ಕನಿಷ್ಠ ಕೂಲಿ ಮತ್ತು ತುಟ್ಟಿ ಭತ್ಯೆ ನಿರಾಕರಿಸಿದ ಬೀಡಿ ಮಾಲಕರ ವಿರುದ್ಧ ಉಡುಪಿ ಜಿಲ್ಲೆಯ ಬೀಡಿ ಕಾರ್ಮಿಕರು ಜಿಲ್ಲಾಧಿಕಾರಿ ಕಚೇರಿ ಎದುರು ಅನಿರ್ದಿಷ್ಟಾವಧಿ, ಹಗಲುರಾತ್ರಿ ಧರಣಿ ಸತ್ಯಾಗ್ರಹವನ್ನು ಮಂಗಳವಾರದಿಂದ ಆರಂಭಿಸಿದ್ದಾರೆ.
ಉಡುಪಿ: ತಮಗೆ ಕನಿಷ್ಠ ಕೂಲಿ ಮತ್ತು ತುಟ್ಟಿ ಭತ್ಯೆ ನಿರಾಕರಿಸಿದ ಬೀಡಿ ಮಾಲಕರ ವಿರುದ್ಧ ಉಡುಪಿ ಜಿಲ್ಲೆಯ ಬೀಡಿ ಕಾರ್ಮಿಕರು ಜಿಲ್ಲಾಧಿಕಾರಿ ಕಚೇರಿ ಎದುರು ಅನಿರ್ದಿಷ್ಟಾವಧಿ, ಹಗಲುರಾತ್ರಿ ಧರಣಿ ಸತ್ಯಾಗ್ರಹವನ್ನು ಮಂಗಳವಾರದಿಂದ ಆರಂಭಿಸಿದ್ದಾರೆ.
ಈ ಅನಿರ್ಧಿಷ್ಟಾವಧಿ ಧರಣಿ ಉದ್ಘಾಟಿಸಿದ ಸಿಐಟಿಯು ರಾಜ್ಯ ಉಪಾಧ್ಯಕ್ಷ ಬಾಲಕೃಷ್ಣ ಶೆಟ್ಟಿ, ಕರ್ನಾಟಕ ಸರ್ಕಾರ ಬೀಡಿ ಕಾರ್ಮಿಕರಿಗೆ 2018 ಮತ್ತು 2024 ಕನಿಷ್ಠ ಕೂಲಿ ಪ್ರಕಟಣೆ ಮಾಡಿದರೂ, ಸಾವಿರ ಬೀಡಿಗೆ ತುಟ್ಟಿ ಭತ್ತೆ ಸೇರಿ ರು. 301.98 ನೀಡಬೇಕು ಎಂದು ಸರ್ಕಾರ ಆದೇಶಿಸಿದ್ದರೂ, ಬೀಡಿ ಮಾಲಕರು ಬಡ ಬೀಡಿ ಕಾರ್ಮಿಕರಿಗೆ ಕನಿಷ್ಠ ಕೂಲಿ, ತುಟ್ಟಿ ಭತ್ಯೆ ಕೊಡದೇ ವಂಚಿಸಿದ್ದಾರೆ. ಬೀಡಿ ಕಾರ್ಮಿಕರು ಹಲವು ಬಾರಿ ಹೋರಾಟಗಳನ್ನು ನಡೆಸಿ ಸರ್ಕಾರಕ್ಕೆ ಮನವಿ ನೀಡಿದರೂ ಸರ್ಕಾರ ಬೀಡಿ ಮಾಲೀಕರ ಮೇಲೆ ಕ್ರಮವಹಿಸಿಲ್ಲ, ಆದುದರಿಂದ ಸರಕಾರ ಕೂಡಲೇ ಮಧ್ಯ ಪ್ರವೇಶಿಸಿ ಸಹಾಯಕ ಕಾರ್ಮಿಕ ಆಯುಕ್ತರು, ಕಾರ್ಮಿಕ ಸಂಘಟನೆ ಹಾಗೂ ಬೀಡಿ ಮಾಲಕರ ಜೊತೆ ಜಂಟಿ ಸಭೆ ನಡೆಸಿ ಪರಿಹರಿಸಬೇಕು ಎಂದು ಆಗ್ರಹಿಸಿದರು.ಸಿಐಟಿಯು ಜಿಲ್ಲಾ ಉಪಾಧ್ಯಕ್ಷ ಸುರೇಶ ಕಲ್ಲಾಗರ ಮಾತನಾಡಿ, ಬೀಡಿ ಮಾಲಕರು ಸರ್ಕಾರ ಮತ್ತು ಕಾನೂನಿಗಿಂತ ದೊಡ್ಡ ವ್ಯಕ್ತಿಗಳಾಗಿ ದ್ದರಿಂದಲೇ ಸರ್ಕಾರದ ಆದೇಶಗಳಿಗೆ ಕವಡೆ ಕಾಸಿನ ಕಿಮ್ಮತ್ತು ನೀಡುತ್ತಿಲ್ಲ. ಕರಾವಳಿ ಜಿಲ್ಲೆಗಳ ಶಾಸಕರು, ಜಿಲ್ಲಾಡಳಿತ ಬಡ ಬೀಡಿ ಕಾರ್ಮಿಕರ ಪರವಾಗಿ ನಿಲ್ಲದೇ ಮಾಲಿಕರ ಜೊತೆ ನಿಂತಿರುವುದರಿಂದಲೇ ಕಾರ್ಮಿಕರ ಬೆವರಿನ ಪಾಲಿನ ಕೂಲಿ ನಾಚಿಕೆಯಿಲ್ಲದೇ ಬಾಕಿ ಇರಿಸಿಕೊಂಡಿದ್ದಾರೆ ಎಂದು ಆರೋಪಿಸಿದರು.
ಜಿಲ್ಲಾ ಬೀಡಿ ಫೆಡರೇಷನ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕವಿರಾಜ್ ಎಸ್ ಕಾಂಚನ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ವಿ., ಉಪಾಧ್ಯಕ್ಷ ಕೆ ಶಂಕರ್,ಬೀಡಿ ಸಂಘಟನೆಯ ಮುಖಂಡರಾದ ಉಮೇಶ್ ಕುಂದರ್, ಬಲ್ಕೀಸ್ ಭಾನು, ನಳಿನಿ, ಸುನೀತಾ ಕಾರ್ಕಳ,ಮೋಹನ, ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘಟನೆಯ ನಾಗರತ್ನ ನಾಡ, ಜನವಾದಿ ಮಹಿಳಾ ಸಂಘಟನೆಯ ಶೀಲಾವತಿ ಮೊದಲಾದವರಿದ್ದರು.