ಹಾವೇರಿ: ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯಲ್ಲಿರುವ ತುಂಗಾ ವಿದ್ಯಾವರ್ಧಕ ಸಂಘವು ವಜ್ರ ಮಹೋತ್ಸವ ಆಚರಿಸಿಕೊಳ್ಳುತ್ತಿದ್ದು, ಈ ವಜ್ರ ಮಹೋತ್ಸವದ ಕೊಡುಗೆಯಾಗಿ ಎಸ್ಸೆಸ್ಸೆಲ್ಸಿಯಲ್ಲಿ ಶೇ. ೭೦ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಎರಡು ವರ್ಷಗಳ ಉಚಿತ ಪಿಯುಸಿ ಶಿಕ್ಷಣ ನೀಡುವ ಯೋಜನೆಗೆ ಮುಂದಾಗಿದೆ. ಜಿಲ್ಲೆಯ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ತುಂಗಾ ಪಿಯು ಕಾಲೇಜು ಪ್ರಾಚಾರ್ಯ ಪ್ರಸನ್ನ ಕೆ.ಎಲ್. ತಿಳಿಸಿದರು.ನಗರದ ಪತ್ರಿಕಾ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಲೆನಾಡಿನ ತೀರ್ಥಹಳ್ಳಿಯಲ್ಲಿ ೧೯೬೭ರಲ್ಲಿ ಪ್ರಾರಂಭಗೊಂಡ ತುಂಗಾ ವಿದ್ಯಾ ಸಂಸ್ಥೆಯು ವಜ್ರ ಮಹೋತ್ಸವದ ಹೊಸ್ತಿಲಿನಲ್ಲಿದೆ. ಈ ಸಂಘದ ಮೂಲಕ ಪಿಯು ಕಾಲೇಜು, ಪದವಿ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರಗಳನ್ನು ನಡೆಸಲಾಗುತ್ತಿದ್ದು, ಮಲೆನಾಡು ಭಾಗದಲ್ಲಿ ಶೈಕ್ಷಣಿಕ ಕ್ರಾಂತಿಯನ್ನು ಮಾಡಿದೆ. ತುಂಗಾ ವಿದ್ಯಾಸಂಸ್ಥೆಯು ಶಿಕ್ಷಣವನ್ನು ವ್ಯಾಪಾರವನ್ನಾಗಿ ನೋಡದೆ ಸೇವೆ ಎಂದು ಪರಿಗಣಿಸಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ, ಸಮಾಜದ ಕಡು ಬಡತನದ ವಿದ್ಯಾರ್ಥಿಗಳಿಗೆ ದಾರಿದೀಪವಾಗಿ ನಿಂತು ಉಚಿತ ಶಿಕ್ಷಣ ನೀಡುತ್ತಾ ಬಂದಿದೆ ಎಂದರು.

ಸರ್ಕಾರಿ ಅನುದಾನಕ್ಕೆ ಒಳಪಟ್ಟಿರುವ ಈ ಸಂಸ್ಥೆಯು ಮುಂಬರುವ ಶೈಕ್ಷಣಿಕ ವರ್ಷದಲ್ಲಿ ವಜ್ರ ಮಹೋತ್ಸವವನ್ನು ಆಚರಿಸಿಕೊಳ್ಳುತ್ತಿದೆ. ಇದರ ಕೊಡುಗೆಯಾಗಿ ಸಂಸ್ಥೆಯ ಆಡಳಿತ ಮಂಡಳಿಯು ವಿದ್ಯಾರ್ಥಿಗಳು ಹಾಗೂ ಪೋಷಕ ಸಮೂಹಕ್ಕೆ ಎರಡು ವರ್ಷಗಳ ಉಚಿತ ಶಿಕ್ಷಣ ಯೋಜನೆ ಸೌಲಭ್ಯ ಒದಗಿಸುತ್ತಿದೆ. ಶೇ.೭೦ಕ್ಕಿಂತ ಹೆಚ್ಚು ಅಂಕ ಪಡೆದ ಮಕ್ಕಳಿಗೆ ಉಚಿತ ಶಿಕ್ಷಣ ನೀಡಲು ಮುಂದಾಗಿದೆ. ಮಲೆನಾಡು ಭಾಗದಲ್ಲಿ ಶಿಕ್ಷಣ ಕಲಿಯಬೇಕೆಂಬ ವಿದ್ಯಾರ್ಥಿಗಳಿಗೆ ಹೆಚ್ಚು ಉಪಯುಕ್ತವಾಗಲಿದೆ. ಕಲಾ, ವಿಜ್ಞಾನ ಹಾಗೂ ವಾಣಿಜ್ಯ ವಿಭಾಗಗಳಲ್ಲಿ ತಲಾ ೫೦ರಂತೆ ಒಟ್ಟು ೧೫೦ ಸೀಟ್‌ಗಳ ಭರ್ತಿಗೆ ಅವಕಾಶ ಇರಲಿದ್ದು, ಜಿಲ್ಲೆಯ ವಿದ್ಯಾರ್ಥಿಗಳು ಇದರ ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.

ಕಾಲೇಜಿನಲ್ಲಿ ಮೂಲ ಸೌಕರ್ಯಗಳು ಸೇರಿದಂತೆ ಸುಸಜ್ಜಿತ ಲ್ಯಾಬ್, ಗ್ರಂಥಾಲಯ, ಮೈದಾನ ಹೀಗೆ ಎಲ್ಲ ಆಧುನಿಕ ಸೌಲಭ್ಯಗಳು ಇವೆ. ಸಂಸ್ಥೆಯ ಅಡಿಯಲ್ಲಿ ಹಾಸ್ಟೆಲ್ ಸೌಲಭ್ಯ ಇದ್ದು, ಹಾಸ್ಟೆಲ್‌ನಲ್ಲಿ ಶುಲ್ಕದ ರಿಯಾಯಿತಿ ಇರುತ್ತದೆ. ಹಾಸ್ಟೆಲ್‌ನ ವಸತಿ, ಊಟೋಪಚಾರ ಸಂಬಂಧಿಸಿದಂತೆ ಹಾಸ್ಟೆಲ್ ದತ್ತು ಪಡೆದುಕೊಳ್ಳಲು ರಾಜಕೀಯ ಜನಪ್ರತಿನಿಧಿಗಳು, ಸಂಘ ಸಂಸ್ಥೆಗಳನ್ನು ಸಂಪರ್ಕಿಸಲಾಗುತ್ತಿದೆ ಎಂದು ವಿವರಿಸಿದರು. ಸಂಸ್ಥೆಯ ನಿರ್ದೇಶಕ ಎಲ್.ಕೆ ನಟರಾಜ ಇದ್ದರು.