ಸಾರಾಂಶ
ಕನ್ನಡಪ್ರಭ ವಾರ್ತೆ, ತುಮಕೂರುಶ್ರೀಕ್ಷೇತ್ರ ಧರ್ಮಸ್ಥಳದ ಹೆಸರಿಗೆ ಮಸಿ ಬಳಿಯಲು ಯತ್ನಿಸಿ, ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರ ಬಗ್ಗೆ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿರುವವರನ್ನು ಕೂಡಲೇ ಬಂಧಿಸಿ ತನಿಖೆಗೆ ಒಳಸಪಡಿಸಬೇಕು ಎಂದು ಆಗ್ರಹಿಸಿ ಬುಧವಾರ ವಿವಿಧ ಸಮುದಾಯಗಳ ಜನರು ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.ನಗರದ ಟೌನ್ಹಾಲ್ ವೃತ್ತದಿಂದ ಎಂ.ಜಿ.ರಸ್ತೆ, ಡಾ.ಬಿ.ಆರ್.ಅಂಬೇಡ್ಕರ್ ರಸ್ತೆಯ ಮೂಲಕ ಜಿಲ್ಲಾಧಿಕಾರಿಗಳ ಕಚೇರಿ ತಲುಪಿದ ನೂರಾರು ಭಕ್ತಾದಿಗಳು, ಧರ್ಮಸ್ಥಳದ ಹೆಸರಿಗೆ ಚ್ಯುತಿ ಉಂಟು ಮಾಡಲು ಯತ್ನಿಸುತ್ತಿರುವ ಎಲ್ಲಾ ಪಟ್ಟಭದ್ರ ಹಿತಾಸಕ್ತಿಗಳ ವಿರುದ್ದ ಕಾನೂನು ಕ್ರಮ ಜರುಗಿಸಬೇಕೆಂದು ಒತ್ತಾಯಿಸಿ ಪ್ರತಿಭಟನಾ ಮೆರವಣಿಗೆ ನಡೆಸಿದರು.ಈ ವೇಳೆ ಮಾತನಾಡಿದ ಅಯ್ಯಪ್ಪಸ್ವಾಮಿ ಸೇವಾ ಸಮಾಜಂನ ರಾಷ್ಟ್ರೀಯ ಅಧ್ಯಕ್ಷ ಟಿ.ಬಿ.ಶೇಖರ್, ಕಳೆದ 25-30 ವರ್ಷಗಳಿಂದಲೂ ಧರ್ಮಸ್ಥಳದ ಪರಂಪರೆಯ ಮೇಲೆ ನಿರಂತರವಾಗಿ ದಾಳಿ ನಡೆಸಲಾಗುತ್ತಿದೆ. ಧರ್ಮಸ್ಥಳದ ಹೆಸರು ಹಾಳು ಮಾಡಲು ಇನ್ನಿಲ್ಲದ ಪ್ರಯತ್ನವನ್ನು ಕೆಲವು ಪಟ್ಟಭದ್ರ ಹಿತಾಸಕ್ತಿಗಳು ನಡೆಸುತ್ತಿವೆ ಎಂದರು. ತನಿಖೆಗೆ ಮುಕ್ತವಾದ ಅವಕಾಶ ನೀಡುತ್ತಿದ್ದರೂ ಸಹ ಅವರ ಮೇಲೆ ನಿರಂತರವಾಗಿ ಹುಸಿ ಆರೋಪಗಳನ್ನು ಮಾಡಿ ತೇಜೋವಧೆಗೆ ಪ್ರಯತ್ನಿಸಲಾಗುತ್ತಿದೆ. ಹಾಗಾಗಿ ಧರ್ಮಸ್ಥಳದ ಭಕ್ತಾದಿಗಳು ಇಂದು ಬೀದಿಗಿಳಿದು ಹೋರಾಟಕ್ಕೆ ನಿಂತಿದ್ದಾರೆ. ಸರಕಾರ ಕೂಡಲೇ ಸುಳ್ಳು ಸುದ್ದಿ ಹರಡುತ್ತಿರುವ ಜನರ ವಿರುದ್ದ ಶಿಸ್ತು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.
