ಸಾರಾಂಶ
ಉಡುಪಿ: ಪರ್ಯಾಯ ಪುತ್ತಿಗೆ ಮಠ - ಶ್ರೀಕೃಷ್ಣಮಠ ಆಶ್ರಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಮಂಡಲೋತ್ಸವದಂಗವಾಗಿ ನಿಟ್ಟೆ ವಿ.ವಿ.ಯ ಭಾರತೀಯ ಜ್ಞಾನ ವ್ಯವಸ್ಥೆ (ಐಕೆಎಸ್) ಸಹಯೋಗದೊಂದಿಗೆ ೧೨ರಂದು ಭಾರತೀಯ ಜ್ಞಾನ ಪರಂಪರೆಯ ಅಂತಾರಾಷ್ಟ್ರೀಯ ಸಮ್ಮೇಳನ ನಡೆಯಲಿದೆ. ಪುತ್ತಿಗೆ ಮಠದ ಆಸ್ಥಾನ ವಿದ್ವಾಂಸ ಅಮೇರಿಕಾದ ಕೇಶವ ರಾವ್ ತಾಡಿಪತ್ರಿ ಸಮ್ಮೇಳನದ ಸರ್ವಾಧ್ಯಕ್ಷತೆ ವಹಿಸುವರು. ತತ್ವಶಾಸ್ತ್ರ ಸೇರಿದಂತೆ ಭಾರತೀಯ ವಿವಿಧ ಜ್ಞಾನಶಾಖೆಯ ಮೇಲೆ ಬೆಲು ಚೆಲ್ಲುವ ಕಾರ್ಯಕ್ರಮ ಇದಾಗಿದೆ ಎಂದು ಪರ್ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ತಿಳಿಸಿದ್ದಾರೆ.
ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯ ಬೆಂಗಳೂರು ಮತ್ತು ಶ್ರೀ ವಾದಿರಾಜ ಸಂಶೋಧನ ಪ್ರತಿಷ್ಠಾನ ಉಡುಪಿ ಸಹಭಾಗಿತ್ವದಲ್ಲಿ ನಡೆಯು ಕಾರ್ಯಕ್ರಮದಲ್ಲಿ ಸುಮಾರು ೨೫ಕ್ಕೂ ಹೆಚ್ಚು ಪ್ರಬಂಧ ಮಂಡನೆಯಾಗಲಿದೆ ಎಂದರು.ಅಂದು ಬೆಳಗ್ಗೆ ೯.೩೦ಕ್ಕೆ ಪರ್ಯಾಯ ಪುತ್ತಿಗೆ ಉಭಯ ಶ್ರೀಪಾದರ ಸಾನ್ನಿಧ್ಯದಲ್ಲಿ ನಿಟ್ಟೆ ವಿಶ್ವವಿದ್ಯಾಲಯದ ಕುಲಾಧಿಪತಿ ಡಾ.ವಿನಯ್ ಹೆಗ್ಡೆ ಅಧ್ಯಕ್ಷತೆಯಲ್ಲಿ ಉದ್ಘಾಟನೆಗೊಳ್ಳಲಿದೆ. ನಿಟ್ಟೆ ವಿವಿ. ಕುಲಪತಿ ಡಾ.ಎಂ.ಎಸ್ ಮೂಡಿತ್ತಾಯ, ಸಂಸ್ಕೃತ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಅಹಲ್ಯಾ ಎಸ್., ‘ಬ್ರಹ್ಮೋಸ್’ ವಿಜ್ಞಾನಿ ಪದ್ಮಶ್ರೀ ಡಾ. ಪ್ರಹ್ಲಾದ್ ರಾಮ್ ರಾವ್, ಹಿರಿಯ ವಿದ್ವಾಂಸರಾದ ಪ್ರೊ. ಶ್ರೀಪತಿ ತಂತ್ರಿ, ಗೋಪೀನಾಥಾಚಾರ್ ಗಲಗಲಿ, ಡಾ.ಸುದರ್ಶನ್ ಮೂರ್ತಿ, ಡಾ,ಲಕ್ಷ್ಮೀ ಮೂರ್ತಿ ಮೊದಲಾದವರು ಭಾಗವಹಿಸುವರು. ವಿವಿಧ ವಿಚಾರಗಳ ಕುರಿತು ವಿಚಾರ ಸಂಕಿರಣ ನಡೆಯಲಿದೆ ಎಂದು ಶ್ರೀಪಾದರು ತಿಳಿಸಿದರು.ಸುದ್ದಿಗೋಷ್ಠಿಯಲ್ಲಿ ಸಮ್ಮೇಳನ ಸಂಯೋಜಕ ಪುತ್ತಿಗೆ ಮಠದ ಅಂತಾರಾಷ್ಟ್ರೀಯ ಕಾರ್ಯದರ್ಶಿ ವಿದ್ವಾನ್ ಪ್ರಸನ್ನ ಆಚಾರ್ಯ, ನಿಟ್ಟೆ ವಿಶ್ವವಿದ್ಯಾಲಯದ ಭಾರತೀಯ ಜ್ಞಾನ ವ್ಯವಸ್ಥೆ ನಿರ್ದೇಶಕ ಡಾ.ಸುಧೀರ್ರಾಜ್ ಕೆ. ಮತ್ತು ಸುಧೀರ್ ರಾವ್, ವಿದ್ವಾನ್ ಡಾ. ಗೋಪಾಲಾಚಾರ್ ಇದ್ದರು.