ಉಡುಪಿ: ಭಾರತೀಯ ಸಾಂಸ್ಕೃತಿಕ ಇತಿಹಾಸದಲ್ಲಿ ಶ್ರೇಷ್ಠ ಮಹಾಪುರುಷರೆಂದು ಗುರುತಿಸಲ್ಪಟ್ಟವರಲ್ಲಿ ಶಂಕರಾಚಾರ್ಯರು ಪ್ರಮುಖರಾಗಿದ್ದು, ಸನಾತನ ಧರ್ಮ ನಶಿಸಿ ಹೋಗುತ್ತಿರುವಂತಹ ಸಂದರ್ಭದಲ್ಲಿ ದೇಶದೆಲ್ಲೆಡೆ ಕಾಲ್ನಡಿಗೆಯಲ್ಲಿ ಸಂಚರಿಸಿ, ಅದೈತ ಸಿದ್ಧಾಂತದ ಸಾರವನ್ನು ಜಗತ್ತಿಗೆ ಸಾರಿದ ಅವರ ಆದರ್ಶ, ಚಿಂತನೆ ಹಾಗೂ ವಿವೇಚನೆಗಳು ಮನುಕುಲದ ಒಳಿತಿಗೆ ದಾರಿದೀಪವಾಗಿದೆ ಎಂದು ಉಡುಪಿ - ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.ಮಂಗಳವಾರ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಡಳಿತದ ವತಿಯಿಂದ ಶ್ರೀ ಶಂಕರಾಚಾರ್ಯ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಶಂಕರಾಚಾರ್ಯರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡುತ್ತಿದ್ದರು.ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ. ಗಫೂರ್ ಮಾತನಾಡಿ, ಶಂಕರಾಚಾರ್ಯರ ಅದ್ವೈತ ಸಿದ್ಧಾಂತದ ಪ್ರಕಾರ ಪ್ರತಿಯೊಬ್ಬರೂ ದ್ವೇಷ, ಅಸೂಯೆಯೆಂಬ ಭಾವನೆಯನ್ನು ಮರೆತು ಸತ್ಯದ ಹಾದಿಯಲ್ಲಿ ಸಾಗಬೇಕಿದೆ ಎಂದರು.ಅದಮಾರು ಪೂರ್ಣಪ್ರಜ್ಞ ಪದವಿ ಪೂರ್ವ ಕಾಲೇಜಿನ ಸಂಸ್ಕೃತ ಉಪನ್ಯಾಸಕ ಡಾ. ಜಯಶಂಕರ ಕಂಗಣ್ಣಾರು ಉಪನ್ಯಾಸ ನೀಡಿ ಮಾತನಾಡಿ, ಆದಿ ಗುರು ಶ್ರೀ ಶಂಕರಾಚಾರ್ಯರು ತಮ್ಮ ಅತ್ಯಲ್ಪ ಜೀವಿತಾವಧಿಯಲ್ಲಿ ಹಲವಾರು ಗ್ರಂಥರಚನೆ ಮಾಡಿ ಸಾಹಿತ್ಯಲೋಕಕ್ಕೆ ಅಸಾಧಾರಣ ಕೊಡುಗೆ ನೀಡಿದ್ದಾರೆ. ರಾಷ್ಟ್ರೀಯ ಭಾವೈಕ್ಯ ಪ್ರತಿಪಾದಿಸಿದ ಶಂಕರಾಚಾರ್ಯರ ತತ್ವಗಳು ಇಂದಿಗೂ ಪ್ರಸ್ತುತವಾದುದು ಎಂದರು.

ನಗರಾಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಎಎಸ್ಪಿ ಸುಧಾಕರ್ ನಾಯಕ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಸುಬ್ರಹ್ಮಣ್ಯ, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಮುದಾಯದ ಬಾಂಧವರು ಹಾಗೂ ಮತ್ತಿತರರಿದ್ದರು.ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿ, ನಿರೂಪಿಸಿದರೆ, ಉಡುಪಿ ಶಂಕರಾಚಾರ್ಯ ಸಮಿತಿಯ ಸದಸ್ಯ ವಿಶ್ವನಾಥ ಶಾನುಭಾಗ್ ವಂದಿಸಿದರು.