ಕನ್ನಡಪ್ರಭ ವಾರ್ತೆ ಹಾಸನ
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಒಬಿಸಿ ವರ್ಗಗಳಿಗೆ ಘೋಷಿಸಿರುವ ಶೇ. 56 ಮೀಸಲಾತಿಯನ್ನು ಸಂವಿಧಾನಬದ್ಧವಾಗಿ ಜಾರಿಗೆ ತರಲು ಕೇಂದ್ರ ಸರ್ಕಾರ ಅದನ್ನು ಭಾರತ ಸಂವಿಧಾನದ 9ನೇ ಶೆಡ್ಯೂಲ್ಗೆ ಸೇರಿಸಬೇಕು ಇಲ್ಲವಾದರೇ ಹೋರಾಟಕ್ಕೆ ಇಳಿಯಬೇಕಾಗುತ್ತದೆ ಎಂದು ಮಾಜಿ ಸಂಸದ ವಿ. ಎಸ್. ಉಗ್ರಪ್ಪ ಎಚ್ವರಿಸಿದರು.ಪತ್ರಿಕಾಗೋಷ್ಠಿಯಲ್ಲಿ ಶನಿವಾರ ಮಾತನಾಡಿದ ಅವರು, ಕರ್ನಾಟಕ ಸರ್ಕಾರ 2022ರಲ್ಲಿ ಎಸ್ಸಿ, ಎಸ್ಟಿ ಹಾಗೂ ಒಬಿಸಿ ವರ್ಗಗಳ ಮೀಸಲಾತಿಯನ್ನು ಕ್ರಮವಾಗಿ ಶೇ.17, ಶೇ.7 ಹಾಗೂ ಶೇ. 32ಕ್ಕೆ ಹೆಚ್ಚಿಸಿ ಕಾಯ್ದೆ ಜಾರಿಗೊಳಿಸಿತ್ತು. ಆದರೆ ಈ ಕಾಯ್ದೆಗೆ ನ್ಯಾಯಾಲಯಗಳಿಂದ ತಡೆ ಬಂದಿದ್ದು, ರಾಜ್ಯ ಸರ್ಕಾರ ಇದನ್ನು ತೆರವುಗೊಳಿಸಲು ಗಂಭೀರವಾಗಿ ಮುಂದಾಗಬೇಕು ಎಂದು ಒತ್ತಾಯಿಸಿದರು. ಶೇ.56 ಮೀಸಲಾತಿಯನ್ನು ಊರ್ಜಿತಗೊಳಿಸಲು ರಾಜ್ಯ ವಿಧಾನಮಂಡಲದಲ್ಲಿ ಸರ್ವಾನುಮತದ ನಿರ್ಣಯ ಅಂಗೀಕರಿಸಿರುವುದು ಸ್ವಾಗತಾರ್ಹ. ಈಗ ರಾಜ್ಯ ಸರ್ಕಾರ ಸರ್ವಪಕ್ಷಗಳ ನಿಯೋಗವನ್ನು ದೆಹಲಿಗೆ ಕರೆದೊಯ್ದು ಪ್ರಧಾನಿ ಅವರನ್ನು ಭೇಟಿ ಮಾಡಿ ಮೀಸಲಾತಿ ಕಾಯ್ದೆಯನ್ನು 9ನೇ ಶೆಡ್ಯೂಲ್ಗೆ ಸೇರಿಸುವಂತೆ ಒತ್ತಾಯಿಸಬೇಕು ಎಂದರು.ಸಂವಿಧಾನದ ಅನುಚ್ಛೇದ 15 ಹಾಗೂ 16ಕ್ಕೆ ತಿದ್ದುಪಡಿ ತಂದು ಎಸ್ಸಿ ಹಾಗೂ ಎಸ್ಟಿ ವರ್ಗಗಳಿಗೆ ಜನಸಂಖ್ಯೆ ಆಧಾರಿತ ಮೀಸಲಾತಿ ನೀಡಬೇಕು ಎಂದು ಆಗ್ರಹಿಸಿದರು. ತಮಿಳುನಾಡಿನಲ್ಲಿ ಶೇ. 