ಸಾರಾಂಶ
ಉಡುಪಿ ಜಿಲ್ಲಾಡಳಿತ ವತಿಯಂದ ಶುಕ್ರವಾರ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನವನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ ಆವರಣದಲ್ಲಿ ಕಚೇರಿಯ ಹೆಣ್ಣು ಮಕ್ಕಳಿಗೆ ವಿವಿಧ ಆಟೋಟ ಸ್ಪರ್ಧೆ ಆಯೋಜಿಸಿ ಬಹುಮಾನ ನೀಡುವುದರ ಜೊತೆಗೆ ಎಲ್ಲ ಹೆಣ್ಣು ಮಕ್ಕಳಿಗೆ ಉಡುಗೊರೆಯನ್ನು ನೀಡಿ ವಿಶೇಷ ರೀತಿಯಲ್ಲಿ ಗೌರವಿಸುವ ಮೂಲಕ ವಿನೂತನವಾಘಿ ಆಚರಿಸಲಾಯಿತು.
ಕನ್ನಡಪ್ರಭ ವಾರ್ತೆ ಉಡುಪಿ
ಜಿಲ್ಲಾಡಳಿತ ವತಿಯಂದ ಶುಕ್ರವಾರ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನವನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ ಆವರಣದಲ್ಲಿ ಕಚೇರಿಯ ಹೆಣ್ಣು ಮಕ್ಕಳಿಗೆ ವಿವಿಧ ಆಟೋಟ ಸ್ಪರ್ಧೆ ಆಯೋಜಿಸಿ ಬಹುಮಾನ ನೀಡುವುದರ ಜೊತೆಗೆ ಎಲ್ಲ ಹೆಣ್ಣು ಮಕ್ಕಳಿಗೆ ಉಡುಗೊರೆಯನ್ನು ನೀಡಿ ವಿಶೇಷ ರೀತಿಯಲ್ಲಿ ಗೌರವಿಸುವ ಮೂಲಕ ವಿನೂತನವಾಘಿ ಆಚರಿಸಲಾಯಿತು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ನಾಗರತ್ನ, ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ.ಶ್ರೀರಾಮ ರಾವ್ ಕೆ., ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿ, ಹೆಣ್ಣು ಮಕ್ಕಳನ್ನು ಸಮಾಜದಲ್ಲಿ ಆತ್ಮಸ್ಥೈರ್ಯದಿಂದ ಬದುಕಲು ಮಾನಸಿಕವಾಗಿ ಸದೃಢವಾಗಿರುವಂತೆ ಬೆಳೆಸಬೇಕೆಂದು ಕೋರಿದರು.ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ನ್ಯಾಯವಾದಿ ದೀಪಾ ಕೆ. ಶೆಟ್ಟಿ, ಹೆಣ್ಣು ಮಕ್ಕಳ ರಕ್ಷಣೆಗಾಗಿ ಇರುವ ಕಾನೂನುಗಳು ಮತ್ತು ಕಾಯ್ದೆಗಳ ಬಗ್ಗೆ ಸವಿವರವಾಗಿ ತಿಳಿಸಿದರು.ಜಿಲ್ಲಾ ಕುಷ್ಟರೋಗ ನಿವಾರಣಾಧಿಕಾರಿ ಡಾ. ಲತಾ ನಾಯಕ್ ಮಾತನಾಡಿ, ಮನೆಯಲ್ಲಿ ಹೆಣ್ಣು ಮಕ್ಕಳಿಗೆ ಮಾತ್ರ ಉತ್ತಮ ನಡವಳಿಕೆಗಳ ಬಗ್ಗೆ ತಿಳುವಳಿಕೆ ನೀಡುವುದು ಮಾತ್ರವಲ್ಲ ಮನೆಯ ಗಂಡು ಮಕ್ಕಳಿಗೂ ಸಹ ಆರಂಭದಿಂದಲೂ ಉತ್ತಮ ಸಂಸ್ಕಾರವನ್ನು, ತಿಳುವಳಿಕೆ ಮತ್ತು ಸಮಾಜದಲ್ಲಿ ಹೆಣ್ಣು ಮಕ್ಕಳಿಗೆ ಗೌರವ ಹಾಗೂ ರಕ್ಷಣೆ ನೀಡುವುದರ ಬಗ್ಗೆ ತಿಳಿಹೇಳಲು ಪೋಷಕರಿಗೆ ಕರೆ ನೀಡಿದರು.ಕಾರ್ಯಕ್ರಮದಲ್ಲಿ ಜಿಲ್ಲಾ ಆರ್ಸಿಎಚ್ ಅಧಿಕಾರಿ ಡಾ. ಜ್ಯೋತ್ಸ್ನಾ ಬಿ.ಕೆ. ಹಾಗೂ ಕಚೇರಿಯ ಅಧಿಕಾರಿಗಳು ಹಾಗೂ ಎಲ್ಲಾ ಸಿಬ್ಬಂದಿ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಆರೋಗ್ಯ ಶಿಕ್ಷಣಾಧಿಕಾರಿ ಚಂದ್ರಕಲಾ ನಿರೂಪಿಸಿದರು. ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಶಿಧರ್ ಸ್ವಾಗತಿಸಿ, ವಂದಿಸಿದರು.