ಸಾರಾಂಶ
ಕನ್ನಡಪ್ರಭ ವಾರ್ತೆ ಉಡುಪಿಉಡುಪಿ ಜಿಲ್ಲೆಯು ರಾಜ್ಯದಲ್ಲಿಯೇ ಉತ್ತಮವಾದ ಜಿಲ್ಲೆಯಾಗಿದ್ದು, ಇಲ್ಲಿರುವ ಜಿಲ್ಲಾ ಮಟ್ಟದ, ತಾಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂದಿ ಉತ್ತಮ ರೀತಿಯಿಂದ ಕೂಡಿದ್ದು, ಒಂದು ತಂಡವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ ಎಂದು ನಿಕಟಪೂರ್ವ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಶ್ಲಾಘಿಸಿದ್ದಾರೆಅವರು ಬುಧವಾರ ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ನಡೆದ ತಮ್ಮ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.ಜನರು ನಿರೀಕ್ಷೆಯನ್ನು ಇಟ್ಟುಕೊಂಡು ತಮ್ಮ ಕೆಲಸ ಕಾರ್ಯಗಳನ್ನು ಮಾಡಿಕೊಳ್ಳಲು ಸರ್ಕಾರಿ ಕಚೇರಿಗಳಿಗೆ ಬರುತ್ತಿದ್ದರು ಅವರಿಗೆ ನನ್ನಿಂದ ಸಾಧ್ಯವಾದಷ್ಟು ಕೆಲಸ ಕಾರ್ಯಗಳನ್ನು ಮಾಡಿ ಕೊಟ್ಟಿದ್ದೇನೆ. ಸರ್ಕಾರಿ ಕಚೇರಿಗಳು ಜನ ಸ್ನೇಹಿಯಾಗಿ ಕಾರ್ಯನಿರ್ವಹಿಸಬೇಕು, ಸರ್ಕಾರಿ ಕೆಲಸಗಳನ್ನು ನಿಷ್ಠೆಯಿಂದ ಮಾಡಿದರೆ ಜನರು ನಮ್ಮನ್ನು ಗೌರವಿಸುತ್ತಾರೆ ಎಂದರು.ನೂತನ ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಸರ್ಕಾರಿ ಉದ್ಯೋಗವನ್ನು ನಿರ್ವಹಿಸಲು ಎಲ್ಲರಿಗೂ ಅವಕಾಶಗಳು ದೊರೆಯುವುದಿಲ್ಲ, ಅವಕಾಶ ದೊರೆತ ನಾವುಗಳು ಬದ್ಧತೆಯಿಂದ ಕೆಲಸ ಕಾರ್ಯಗಳನ್ನು ಮಾಡಬೇಕು ಸರ್ಕಾರ ಇರುವುದು ಜನಸಾಮಾನ್ಯರಿಗೋಸ್ಕರ ಅವರ ಕೆಲಸ ಕಾರ್ಯಗಳನ್ನು ಆದ್ಯತೆಯ ಮೇಲೆ ನಿಯಮಾನುಸಾರ ಮಾಡಬೇಕು ಅವಶ್ಯವಿದ್ದವರಿಗೆ ಮಾನವೀಯ ನೆಲಗಟ್ಟಿನಲ್ಲಿ ಸ್ಪಂದಿಸಬೇಕು ಎಂದವರು ಜಿಲ್ಲೆಯ ಅಭಿವೃದ್ಧಿಗೆ ಎಲ್ಲಾಧಿಕಾರಿಗಳು ಒಂದು ತಂಡವಾಗಿ ಕಾರ್ಯನಿರ್ವಹಿಸೋಣ ಎಂದರು.ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಮಾತನಾಡಿ, ನಿಕಟಪೂರ್ವ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಅವರು ತಮ್ಮ ಕರ್ತವ್ಯವನ್ನು ನಿರ್ವಹಿಸುವ ರೀತಿ, ಕಾರ್ಯವಿಧಾನ ಇತರರನ್ನು ಆಶ್ಚರ್ಯ ಗೊಳಿಸುವಂತೆ ಇರುತ್ತಿತ್ತು. ತಮ್ಮ ಜೊತೆಯಲ್ಲಿ ಕರ್ತವ್ಯ ನಿರ್ವಹಿಸಿರುವುದು ನನಗೆ ಹೆಮ್ಮೆ ಇದೆ. ಇನ್ನಷ್ಟು ಸಾರ್ವಜನಿಕ ಸೇವೆ ಮಾಡಲು ಸ್ಫೂರ್ತಿದಾಯಕವಾಗಿದೆ ಎಂದರು.ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್, ಕರಾವಳಿ ಕಾವಲು ಪಡೆಯ ಅಧೀಕ್ಷಕ ಮಿಥುನ್, ಡಿಎಫ್ಓ ಗಣಪತಿ, ಎಎಸ್ಪಿ ಹರ್ಷಂ ಪ್ರಿಯವದ, ಸಹಾಯಕ ಕಮಿಷನರ್ ರಶ್ಮಿ, ವಿವಿಧ ಜಿಲ್ಲಾ, ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.ಜಿಲ್ಲಾ ಮಟ್ಟದ ಅಧಿಕಾರಿಗಳು, ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು.
ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಸ್ವಾಗತಿಸಿದರು. ಯುವಜನ ಹಾಗೂ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರೋಷನ್ ಶೆಟ್ಟಿ ನಿರೂಪಿಸಿ ವಂದಿಸಿದರು.