ಹಾಸ್ಟೆಲ್ ಅವ್ಯವಸ್ಥೆಗೆ ಉಪಲೋಕಾಯುಕ್ತರ ಅಸಮಾಧಾನ

| Published : Oct 09 2023, 12:45 AM IST

ಹಾಸ್ಟೆಲ್ ಅವ್ಯವಸ್ಥೆಗೆ ಉಪಲೋಕಾಯುಕ್ತರ ಅಸಮಾಧಾನ
Share this Article
  • FB
  • TW
  • Linkdin
  • Email

ಸಾರಾಂಶ

ಕೊಪ್ಪಳ ನಗರದ ವಿವಿಧ ಹಾಸ್ಟೆಲ್‌ಗಳಿಗೆ ಅನಿರೀಕ್ಷಿತ ಭೇಟಿ ನೀಡಿದ ಉಪ ಲೋಕಾಯುಕ್ತ ನ್ಯಾ.ಕೆ.ಎನ್. ಫಣೀಂದ್ರ ಅಲ್ಲಿಯ ಅವ್ಯವಸ್ಥೆ ಕಂಡು ತೀವ್ರ ಅಸಮಧಾನ ವ್ಯಕ್ತಪಡಿಸಿದ್ದಾರೆ. ಇಂಥ ವ್ಯವಸ್ಥೆ ಸುಧಾರಣೆಗೆ ಕ್ರಮ ವಹಿಸುವಂತೆ ಹಾಜರಿದ್ದ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಕೊಪ್ಪಳ: ನಗರದ ವಿವಿಧ ಹಾಸ್ಟೆಲ್‌ಗಳಿಗೆ ಅನಿರೀಕ್ಷಿತ ಭೇಟಿ ನೀಡಿದ ಉಪ ಲೋಕಾಯುಕ್ತ ನ್ಯಾ.ಕೆ.ಎನ್. ಫಣೀಂದ್ರ ಅಲ್ಲಿಯ ಅವ್ಯವಸ್ಥೆ ಕಂಡು ತೀವ್ರ ಅಸಮಧಾನ ವ್ಯಕ್ತಪಡಿಸಿದ್ದಾರೆ. ಇಂಥ ವ್ಯವಸ್ಥೆ ಸುಧಾರಣೆಗೆ ಕ್ರಮ ವಹಿಸುವಂತೆ ಹಾಜರಿದ್ದ ಅಧಿಕಾರಿಗಳಿಗೆ ಸೂಚಿಸಿದ್ದಾರೆ.ನಗರದ ಡಾಲರ್ಸ್ ಕಾಲೋನಿ ಹತ್ತಿರದಲ್ಲಿನ ಬಿಸಿಎಂ ಇಲಾಖೆಯ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯಕ್ಕೆ ಭೇಟಿ ನೀಡಿದರು. ಅಲ್ಲಿನ ಅಡುಗೆ ಕೋಣೆ, ಆಹಾರ ದಾಸ್ತಾನು ಕೋಣೆ, ವಿದ್ಯಾರ್ಥಿಗಳ ವಸತಿ ಗೃಹಗಳಿಗೆ ಭೇಟಿ ನೀಡಿ ವಸತಿ ನಿಲಯದ ಅಧಿಕಾರಿಗಳು, ವಾರ್ಡನ್‌ಗಳು, ಅಡುಗೆದಾರರು ಮತ್ತು ವಿದ್ಯಾರ್ಥಿಗಳಿಂದ ಮಾಹಿತಿ ಪಡೆದರು.ವಸತಿ ನಿಲಯದಲ್ಲಿ ನಮಗೆ ಕುಡಿಯುವ ನೀರು ಸಮರ್ಪಕವಾಗಿ ಸಿಗುತ್ತಿಲ್ಲ. ವಸತಿ ನಿಲಯ ಇಕ್ಕಟ್ಟಾಗಿರುವುದರಿಂದ ವಿದ್ಯಾರ್ಥಿನಿಯರ ಸಂಖ್ಯೆ ಹೆಚ್ಚಾಗಿ, ಒಂದೇ ಕೋಣೆಯಲ್ಲಿ ಬಹಳಷ್ಟು ವಿದ್ಯಾರ್ಥಿನಿಯರನ್ನು ಹಾಕಿದ್ದರಿಂದಾಗಿ ನಮಗೆ ಅಭ್ಯಾಸ ಮಾಡಲು ತೊಂದರೆಯಾಗುತ್ತಿದೆ. ಓದಲು ವಸತಿ ನಿಲಯದಲ್ಲಿ ಸ್ಪರ್ಧಾತ್ಮಕ ಪುಸ್ತಕಗಳು ಇಲ್ಲ ಎಂದು ವಿದ್ಯಾರ್ಥಿನಿಯರು ಉಪ ಲೋಕಾಯುಕ್ತರ ಎದುರು ತಮ್ಮ ಅಳಲು ತೋಡಿಕೊಂಡರು.ತೀವ್ರ ಅಸಮಾಧಾನ: ನಿಲಯದಲ್ಲಿರುವ ಕೆಲವು ಅಡುಗೆದಾರರು ಸರಿಯಾಗಿ ಸ್ಪಂದಿಸುವುದಿಲ್ಲ. ಬಟ್ಟೆ ತೊಳೆಯುವ ಸ್ಥಳದಲ್ಲಿ ಗಲೀಜು ತುಂಬಿದೆ. ಕೆಲವು ಸೌಲಭ್ಯಗಳನ್ನು ಸಮರ್ಪಕವಾಗಿ ನೀಡುತ್ತಿಲ್ಲ ಎಂದು ವಿದ್ಯಾರ್ಥಿಗಳು ತಿಳಿಸಿದರು.ವಸತಿ ನಿಲಯದ ಹೊರಾಂಗಣದಲ್ಲಿ ಸುತ್ತಲು ಅನೈರ್ಮಲ್ಯ ಕಂಡು ಉಪ ಲೋಕಾಯುಕ್ತರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.ಪೌರಾಯುಕ್ತರಿಗೆ ಸೂಚನೆ: ನಗರಸಭೆಯಿಂದ ಈ ಬಿಸಿಎಂ ವಸತಿ ನಿಲಯಕ್ಕೆ ಮತ್ತೊಂದು ಪೈಪ್‌ಲೈನ್ ಹಾಕಿ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು ಎಂದು ಉಪ ಲೋಕಾಯುಕ್ತರು ನಗರಸಭೆ ಪೌರಾಯುಕ್ತರಿಗೆ ಸೂಚಿಸಿದರು.

