ಉಡುಪಿ: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಕೋಟ್ಯಂತರ ರೂಪಾಯಿ ಅವ್ಯವಹಾರದ ವಿರುದ್ಧ ಈ ಹಿಂದೆ ಬಿಜೆಪಿಯ ಹೋರಾಟದ ಫಲವಾಗಿ ಕಾಂಗ್ರೆಸ್ ಸಚಿವ ಬಿ. ನಾಗೇಂದ್ರ ರಾಜೀನಾಮೆ ನೀಡಿದ್ದರು. ಈ ಪ್ರಕರಣ ನ್ಯಾಯಾಲಯದಲ್ಲಿದ್ದು, ಅವರಿಗೆ ಕ್ಲೀನ್‌ಚಿಟ್ ಸಿಗದಿದ್ದರೂ ಅವರನ್ನು ಮತ್ತೆ ಸಚಿವರನ್ನಾಗಿ ಮಾಡಿರುವುದು ಸರ್ಕಾರ ನಾಡಿನ ಜನತೆಗೆ ಹಾಗೂ ವಾಲ್ಮೀಕಿ ಜನಾಂಗಕ್ಕೆ ಮಾಡಿರುವ ದ್ರೋಹ. ಅವರನ್ನು ಸಂಪುಟದಿಂದ ಕೈಬಿಡದಿದ್ದರೆ ಬಿಜೆಪಿ ಉಗ್ರ ಹೋರಾಟ ನಡೆಸಲಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಎಚ್ಚರಿಕೆ ನೀಡಿದ್ದಾರೆ.

ನಿಗಮವು ಪರಿಶಿಷ್ಟ ಪಂಗಡದವರ ಕಲ್ಯಾಣಕ್ಕಾಗಿ ಮೀಸಲಿಟ್ಟ ಹಣವನ್ನು ಅಕ್ರಮವಾಗಿ ವರ್ಗಾವಣೆ ಮಾಡಿ ವಿವಿಧ ಬ್ಯಾಂಕ್ ಖಾತೆಗಳ ನಗದೀಕರಿಸಿರುವುದನ್ನು ಅಂದಿನ ಮುಖ್ಯಮಂತ್ರಿಗಳೇ ಸದನದಲ್ಲಿಯೇ ಒಪ್ಪಿಕೊಂಡಿದ್ದರು, ಈ ಕುರಿತು ತನಿಖಾ ಸಂಸ್ಥೆಯೂ ವರದಿ ಸಲ್ಲಿಸಿದೆ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಿಗಮದ ಅಧಿಕಾರಿ ಚಂದ್ರಶೇಖರ್ ಅವರ ಆತ್ಮಹತ್ಯೆಯಾಗಿದ್ದು ಗಂಭೀರ ವಿಚಾರವಾಗಿದೆ. ಆದರೂ ನಾಗೇಂದ್ರ ಅವರನ್ನು ಮತ್ತೆ ಸಚಿವರನ್ನಾಗಿ ಮಾಡುವ ಅಗತ್ಯ ಈಗಿನ ಮುಖ್ಯಮಂತ್ರಿ ಅವರಿಗೆ ಏನಿತ್ತು, ಯಾರ ಒತ್ತಡವಿತ್ತು ಎಂಬುದನ್ನು ಸರ್ಕಾರ ಸ್ಪಷ್ಟಪಡಿಸಬೇಕು ಎಂದು ಕುತ್ಯಾರು ಆಗ್ರಹಿಸಿದ್ದಾರೆ.ನಾಗೇಂದ್ರ ಅವರ ರಾಜೀನಾಮೆ ಪಡೆಯುವವರೆಗೆ ಸದನದ ಒಳಗೆ ಮತ್ತು ಹೊರಗೆ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಹೋರಾಟ ನಡೆಸಲಿದ್ದಾರೆ. ಜಿಲ್ಲಾಧಿಕಾರಿ ಕಚೇರಿಗಳ ಮುಂದೆ ಪ್ರತಿಭಟನೆ ನಡೆಸಲಾಗುವುದು ಎಂದು ನವೀನ್ ಶೆಟ್ಟಿ ಕುತ್ಯಾರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.