ಇಲ್ಲಿನ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ 77ನೇ ಗಣರಾಜ್ಯೋತ್ಸವದಂಗವಾಗಿ ರಾಷ್ಟ್ರ ಧ್ವಜಾರೋಹಣ
ಉಡುಪಿ: ರಾಜ್ಯದ ಬಡ ಮಕ್ಕಳಿಗೆ ಪೂರ್ವ ಪ್ರಾಥಮಿಕ ಶಿಕ್ಷಣ ಒದಗಿಸುವ ಮಹತ್ವಾಕಾಂಕ್ಷೆಯಿಂದ 4056 ಎಲ್.ಕೆ.ಜಿ. ಮತ್ತು ಯು.ಕೆ.ಜಿ. ತರಗತಿಗಳನ್ನು ಪ್ರಸಕ್ತ ವರ್ಷದಿಂದಲೇ ಆರಂಭಿಸಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.
ಸೋಮವಾರ ಇಲ್ಲಿನ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ 77ನೇ ಗಣರಾಜ್ಯೋತ್ಸವದಂಗವಾಗಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.ಸರ್ಕಾರಿ ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟದ ಕ್ಷೀರಭಾಗ್ಯ ಯೋಜನೆಯ ಜೊತೆಗೆ ವಾರದಲ್ಲಿ ಎರಡು ದಿನ ನೀಡಲಾಗುತ್ತಿದ್ದ ಬೇಯಿಸಿದ ಮೊಟ್ಟೆಗಳನ್ನು ಇನ್ನು ಮುಂದೆ ವಾರದಲ್ಲಿ 6 ದಿನವೂನೀಡಲಾಗುತ್ತದೆ. ಅಲ್ಲದೆ, ಈ ಯೋಜನೆಯನ್ನು 9 ಹಾಗೂ 10 ನೇ ತರಗತಿಗಳಿಗೂ ವಿಸ್ತರಿಸಲಾಗಿದೆ ಎಂದು ತಿಳಿಸಿದರು.ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಮಹಿಳೆಯರ ಆತ್ಮವಿಶ್ವಾಸ, ಆರ್ಥಿಕ ಸ್ವಾತಂತ್ರ್ಯ ಹಾಗೂ ಕುಟುಂಬದ ಸ್ಥಿರತೆ ಹೆಚ್ಚಿಸಿವೆ. ರಾಜ್ಯದಲ್ಲಿ ಮಹಿಳೆಯರ ಆರ್ಥಿಕ ಸ್ವಾತಂತ್ರ್ಯ ಹೆಚ್ಚಿಸಲು ಗೃಹಲಕ್ಷ್ಮೀ ವಿವಿಧೋದ್ದೇಶ ಸಹಕಾರ ಸಂಘಗಳನ್ನು ಸ್ಥಾಪಿಸಲು ಉದ್ದೇಶಿಸಲಾಗಿದೆ ಎಂದು ಸಚಿವೆ ಹೇಳಿದರು. ಪ್ರತಿಯೊಬ್ಬರಿಗೂ ಗುಣಮಟ್ಟದ ಆರೋಗ್ಯ ಸೇವೆ ನೀಡುವ ಉದ್ದೇಶದಿಂದ ರಾಜ್ಯದಲ್ಲಿ ‘ಆರೋಗ್ಯ ಸೇತು’ ಯೋಜನೆಯಡಿ 81 ಸಂಚಾರಿ ಆರೋಗ್ಯ ಘಟಕಗಳಿಗೆ ಚಾಲನೆ ನೀಡಲಾಗಿದೆ. ಉಡುಪಿ ಜಿಲ್ಲೆಯ 4 ಸಂಚಾರಿ ಆರೋಗ್ಯ ಘಟಕಗಳು ದುರ್ಗಮ ಹಾಗೂ ಸಂಪರ್ಕ ರಹಿತ ಹಳ್ಳಿಗಳಿಗೆ ಸಂಚರಿಸಲಿದ್ದು, ಇದರಿಂದ ಜಿಲ್ಲೆಯ ಸುಮಾರು 9,218 ಕೊರಗ ಜನಾಂಗದ ನಾಗರಿಕರಿಗೆ ಸಹಕಾರಿಯಾಗಲಿದೆ ಎಂದು ಭರವಸೆ ವ್ಯಕ್ತಪಡಿಸಿದರು.ಸಚಿವೆ ವಿವಿಧ ತಂಡಗಳ ಪಥಸಂಚಲನ ವೀಕ್ಷಿಸಿ, ಗೌರವ ರಕ್ಷೆ ಸ್ವೀಕರಿಸಿದರು, ಆತ್ಮ ಯೋಜನೆಯಡಿ 10 ಮಂದಿ ಕೃಷಿಕರಿಗೆ ಜಿಲ್ಲಾ ಉತ್ತಮ ಕೃಷಿಕ ಪ್ರಶಸ್ತಿಗಳನ್ನು ನೀಡಿ ಗೌರವಿಸಿದರು.ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅಧ್ಯಕ್ಷತೆ ವಹಿಸಿದ್ದರು. ವಿಧಾನ ಪರಿಷತ್ ಸದಸ್ಯ ಚೆನ್ನಾರಾಜ ಹಟ್ಟಿಹೊಳೆ, ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ. ಎ. ಗಫೂರ್, ಉಡುಪಿ ನಗರಭಿವೃದ್ಧಿ ಪ್ರಧಿಕಾರದ ಅಧ್ಯಕ್ಷ ದಿನಕರ ಹೆರೂರ್, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್, ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ., ಜಿಪಂ ಸಿಇಓ ಪ್ರತೀಕ್ ಬಾಯಲ್, ಎಸ್ಪಿ ಹರಿರಾಮ್ ಶಂಕರ್ ವೇದಿಕೆಯಲ್ಲಿದ್ದರು.5 ವರ್ಷಗಳಲ್ಲಿ 8 ತಾಣಗಳ ಅಭಿವೃದ್ಧಿಕರ್ನಾಟಕ ಪ್ರವಾಸೋದ್ಯಮ ನೀತಿ 2024-29 ರಲ್ಲಿ ಕಾಪು ಬೀಚ್, ಲೈಟ್ ಹೌಸ್, ಪಡುಬಿದ್ರಿ ಎಂಡ್ ಪಾಯಿಂಟ್, ಬ್ಲೂ ಫ್ಲ್ಯಾಗ್ ಬೀಚ್, ಕಾಪು ಮಾರಿಗುಡಿ ದೇವಸ್ಥಾನ, ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನ, ಕುಂಜಾರುಗಿರಿ ಶ್ರೀ ದುರ್ಗಾದೇವಿ ದೇವಸ್ಥಾನ, ಮಟ್ಟು ರಾಕ್ ದ್ವೀಪಗಳನ್ನು ಪ್ರವಾಸಿ ತಾಣಗಳಾಗಿ ಅಭಿವೃದ್ಧಿಗೊಳಿಸಲು ಗುರುತಿಸಲಾಗಿದೆ ಎಂದು ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.