ಮಾಜಿ ಸಚಿವ ಎಸ್.ಶಿವಣ್ಣ ಮಾತನಾಡಿ, ಶ್ರೀಕ್ಷೇತ್ರ ಧರ್ಮಸ್ಥಳ ಸಮಸ್ತ ಹಿಂದೂಗಳ ಪಾಲಿಗೆ ಪವಿತ್ರ ಕ್ಷೇತ್ರವಾಗಿದೆ. ಧರ್ಮಸ್ಥಳದ ಬಗ್ಗೆ ಮಾಡುತ್ತಿರುವ ಅಪಪ್ರಚಾರ ನಿಲ್ಲಬೇಕು ಎಂದು ಆಗ್ರಹಿಸಿದರು.ಪತ್ರಕರ್ತ ಆರ್.ಕಾಮರಾಜು ಮಾತನಾಡಿ, ಇಡೀ ವಿಶ್ವದಲ್ಲಿಯೇ ಧರ್ಮಸ್ಥಳ ಎಂಬ ಹೆಸರು ಭಕ್ತಿಗೆ ಹೆಸರಾಗಿರುವ ಪುಣ್ಯಕ್ಷೇತ್ರವಾಗಿದೆ. ಶಿಸ್ತು ಬದ್ಧ ಆಡಳಿತ ಮತ್ತು ಭಕ್ತರಿಗೆ ಸಕಲ ಸೌಕರ್ಯಗಳನ್ನು ನೀಡಿ, ಸ್ವಾಮಿಯ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಕೆಲ ಯೂಟ್ಯೂಬ್ ವಿಡಿಯೋ ಮಾಡುವವರು ಹುನ್ನಾರ ನಡೆಸಿ, ಅಪಪ್ರಚಾರ ಮಾಡುತ್ತಿದ್ದಾರೆ. ಭಕ್ತರ ಧಾರ್ಮಿಕ ನಂಬಿಕೆಯನ್ನು ಹೊಡೆದು ಹಾಕಲು ಪ್ರಯತ್ನಿಸಿದ್ದಾರೆ. ಸರಕಾರ ಕೂಡಲೇ ಇಂತಹ ಚುಟವಟಿಕೆಯಲ್ಲಿ ತೊಡಗಿರುವ ಯುಟ್ಯೂಬರ್ ಸಮೀರ್. ಎಂ.ಡಿ, ಗಿರೀಶ್ ಮಟ್ಟಣ್ಣನವರ್,ಮಹೇಶ್ ತಿಮ್ಮರೋಡಿ ಅವರುಗಳನ್ನು ಬಂಧಿಸಿ, ತನಿಖೆಗೆ ಒಳಪಡಿಸಿದರೆ ಸತ್ಯ ಹೊರಬರಲಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಪ್ರಬಲ ಹೋರಾಟ ನಡೆಯಲಿದೆ ಎಂದರು. ಬೆಳ್ಳಾವೆಯ ಶ್ರೀಕಾರದ ವೀರ ಬಸವಸ್ವಾಮೀಜಿ ಮಾತನಾಡಿ, ಪುಣ್ಯಕ್ಷೇತ್ರಗಳ ಬಗ್ಗೆ ಮಾಡುವ ಅಪಪ್ರಚಾರವನ್ನು ನಾವೆಲ್ಲರೂ ಖಂಡಿಸಬೇಕಾಗಿದೆ. ಮಠ, ಮಾನ್ಯಗಳು ಒಂದು ಸರಕಾರಕ್ಕೆ ಪರ್ಯಾಯವಾಗಿ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿವೆ. ಇದನ್ನು ಸಹಿಸಲಾಗದೆ ಕೆಲವರು, ಶ್ರೀಕ್ಷೇತ್ರದ ಧರ್ಮಸ್ಥಳದ ಬಗ್ಗೆ ಅಪಪ್ರಚಾರದಲ್ಲಿ ತೊಡಗಿದ್ದಾರೆ. ಇದರ ವಿರುದ್ದ ನಾವೆಲ್ಲರೂ ಒಗ್ಗೂಡಿ ಹೋರಾಟ ನಡೆಸುವ ಮೂಲಕ ಸ್ವಹಿತಾಸಕ್ತಿಯ ಜನರ ಸುಳ್ಳು ಆರೋಪಗಳಿಗೆ ತಕ್ಕ ಉತ್ತರ ನೀಡಬೇಕಾಗಿದೆ ಎಂದು ಸ್ವಾಮೀಜಿ ತಿಳಿಸಿದರು.ಧರ್ಮಸ್ಥಳ ಭಕ್ತರಲ್ಲಿ ಒಬ್ಬರಾದ ವಿಜಯಭಾಸ್ಕರ್ ಮಾತನಾಡಿದರು. ಪ್ರತಿಭಟನೆಯಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಭಕ್ತವೃಂದ ಹಾಗೂ ವಿವಿಧ ಸಂಘಟನೆಗಳ ಮುಖಂಡರುಗಳು, ಸಾರ್ವಜನಿಕರು, ಮಹಿಳೆಯರು, ವಿದ್ಯಾರ್ಥಿನಿಯರುಗಳು ಪಾಲ್ಗೊಂಡಿದ್ದರು.