪಂದ್ಯಾವಳಿಯಲ್ಲಿ ಆರ್ಸಿಬಿ ಗೆಲುವು ಸಾಧಿಸುತ್ತಿದ್ದಂತೆ ರಾಜ್ಯಾದ್ಯಂತ ಅಭಿಮಾನಿಗಳು ಸಂಭ್ರಮಾಚರಣೆ ನಡೆಸಿದ್ದು, ಮಂಗಳವಾರ ರಾತ್ರಿ ಸಂಭ್ರಮಾಚರಣೆ ವೇಳೆ ಇಬ್ಬರು ಸಾವನ್ನಪ್ಪಿದ್ದಾರೆ. ಬೆಳಗಾವಿಯಲ್ಲಿ ಅಭಿಮಾನಿಯೊಬ್ಬ ಹೃದಯಾಘಾತಕ್ಕೆ ಬಲಿಯಾದರೆ, ಶಿವಮೊಗ್ಗದಲ್ಲಿ ಅಪಘಾತದಲ್ಲಿ ಯುವಕನೊಬ್ಬ ಮೃತಪಟ್ಟಿದ್ದಾನೆ. ಇದೇ ವೇಳೆ, ಬೆಂಗಳೂರಲ್ಲಿ ಚೂರಿ ಇರಿತದ ಪ್ರಕರಣವೊಂದು ವರದಿಯಾಗಿದೆ.
ಬೆಳಗಾವಿ ಜಿಲ್ಲೆ ಮೂಡಲಗಿ ತಾಲೂಕಿನ ಅವರಾದಿ ಗ್ರಾಮದಲ್ಲಿ ಮಂಗಳವಾರ ರಾತ್ರಿ ಸಂಭ್ರಮಾಚರಣೆ ವೇಳೆ ಕುಣಿದು ಕುಪ್ಪಳಿಸುತ್ತಿದ್ದಾಗ ವಿರಾಟ್ ಕೊಯ್ಲಿ ಅಭಿಮಾನಿ ಮಂಜುನಾಥ ಕುಂಬಾರ (25) ಹೃದಯಾಘಾತಕ್ಕೆ ಒಳಗಾಗಿ ಕುಸಿದು ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಶಿವಮೊಗ್ಗದಲ್ಲಿ ಸಂಭ್ರಮಾಚರಣೆ ವೇಳೆ ಯುವಕರು ಬೈಕ್ ಜಾಥಾ ನಡೆಸಿದ್ದು, ಈ ವೇಳೆ ಎರಡು ಬೈಕ್ಗಳು ಮುಖಾಮುಖಿ ಡಿಕ್ಕಿಯಾಗಿ ಶಿವಮೊಗ್ಗದ ವೆಂಕಟೇಶ ನಗರದ ನಿವಾಸಿ ಅಭಿ (21) ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಇದೇ ವೇಳೆ, ಬೆಂಗಳೂರಿನಲ್ಲಿ ಮಂಗಳವಾರ ತಡರಾತ್ರಿ ಸುಮಾರು 12.30ರ ವೇಳೆ ಜಾಲಹಳ್ಳಿ ಕ್ರಾಸ್ನ ಬಾರ್ವೊಂದರ ಮುಂದೆ ಸಂಭ್ರಮಾಚರಣೆ ವೇಳೆ ಗಲಾಟೆ ನಡೆದಿದ್ದು, ಭುವನೇಶ್ವರಿನಗರ ನಿವಾಸಿ ಸುನೀಲ್ (35)ಗೆ ಚಾಕುವಿನಿಂದ ಇರಿಯಲಾಗಿದೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.