ಉಡುಪಿ: ನಗರದ ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಂಗಣದಲ್ಲಿ ‘ಬನ್ನಂಜೆ ಶ್ರೀ ಮಹಾಲಿಂಗೇಶ್ವರ ವೈಭವ-2026’ ಪ್ರಯುಕ್ತ ಖ್ಯಾತ ಗಾಯಕರು, ವಿಶ್ವದಾಖಲೆ ಗಾಯಕ ವಿದ್ವಾನ್ ಯಶವಂತ್ ಎಂ.ಜಿ. ಅವರ ಮಧುರಕಂಠದಿಂದ ಮೂಡಿಬಂದ ‘ಬನ್ನಂಜೆ ಒಡೆಯ ಮಹಾಲಿಂಗೇಶ್ವರ’ ಧ್ವನಿಸುರುಳಿ ಬಿಡುಗಡೆ ಕಾರ್ಯಕ್ರಮ ಶುಕ್ರವಾರ ಜರುಗಿತು.ಧ್ವನಿ ಸುರುಳಿಯನ್ನು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಅವರು ಅನಾವರಣಗೊಳಿಸಿದರು. ಬಳಿಕ ಮಾತನಾಡಿದ ಹರಿರಾಮ್ ಶಂಕರ್, ಮೊದಲನೇ ಬಾರಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸುವ ಅವಕಾಶ ನನಗೆ ಲಭಿಸಿದೆ. ದೇವರು ಕರೆಸಿಕೊಂಡಾಗ ಅಲ್ಲಿಗೆ ಹೋಗಿ ಪ್ರಾರ್ಥಿಸುವುದು ಮನಸ್ಸಿಗೆ ಅತ್ಯಂತ ನೆಮ್ಮದಿ ನೀಡುವ ವಿಚಾರವಾಗಿದೆ. ಮುಂಬರುವ ದಿನಗಳಲ್ಲಿ ಜರುಗುವ ಬ್ರಹ್ಮಕಲಶೋತ್ಸವಕ್ಕೆ ಸಾಕಷ್ಟು ಸಂಖ್ಯೆಯಲ್ಲಿ ಜನರು ಸೇರಲಿದ್ದು, ಪೊಲೀಸ್ ಇಲಾಖೆಯಲ್ಲಿ ಅಗತ್ಯ ಬಂದೋಬಸ್ತ್ ವ್ಯವಸ್ಥೆ ಮಾಡಲಾಗುವುದು ಎಂದರು. ಕಾರ್ಯಕ್ರಮದಲ್ಲಿ ಉದ್ಯಮಿ ಹರಿಪ್ರಸಾದ್ ರೈ, ದೇವಸ್ಥಾನದ ಅಧ್ಯಕ್ಷ ಮಾಧವ ಬನ್ನಂಜೆ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ರಮೇಶ್ ಕಾಂಚನ್, ವಿದ್ವಾನ್ ಯಶವಂತ್ ಎಂ.ಜಿ. ಹಾಗೂ ಇತರರು ಉಪಸ್ಥಿತರಿದ್ದರು.