ಸಾರಾಂಶ
ಶಿವಮೊಗ್ಗ : ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಮೇ 29ರಂದು ಬೆಂಗಳೂರಿನಲ್ಲಿ ‘ಎರಡು ವರ್ಷ- ಶಿಕ್ಷಣದಲ್ಲಿ ಹರ್ಷ’ ಕಾರ್ಯಕ್ರಮ ನಡೆಸಲು ಉದ್ದೇಶಿಸಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇ 29, 30ರಂದು ಶೈಕ್ಷಣಿಕ ವರ್ಷದ ತರಗತಿ ಆರಂಭವಾಗಲಿದೆ. ಈ ಸಂಬಂಧ ಬೆಂಗಳೂರಿನಲ್ಲಿ ದೊಡ್ಡ ಮಟ್ಟದ ಕಾರ್ಯಕ್ರಮ ನಡೆಯಲಿದೆ ಎಂದರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಶಿಕ್ಷಣ ಕ್ಷೇತ್ರದಲ್ಲಿ ಸಾಕಷ್ಟು ಬದಲಾವಣೆ ಆಗಿದೆ. ಮಕ್ಕಳ ಶೈಕ್ಷಣಿಕ ಪ್ರಗತಿಗೆ ಪೂರಕವಾಗಿ ಹಲವಾರು ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗಿದೆ. ಪಿಯುಸಿ ಹಾಗೂ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ದಾಖಲಾಗುತ್ತಿದೆ. ಮೂರು ಬಾರಿ ಪರೀಕ್ಷೆ ಬರೆಯಲು ಮಕ್ಕಳಿಗೆ ಅವಕಾಶ ನೀಡಿದ್ದೇವೆ. ಇದರಿಂದಾಗಿ ಅನುತ್ತೀರ್ಣಗೊಂಡಂತಹ ಹಲವು ವಿದ್ಯಾರ್ಥಿಗಳು ಪರೀಕ್ಷೆ ಬರೆದು ತೇರ್ಗಡೆ ಹೊಂದಿ, ಅದೇ ಶೈಕ್ಷಣಿಕ ಸಾಲಿನಲ್ಲಿ ಮುಂದಿನ ತರಗತಿಗೆ ಹೋಗಲು ಅನುಕೂಲವಾಗಿದೆ ಎಂದು ಹೇಳಿದರು.
ರಾಜ್ಯದಲ್ಲಿ 51 ಸಾವಿರ ಶಾಲಾ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಸಚಿವ ಮಧು ಬಂಗಾರಪ್ಪ, ಹಿಂದಿನ ಸರ್ಕಾರಗಳು ಈ ವಿಷಯದಲ್ಲಿ ತಡವಾಗಿ ಕ್ರಮ ಕೈಗೊಳ್ಳುತ್ತಿದ್ದವು. ಏಕೆಂದರೆ ಒಂದು ತಿಂಗಳು ವಿಳಂಬವಾಗಿ ನೇಮಕ ಮಾಡಿದರೂ ಸರ್ಕಾರದ ಬೊಕ್ಕಸಕ್ಕೆ ಸಾಕಷ್ಟು ಹಣ ಉಳಿತಾಯವಾಗುತ್ತಿತ್ತು. ಆದರೆ, ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಬೊಕ್ಕಸ ಭರ್ತಿಯಾಗಿದೆ. ಹಾಗಾಗಿ 51 ಸಾವಿರ ಶಿಕ್ಷಕರ ನೇಮಕಾತಿಗೆ ಮುಂದಾಗಿದ್ದೇವೆ ಎಂದು ಹೇಳಿದರು.
ಶಾಲಾ ಮಕ್ಕಳಿಗೆ ನೀಡಲಾಗುತ್ತಿದ್ದ ಒಂದು ಮೊಟ್ಟೆಯನ್ನು ಮೂರು ಮೊಟ್ಟೆಗೆ ಹೆಚ್ಚಿಸಿದ್ದೇವೆ. ಹಾಲು ನೀಡುವುದನ್ನು ಎರಡರಿಂದ ಒಂದು ವಾರಕ್ಕೆ ಹೆಚ್ಚಿಸಿದ್ದೇವೆ. ಈ ಬಗ್ಗೆ ನಾವು ಚರ್ಚೆ ಮಾಡುವುದು ಉತ್ತಮ ಎಂದರು.