ಕೆಆರ್ ಎಸ್ ನಿಂದ ನದಿಗೆ ೮೦ ಸಾವಿರ ಕ್ಯುಸೆಕ್‌ವರೆಗೆ ನೀರು ಬಿಡುಗಡೆ

| Published : Jun 27 2025, 12:48 AM IST

ಕೆಆರ್ ಎಸ್ ನಿಂದ ನದಿಗೆ ೮೦ ಸಾವಿರ ಕ್ಯುಸೆಕ್‌ವರೆಗೆ ನೀರು ಬಿಡುಗಡೆ
Share this Article
  • FB
  • TW
  • Linkdin
  • Email

ಸಾರಾಂಶ

ಹೊರಹರಿವಿನ ಪ್ರಮಾಣವನ್ನು ಹೆಚ್ಚಿಸುವುದು ಅನಿವಾರ್ಯವಾಗಿದೆ. ಆ ಹಿನ್ನೆಲೆಯಲ್ಲಿ ಗುರುವಾರ (ಜೂ.೨೬) ಸಂಜೆ ೬ ಗಂಟೆ ಸಮಯಕ್ಕೆ ಅಣೆಕಟ್ಟೆಯ ಹೊರಹರಿವಿನ ಪ್ರಮಾಣವನ್ನು ೫೦ ಸಾವಿರ ಕ್ಯುಸೆಕ್‌ನಿಂದ ೮೦ ಸಾವಿರ ಕ್ಯುಸೆಕ್‌ಗೆ ಹೆಚ್ಚಿಸುವ ಸಾಧ್ಯತೆಗಳಿರುವುದಾಗಿ ಜಿಲ್ಲಾಧಿಕಾರಿ ಡಾ.ಕುಮಾರ ಎಚ್ಚರಿಕೆ ನೀಡಿದ್ದಾರೆ.

ಕನ್ನಡಪ್ರಭ ವಾರ್ತೆ ಮಂಡ್ಯ

ಕಾವೇರಿ ಜಲಾನಯನ ಪ್ರದೇಶದಲ್ಲಿ ನಿರಂತರ ಮಳೆಯಾಗುತ್ತಿರುವುದರಿಂದ ಭಾರೀ ಪ್ರಮಾಣದ ನೀರು ಹರಿದುಬರುತ್ತಿದೆ, ಶ್ರೀರಂಗಪಟ್ಟಣ ತಾಲೂಕಿನ ಕೃಷ್ಣರಾಜಸಾಗರ ಜಲಾಶಯದಿಂದ ೫೦ ಸಾವಿರ ಕ್ಯುಸೆಕ್‌ನಿಂದ ೮೦ ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಯಬಿಡಲಾಗುವುದು ಎಂದು ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.

ಅಣೆಕಟ್ಟೆಯ ಗರಿಷ್ಠಮಟ್ಟ ೧೨೪.೮೦ ಅಡಿ ದಾಖಲಾಗಿದ್ದು, ಗುರುವಾರ ಅಣೆಕಟ್ಟೆಯಲ್ಲಿ ೧೨೦.೯೦ ಅಡಿ ನೀರು ದಾಖಲಾಗಿದ್ದು, ೩೩೩೧೪ ಕ್ಯುಸೆಕ್ ನೀರು ಜಲಾಶಯಕ್ಕೆ ಹರಿದುಬರುತ್ತಿದ್ದು, ೩೩,೦೭೬ ಕ್ಯುಸೆಕ್ ನೀರನ್ನು ಹೊರಬಿಡಲಾಗುತ್ತಿದೆ. ಅಣೆಕಟ್ಟೆಯಲ್ಲಿ ೩೫.೮೧೪ ಟಿಎಂಸಿಯಷ್ಟು ನೀರು ಸಂಗ್ರಹವಾಗಿದೆ.

ಕಾವೇರಿ ಕಣಿವೆ ವ್ಯಾಪ್ತಿಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೆಆರ್‌ಎಸ್ ಜಲಾಶಯದ ಒಳಹರಿವಿನ ಪ್ರಮಾಣ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ. ಆ ಹಿನ್ನೆಲೆಯಲ್ಲಿ ಹೊರಹರಿವಿನ ಪ್ರಮಾಣವನ್ನು ಹೆಚ್ಚಿಸುವುದು ಅನಿವಾರ್ಯವಾಗಿದೆ. ಆ ಹಿನ್ನೆಲೆಯಲ್ಲಿ ಗುರುವಾರ (ಜೂ.೨೬) ಸಂಜೆ ೬ ಗಂಟೆ ಸಮಯಕ್ಕೆ ಅಣೆಕಟ್ಟೆಯ ಹೊರಹರಿವಿನ ಪ್ರಮಾಣವನ್ನು ೫೦ ಸಾವಿರ ಕ್ಯುಸೆಕ್‌ನಿಂದ ೮೦ ಸಾವಿರ ಕ್ಯುಸೆಕ್‌ಗೆ ಹೆಚ್ಚಿಸುವ ಸಾಧ್ಯತೆಗಳಿರುವುದಾಗಿ ಜಿಲ್ಲಾಧಿಕಾರಿ ಡಾ.ಕುಮಾರ ಎಚ್ಚರಿಕೆ ನೀಡಿದ್ದಾರೆ.

ಕಾವೇರಿ ನದಿ ಪಾತ್ರದಲ್ಲಿನ ಸಾರ್ವಜನಿಕರು ಸ್ವಯಂ ಮುಂಜಾಗ್ರತೆ ವಹಿಸುವುದು, ನದಿಪಾತ್ರ ಅಥವಾ ತಗ್ಗು ಪ್ರದೇಶಗಳಿಗೆ ಭೇಟಿ ನೀಡುವುದನ್ನು ಕಡ್ಡಾಯವಾಗಿ ನಿಷೇಧಿಸಿದೆ. ನದಿಪಾತ್ರ ಮತ್ತು ತಗ್ಗುಪ್ರದೇಶದ ರೈತರು ಕೃಷಿ ಚಟುವಟಿಕೆಗಳಿಗೆ ತೆರಳದಂತೆ, ಜಾನುವಾರುಗಳನ್ನು ಬಿಡದಂತೆ ಸೂಚಿಸಿದೆ. ಪ್ರವಾಸಿಗರು ಪ್ರೇಕ್ಷಣೀಯ ಸ್ಥಳಗಳಿಗೆ ಭೇಟಿ ನೀಡುವುದು, ನದಿಯಲ್ಲಿ ಈಜುವುದು, ಸೆಲ್ಫಿ ತೆಗೆದುಕೊಳ್ಳುವುದನ್ನು ಕಡ್ಡಾಯವಾಗಿ ನಿಷೇಧಿಸಿದೆ. ತಾಲೂಕು ಆಡಳಿತದ ವತಿಯಿಂದ ಈಗಾಗಲೇ ಪ್ರವಾಹ ಮುನ್ನೆಚ್ಚರಿಕಾ ಕ್ರಮವಾಗಿ ಕೈಗೊಂಡಿರುವ ಕ್ರಮಗಳ ಬಗ್ಗೆ ವ್ಯಾಪಕ ಪ್ರಚಾರ ಹಾಗೂ ಅಪಾಯಕಾರಿ ಸ್ಥಳಗಳಲ್ಲಿ ಅಳವಡಿಸಿರುವ ಸೂಚನಾ ಫಲಕಗಳನ್ನು ಗಮನಿಸುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.