ಸಾರಾಂಶ
ಭಾರತ ಚುನಾವಣಾ ಆಯೋಗದ ಅಧೀನ ಕಾರ್ಯದರ್ಶಿ ಬ್ರಜೇಶ್ ಕುಮಾರ್ ಚುನಾವಣಾ ಶಾಖೆ ಹಾಗೂ ಜಿಲ್ಲೆಯ ತಾಲೂಕುಗಳಲ್ಲಿ ಚುನಾವಣಾ ಶಾಖೆಗಳಿಗೆ ಇತ್ತೀಚೆಗೆ ಭೇಟಿ ನೀಡಿ ವೀಕ್ಷಿಸಿದರು.
ಕನ್ನಡಪ್ರಭ ವಾರ್ತೆ ಮಡಿಕೇರಿ
ಭಾರತ ಚುನಾವಣಾ ಆಯೋಗದ ಅಧೀನ ಕಾರ್ಯದರ್ಶಿ ಬ್ರಿಜೇಶ್ ಕುಮಾರ್ ಹಾಗೂ ಸಹಾಯಕ ಸೆಕ್ಷನ್ ಅಧಿಕಾರಿ ಮನೀಶ್ ಕುಮಾರ್ ಅವರು ನಗರದ ಚುನಾವಣಾ ಶಾಖೆ ಹಾಗೂ ಜಿಲ್ಲೆಯ ತಾಲೂಕುಗಳಲ್ಲಿರುವ ಚುನಾವಣಾ ಶಾಖೆಗಳಿಗೆ ಇತ್ತೀಚೆಗೆ ಭೇಟಿ ನೀಡಿ ವೀಕ್ಷಿಸಿದರು.ಬಳಿಕ ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಬಿಎಲ್ಒಗಳು ಜೊತೆ ಚುನಾವಣೆ ಸಂಬಂಧಿಸಿದಂತೆ ಹಲವು ಮಾಹಿತಿ ಪಡೆದರು.
ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಆರಂಭವಾಗಲಿದ್ದು, ಬಿಎಲ್ಒ ನಮೂನೆ-6, 7 ಮತ್ತು 8 ರ ಬಗ್ಗೆ ಸ್ಥಳೀಯರಿಗೆ ಮಾಹಿತಿ ನೀಡಿ ಮತದಾರರ ಗುರುತಿನ ಚೀಟಿಯ ಮಹ್ವತದ ಬಗ್ಗೆ ಮಾಹಿತಿ ನೀಡುವಂತಾಗಬೇಕು ಎಂದು ಸೂಚಿಸಿದರು.18 ವರ್ಷ ಮೇಲ್ಪಟ್ಟ ಎಲ್ಲರೂ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮಾಡಿ ಮತದಾರರ ಗುರುತಿನ ಚೀಟಿ ಪಡೆಯುವಂತಾಗಬೇಕು. ಆ ನಿಟ್ಟಿನಲ್ಲಿ ಬಿಎಲ್ಒಗಳು ಹೆಚ್ಚಿನ ಜಾಗೃತಿ ಮೂಡಿಸಬೇಕು ಎಂದರು.
ಅರ್ಹರೆಲ್ಲರೂ ಮತದಾರರ ಗುರುತಿನ ಚೀಟಿ ಪಡೆಯುವುದರ ಜೊತೆಗೆ, ಯಾರಾದರೂ ನಿಧನ ಹೊಂದಿದ್ದಲ್ಲಿ ಮತದಾರರ ಪಟ್ಟಿಯಿಂದ ಹೆಸರು ತೆಗೆದು ಹಾಕುವುದು, ಸ್ಥಳಾಂತರವಾಗಿದ್ದಲ್ಲಿ ಮಾಹಿತಿ ನೀಡುವುದು ಹೀಗೆ ಚುನಾವಣೆಗೆ ಸಂಬಂಧಿಸಿದಂತೆ ನಿಖರ ಮತ್ತು ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸಬೇಕು ಎಂದು ನಿರ್ದೇಶನ ನೀಡಿದರು.ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ ಅವರು ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಮತ್ತಿತರ ಬಗ್ಗೆ ಹಲವು ನಿರ್ದೇಶನ ನೀಡಿದರು.
ಸಭೆಯಲ್ಲಿ ನೋಡಲ್ ಅಧಿಕಾರಿ ಬಿ.ಬಸಪ್ಪ, ಬಿಎಲ್ಒಗಳು, ಕಂದಾಯ ನಿರೀಕ್ಷಕರು ಇತರರು ಇದ್ದರು. ಚುನಾವಣೆ ಶಾಖೆಗೆ ಭೇಟಿ ಸಂದರ್ಭದಲ್ಲಿ ತಹಸೀಲ್ದಾರರಾದ ಪ್ರವೀಣ್ ಕುಮಾರ್, ಕಿರಣ್ ಗೌರಯ್ಯ, ಕೃಷ್ಣಮೂರ್ತಿ, ಮೋಹನ್ ಕುಮಾರ್, ಶ್ರೀಧರ ಇತರರು ಇದ್ದರು.