ಉಡುಪಿ: ದೆಹಲಿಯ ಜಂತರ್ ಮಂತರ್‌ನಲ್ಲಿ ನೀಟ್ ಪರೀಕ್ಷೆ ಅಕ್ರಮಗಳ ವಿರುದ್ಧ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಹೋರಾಟಗಾರ ಸೋನಂ ವಾಂಗ್ಚುಕ್ ಅವರನ್ನು ಬಲವಂತವಾಗಿ ಬಂಧಿಸಿರುವುದನ್ನು ಖಂಡಿಸಿ ಎಸ್‌ಎಫ್‌ಐ ವಿದ್ಯಾರ್ಥಿಗಳು ಹಾಗೂ ಸಿಐಟಿಯು ನೇತೃತ್ವದ ಕಟ್ಟಡ ಕಾರ್ಮಿಕರು ಪ್ರತಿಭಟನೆ ಭಾನುವಾರ ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ ನಡೆಸಿದರು.ಪ್ರತಿಭಟನೆಯನ್ನುದ್ದೇಶಿಸಿ ಎಸ್‌ಎಫ್‌ಐ ರಾಜ್ಯ ಕಾರ್ಯದರ್ಶಿ ವಿಜಯ್ ಕುಮಾರ್ ಮಾತನಾಡಿ, ನೀಟ್ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಎನ್‌ಟಿಎಯ ಪರೀಕ್ಷಾ ನಿರ್ವಹಣೆಯ ವೈಫಲ್ಯದಿಂದ ಲಕ್ಷಾಂತರ ವಿದ್ಯಾರ್ಥಿಗಳು ಸಂಕಷ್ಟಕ್ಕೆ ಸಿಲುಕಿದ್ದು ಅಲ್ಲದೇ 18 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು. ಎನ್‌ಟಿಎಯನ್ನು ರದ್ದುಗೊಳಿಸಿ, ವಿದ್ಯಾರ್ಥಿಗಳಿಗೆ ಸೂಕ್ತ ಪರಿಹಾರ ನೀಡಬೇಕು ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.


ಬಂಧನ ಅಕ್ರಮ: ವಿದ್ಯಾರ್ಥಿ ಮುಖಂಡರಾದ ಜೀವನ್ ಮಾತನಾಡಿ, ಸೋನಂ ವಾಂಗ್ಚುಕ್ ಅವರು ಶಾಂತಿಯುತ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಸಂದರ್ಭದಲ್ಲಿ ಅವರನ್ನು ಬಂಧಿಸಿರುವುದು ಪ್ರಜಾಸತ್ತಾತ್ಮಕ ಹಕ್ಕುಗಳ ಮೇಲಿನ ದಾಳಿಯಾಗಿದ್ದು, ಭಿನ್ನಾಭಿಪ್ರಾಯಗಳನ್ನು ಪೊಲೀಸ್ ಬಲದಿಂದ ಹತ್ತಿಕ್ಕುವ ಕ್ರಮವನ್ನು ಕೇಂದ್ರ ಸರ್ಕಾರ ತಕ್ಷಣ ನಿಲ್ಲಿಸಬೇಕು ಎಂದು ಒತ್ತಾಯಿಸಿದರು. ಎಸ್ ಎಫ್ ಐ ಮಾಜಿ ಮುಖಂಡರಾದ ಕವಿರಾಜ್ ಎಸ್ ಕಾಂಚನ್ ಸ್ವಾಗತಿಸಿ ವಂದಿಸಿದರು.