69 ಮೀಸಲಾತಿ ಜಾರಿಯಲ್ಲಿದ್ದು, ಕರ್ನಾಟಕದಲ್ಲೂ ಶೇ.56 ಮೀಸಲಾತಿ ಜಾರಿಯಾಗಬೇಕು ಎಂದು ಹೇಳಿದರು.1991ರಲ್ಲಿ ವಾಲ್ಮೀಕಿ ಹಾಗೂ ಅದರ ಪರ್ಯಾಯ ಜಾತಿಗಳನ್ನು ಎಸ್ಟಿ ವರ್ಗಕ್ಕೆ ಸೇರಿಸುವಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ರಾಮಕೃಷ್ಣ ಹೆಗಡೆ ಹಾಗೂ ಚಂದ್ರಶೇಖರ್ ಅವರ ಪಾತ್ರವನ್ನು ಸ್ಮರಿಸಿದ ಉಗ್ರಪ್ಪ, ಅವರಿಗೆ ಧನ್ಯವಾದ ಸಲ್ಲಿಸಿದರು. ದೇವೇಗೌಡರು ಹಾಗೂ ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ ಅವರು ಪ್ರಧಾನಿ ಮೋದಿ ಅವರ ಗಮನಕ್ಕೆ ಈ ವಿಚಾರ ತಂದು ಬೇಡಿಕೆ ಈಡೇರಲು ಸಹಕರಿಸಬೇಕು ಎಂದು ಮನವಿಮಾಡಿದರು.ಬಿಜೆಪಿ ನಾಯಕರು ಕೂಡ ಮೀಸಲಾತಿ ಹಂಚಿಕೆಯಲ್ಲಿ ಎಸ್ಸಿ, ಎಸ್ಟಿ ಸಮುದಾಯಗಳಿಗೆ ಅನ್ಯಾಯವಾಗಿದೆ ಎಂದು ಹೇಳುತ್ತಿದ್ದಾರೆ. ಆದರೆ ಕೇವಲ ಹೇಳಿಕೆ ನೀಡುವುದರಿಂದ ಪ್ರಯೋಜನವಾಗುವುದಿಲ್ಲ. ಪ್ರಧಾನಿ ಮೇಲೆ ಹೇರುವ ಕೆಲಸ ಮಾಡಬೇಕು ಎಂದು ಹೇಳಿದರು. ನಮ್ಮ ಬೇಡಿಕೆಗೆ ಸ್ಪಂದನೆ ಸಿಗದಿದ್ದರೆ ಅಹಿಂಸಾತ್ಮಕ ಹೋರಾಟ ಆರಂಭಿಸುತ್ತೇವೆ. ನಮ್ಮ ತಾಳ್ಮೆ ಪರೀಕ್ಷಿಸಬೇಡಿ ಎಂದು ಉಗ್ರಪ್ಪ ಸರ್ಕಾರಗಳಿಗೆ ಎಚ್ಚರಿಕೆ ನೀಡಿದರು.ಪತ್ರಿಕಾಗೋಷ್ಠಿಯಲ್ಲಿ ಮಹಿಳಾ ಕರ್ನಾಟಕ ವಾಲ್ಮೀಕಿ ಮಹಾಸಭಾದ ರಾಜ್ಯಾಧ್ಯಕ್ಷ ಟಿ. ಆರ್. ತುಳಸಿರಾಮ್, ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಜಯಶ್ರೀ, ಜಿಲ್ಲಾ ಘಟಕದ ಅಧ್ಯಕ್ಷ ಎನ್. ಟಿ. ಶ್ರೀನಿವಾಸ್, ಜಿಲ್ಲಾಧ್ಯಕ್ಷೆ ರೇಖಾ ಜಯಣ್ಣ, ಯುವ ಘಟಕದ ರಾಜ್ಯ ಉಪಾಧ್ಯಕ್ಷ ಬಿ.ಎಸ್. ರವಿಕುಮಾರ್, ಗೌರವಾಧ್ಯಕ್ಷ ಹನುಮಪ್ಪ, ಯುವ ಘಟಕದ ಜಿಲ್ಲಾಧ್ಯಕ್ಷ ಬಿ.ಎಸ್. ವಿರೂಪಾಕ್ಷ ಇತರರು ಉಪಸ್ಥಿತರಿದ್ದರು.