ಸಾರಾಂಶ
ಕನ್ನಡಪ್ರಭ ವಾರ್ತೆ ತುಮಕೂರು
ಚಲಿಸುತ್ತಿದ್ದ ಕಂಟೇನರ್ ವಾಹನಕ್ಕೆ ಹಿಂದಿನಿಂದ ದ್ವಿಚಕ್ರ ವಾಹನ ಅಪ್ಪಳಿಸಿದ ಪರಿಣಾಮ ಮೂರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಲ್ಲಿನ ಕ್ಯಾತ್ಸಂದ್ರ ಪೊಲೀಸ್ ಠಾಣೆ ಸರಹದ್ದಿನ ನಂದಿಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಬೆಳಗ್ಗೆ 6.45 ರಲ್ಲಿ ನಡೆದಿದೆ.ಮೃತಪಟ್ಟವರನ್ನು ಗುಬ್ಬಿ ತಾಲೂಕು ಸಿ.ಎಸ್.ಪುರ ಹೋಬಳಿ ಅಂಕಲಕೊಪ್ಪದ ನಿವಾಸಿ ಧನುಷ್ಗೌಡ (22), ನಿಟ್ಟೂರು ಹೋಬಳಿ ಬಸವಾಪಟ್ಟಣದ ನಿವಾಸಿ ರಾಕೇಶ್ (24) ಹಾಗೂ ಚಳ್ಳಕೆರೆಯ ಸಮೀಪದ ಚಿಕ್ಕಚೆಲ್ಲೂರು ಗ್ರಾಮದ ಧನರಾಜ್ (24) ಎಂದು ಗುರುತಿಸಲಾಗಿದೆ.
ಈ ಮೂವರು ನಗರದ ಉಪ್ಪಾರಹಳ್ಳಿಯಲ್ಲಿ ಬಾಡಿಗೆ ಮನೆ ಮಾಡಿಕೊಂಡು ವಾಸವಿದ್ದು, ದಾಬಸ್ಪೇಟೆಯಲ್ಲಿರುವ ಎಂ.ಇ. ಸೋಲಾರ್ ಪ್ಲಾಂಟ್ನಲ್ಲಿ ಸೆಕ್ಯೂರಿಟಿಗಳಾಗಿ ಕಾರ್ಯನಿರ್ವಹಿಸುತ್ತಿದ್ದರು. ಈ ಕಾರ್ಖಾನೆಯಲ್ಲಿ ರಾತ್ರಿ ಪಾಳಿ ಕೆಲಸ ಮುಗಿಸಿಕೊಂಡು ಬೆಳಗ್ಗೆ ತುಮಕೂರಿನಲ್ಲಿರುವ ಬಾಡಿಗೆ ಮನೆಗೆ ಒಂದೇ ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದರು ಎನ್ನಲಾಗಿದೆ.ಮಾರ್ಗಮಧ್ಯೆ ನಂದಿಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಮುಂದೆ ಚಲಿಸುತ್ತಿದ್ದ ಕಂಟೇನರ್ ವಾಹನಕ್ಕೆ ಬೈಕ್ ಅಪ್ಪಳಿಸಿದ್ದರಿಂದ ಈ ಮೂವರು ಸ್ಥಳದಲ್ಲೇ ಅಸುನೀಗಿದ್ದಾರೆ. ಘಟನೆಯ ಸುದ್ದಿ ತಿಳಿದ ಕೂಡಲೇ ಕ್ಯಾತ್ಸಂದ್ರ ಪೊಲೀಸರು ಸ್ಥಳಕ್ಕೆ ಧಾವಿಸಿ ಶವಗಳನ್ನು ತುಮಕೂರು ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ಸಾಗಿಸುವಲ್ಲಿ ಶ್ರಮಿಸಿದ್ದಾರೆ. ಜಿಲ್ಲಾಸ್ಪತ್ರೆಯ ಶವಾಗಾರದ ಮುಂದೆ ಮೃತಪಟ್ಟ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿತ್ತು. ಘಟನೆ ನಡೆದ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್, ಅಡಿಷನಲ್ ಎಸ್ಪಿಗಳಾದ ಗೋಪಾಲ್, ಪುರುಷೋತ್ತಮ್, ಡಿವೈಎಸ್ಪಿ ಚಂದ್ರಶೇಖರ್, ಕ್ಯಾತ್ಸಂದ್ರ ಸಿಪಿಐ ರಾಮ್ಪ್ರಸಾದ್, ಪಿಎಸ್ಐ ಚೇತನ್ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂಬಂಧ ಕ್ಯಾತ್ಸಂದ್ರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.