ಸಾರಾಂಶ
ಬಾಗಲಕೋಟೆ ಜಿಲ್ಲೆಯ ಜಮಖಂಡಿ ಹಾಗೂ ರಬಕವಿ-ಬನಹಟ್ಟಿ ತಾಲೂಕುಗಳಲ್ಲಿ ನಡೆಯುತ್ತಿರುವ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ವಿವಿಧ ಕಾಮಗಾರಿಗಳ ಸ್ಥಳಕ್ಕೆ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಅನಿರೀಕ್ಷಿತವಾಗಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕನ್ನಡಪ್ರಭ ವಾರ್ತೆ ಬಾಗಲಕೋಟೆ
ಜಿಲ್ಲೆಯ ಜಮಖಂಡಿ ಹಾಗೂ ರಬಕವಿ-ಬನಹಟ್ಟಿ ತಾಲೂಕುಗಳಲ್ಲಿ ನಡೆಯುತ್ತಿರುವ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ವಿವಿಧ ಕಾಮಗಾರಿಗಳ ಸ್ಥಳಕ್ಕೆ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಅನಿರೀಕ್ಷಿತವಾಗಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಜಮಖಂಡಿ ತಾಲೂಕಿನ ಸೈದಾಪೂರ ಗ್ರಾಮದ ಬಹುಗ್ರಾಮ ಕುಡಿಯುವ ನೀರಿನ ಘಟಕಕ್ಕೆ ಭೇಟಿ ನೀಡಿ ವೀಕ್ಷಣೆ ಮಾಡಿದರು. ಮಹಾಲಿಂಗಪುರದ ಕೆ.ಎಚ್ಡಿಸಿ ಕಾಲೋನಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 2 ಕೊಠಡಿ ನಿರ್ಮಾಣ ಕಾಮಗಾರಿ ಪರಿಶೀಲಿಸಿ ನಿಗದಿತ ಅವಧಿಯಲ್ಲಿ ಗುಣಮಟ್ಟದ ಕಾಮಗಾರಿಗೆ ಆದ್ಯತೆ ನೀಡಲು ಸೂಚಿಸಿದರು. ಚಿಮ್ಮಡ ಗ್ರಾಮದ ಸರಕಾರಿ ಪ್ರಾಥಮಿಕ ಶಾಲೆಯ ಶೌಚಾಲಯ ನಿರ್ಮಾಣ ಕಾಮಗಾರಿ, ಗುರುವ ತೋಟದ ಶಾಲೆಯಲ್ಲಿ ಮಧ್ಯಾಹ್ನದ ಬಿಸಿ ಊಟದ ದಾಸ್ತಾನು ಕೊಠಡಿಗೆ ತೆರಳಿ ಪರಿಶೀಲನೆ ನಡೆಸಿದರು.
ಹನಗಂಡಿ ತೋಟ ನಂ.1 ಶಾಲೆಯಲ್ಲಿ ಶೌಚಾಲಯ ಕಾಮಗಾರಿ ವೀಕ್ಷಣೆ, ಗ್ರಾಮದಲ್ಲಿ ನಿರ್ಮಿಸಲಾಗುತ್ತಿರುವ ಚರಂಡಿ ಕಾಮಗಾರಿ, ಯಲ್ಲಟ್ಟಿ ಗ್ರಾಮದ ಕುಡಿಯುವ ನೀರಿನ ಪೈಪಲೈನ್ ಕಾಮಗಾರಿ, ಕುಲಹಳ್ಳಿ ಚಾಕವೆಲ್ ಕಾಮಗಾರಿ, ಚಿಮ್ಮಡದ ಮೇಲ್ಪಟ್ಟದ ನೀರು ಸಂಗ್ರಹಾಲಯ ಕಾಮಗಾರಿ, ಹನಗಂಡಿ ಅಮೃತ ಸರೋವರ ಕಾಮಗಾರಿ, ಹಳಿಂಗಳಿ ಸಿಸಿ ರಸ್ತೆ ಕಾಮಗಾರಿ ವೀಕ್ಷಣೆ ಮಾಡಿದರು. ಶಾಲೆಗಳಿಗೆ ಭೇಟಿ ನೀಡಿದ ಸಂದರ್ಭಗಳಲ್ಲಿ ಮಕ್ಕಳ ಹಾಜರಾತಿ, ಮಕ್ಕಳಿಗೆ ನೀಡುತ್ತಿರುವ ಆಹಾರ ಪದಾರ್ಥ ಪರಿಶೀಲಿಸಿ ಗುಣಮಟ್ಟದ ಆಹಾರ ತಯಾರಿಸಿ ಮಕ್ಕಳಿಗೆ ನೀಡುವಂತೆ ಸೂಚಿಸಿದರು.ಈ ವೇಳೆ ರಬಕವಿ-ಬನಹಟ್ಟಿ ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿ ಸಿದ್ದಪ್ಪ ಪಾಟಿಹಾಳ, ಜಮಖಂಡಿ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಸಂಜೀವ ಜುನ್ನೂರ, ಜಮಖಂಡಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರ ಜೆ.ಟಿ. ಶೆಟ್ಟಿ, ಪಂಚಾಯತ್ ರಾಜ್ ಸಹಾಯಕ ಕಾರ್ಯಪಾಲಕ ಅಭಿಯಂತರ ಜಗದೀಶ ನಾಡಗೌಡ ಸೇರಿದಂತೆ ಇತರರು ಇದ್ದರು.