ಇಲ್ಲಿನ ಪೂರ್ಣಪ್ರಜ್ಞ ಕಾಲೇಜು (ಸ್ವಾಯತ್ತ) ರಸಾಯನಶಾಸ್ತ್ರ ವಿಭಾಗವು ಐಕ್ಯೂಎಸಿ ಸಹಯೋಗದಲ್ಲಿ ರಾಷ್ಟ್ರೀಯ ರಸಾಯನಶಾಸ್ತ್ರ ದಿನಾಚರಣೆಯ ಅಂಗವಾಗಿ ‘ಆಚಾರ್ಯ ಪ್ರಫುಲ್ಲ ಚಂದ್ರ ರೇ: ಆಧುನಿಕ ಭಾರತೀಯ ರಸಾಯನಶಾಸ್ತ್ರದ ಪಿತಾಮಹ’ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ ಕಾಲೇಜಿನ ಎ.ವಿ. ಸಭಾಂಗಣದಲ್ಲಿ ಆಯೋಜಿಸಿತು.

ಉಡುಪಿ: ಇಲ್ಲಿನ ಪೂರ್ಣಪ್ರಜ್ಞ ಕಾಲೇಜು (ಸ್ವಾಯತ್ತ) ರಸಾಯನಶಾಸ್ತ್ರ ವಿಭಾಗವು ಐಕ್ಯೂಎಸಿ ಸಹಯೋಗದಲ್ಲಿ ರಾಷ್ಟ್ರೀಯ ರಸಾಯನಶಾಸ್ತ್ರ ದಿನಾಚರಣೆಯ ಅಂಗವಾಗಿ ‘ಆಚಾರ್ಯ ಪ್ರಫುಲ್ಲ ಚಂದ್ರ ರೇ: ಆಧುನಿಕ ಭಾರತೀಯ ರಸಾಯನಶಾಸ್ತ್ರದ ಪಿತಾಮಹ’ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ ಕಾಲೇಜಿನ ಎ.ವಿ. ಸಭಾಂಗಣದಲ್ಲಿ ಆಯೋಜಿಸಿತು.ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಸುರತ್ಕಲ್ಲಿನ ಗೋವಿಂದ ದಾಸ ಕಾಲೇಜಿನ ಸ್ನಾತಕೋತ್ತರ ರಸಾಯನಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಕಾರ್ತಿಕ್ ಜೆ.ಎಸ್. ಅವರು ಭಾಗವಹಿಸಿ, ಆಚಾರ್ಯ ಪ್ರಫುಲ್ಲ ಚಂದ್ರ ರೇ ಅವರ ಜೀವನ, ವೈಜ್ಞಾನಿಕ ಸಾಧನೆಗಳು ಹಾಗೂ ಭಾರತೀಯ ರಸಾಯನಶಾಸ್ತ್ರ ಕ್ಷೇತ್ರಕ್ಕೆ ನೀಡಿದ ಅಮೋಘ ಕೊಡುಗೆಗಳ ಕುರಿತು ವಿದ್ಯಾರ್ಥಿಗಳಿಗೆ ಸವಿಸ್ತಾರವಾಗಿ ಉಪನ್ಯಾಸ ನೀಡಿದರು. ವಿಜ್ಞಾನ ಸಂಶೋಧನೆಯಲ್ಲಿ ಯುವಜನರು ಆಸಕ್ತಿ ಬೆಳೆಸಿಕೊಳ್ಳುವ ಅಗತ್ಯವನ್ನು ಅವರು ಒತ್ತಿ ಹೇಳಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಸಾಯನಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ಮಹೇಶ್ ಭಟ್ ವಹಿಸಿದ್ದರು. ರಸಾಯನಶಾಸ್ತ್ರ ವಿಭಾಗದ ಅಧ್ಯಾಪಕರಾದ ಡಾ. ರಂಗಸ್ವಾಮಿ ಜೆ. ಹಾಗೂ ಸುಪರ್ಣಾ ಉಪಸ್ಥಿತರಿದ್ದರು.ಕಾರ್ಯಕ್ರಮವನ್ನು ದ್ವಿತೀಯ ಬಿ.ಎಸ್‌ಸಿ. ವಿದ್ಯಾರ್ಥಿ ದರ್ಶನ್ ನಿರೂಪಿಸಿದರು. ರಸಾಯನಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ಮಹೇಶ್ ಭಟ್ ಅವರು ಅತಿಥಿಗಳನ್ನು ಸ್ವಾಗತಿಸಿದರು. ಕಾರ್ಯಕ್ರಮದ ಕೊನೆಯಲ್ಲಿ ದ್ವಿತೀಯ ಬಿ.ಎಸ್‌ಸಿ. ವಿದ್ಯಾರ್ಥಿನಿ ನವ್ಯಾ ವಂದನಾರ್ಪಣೆ ಸಲ್ಲಿಸಿದರು. ರಸಾಯನಶಾಸ್ತ್ರ ವಿಭಾಗದ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮದ ಯಶಸ್ಸಿಗೆ ಕೈಜೋಡಿಸಿದರು.