ಯಾರು ಸಹ ಭೇಟಿ ನೀಡಿಲ್ಲ: ಕಿನ್ನಾಳ ರಸ್ತೆಯಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಸರ್ಕಾರಿ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯಕ್ಕೆ ಸಹ ಉಪ ಲೋಕಾಯುಕ್ತರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಮಗೆ ಮಲಗಲು ಬೆಡ್ ವ್ಯವಸ್ಥೆ ಇಲ್ಲ. ಸ್ನಾನಕ್ಕೆ ಬಿಸಿ ನೀರು ಇಲ್ಲ. ಪುಸ್ತಕ ಇಲ್ಲ. ಸಾರು ನೀರಿನಂತಿರುತ್ತದೆ. ಎರಡು ವರ್ಷ ಆಯ್ತು ಯಾರು ಸಹ ವಸತಿ ನಿಲಯಕ್ಕೆ ಭೇಟಿ ನೀಡಿಲ್ಲ ಎಂದು ವಿದ್ಯಾರ್ಥಿಗಳು ಉಪ ಲೋಕಾಯುಕ್ತರ ಮುಂದೆ ಸಮಸ್ಯೆಗಳ ಪಟ್ಟಿಯನ್ನು ತೆರೆದಿಟ್ಟರು. ಕಿಟಕಿ, ಬಾಗಿಲು, ಆಹಾರ ದಾಸ್ತಾನು ಗಮನಿಸಿ ಅಸಮಾಧಾನ ವ್ಯಕ್ತಪಡಿಸಿದ ಉಪ ಲೋಕಾಯುಕ್ತರು, ಮಕ್ಕಳು ತಾವೇ ಕಸ ಹೊಡೆದು, ಧೂಳು ಸರಿಸಿ ಕೂಡುವ ವ್ಯವಸ್ಥೆ ಬದಲಾಗಬೇಕು. ಆಹಾರದಲ್ಲಿ ಗುಣಮಟ್ಟ ಕಾಯ್ದುಕೊಳ್ಳಲು ಸಮರ್ಪಕ ವ್ಯವಸ್ಥೆ ಮಾಡಬೇಕು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಿಗೆ ಉಪ ಲೋಕಾಯುಕ್ತರು ಸೂಚನೆ ನೀಡಿದರು.ಜಿಲ್ಲಾಧಿಕಾರಿ, ಜಿಪಂ ಸಿಇಒ ಜತೆಗೆ ಚರ್ಚೆ: ವಸತಿ ನಿಲಯಗಳಲ್ಲಿನ ಅವ್ಯವಸ್ಥೆಯ ಬಗ್ಗೆ ಉಪಲೋಕಾಯುಕ್ತರು ಜಿಲ್ಲಾಧಿಕಾರಿ ನಳಿನ್ ಅತುಲ್, ಜಿಪಂ ಸಿಇಒ ರಾಹುಲ್‌ ರತ್ನಂ ಪಾಂಡೆ ಅವರೊಂದಿಗೆ ಚರ್ಚಿಸಿದರು.ಇದನ್ನು ಸರಿಪಡಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಬೇಕು. ಕೂಡಲೇ ಎಲ್ಲ ವ್ಯವಸ್ಥೆ ಸರಿಪಡಿಸಲು ಕ್ರಮ ವಹಿಸಬೇಕು ಎಂದು ಉಪ ಲೋಕಾಯುಕ್ತರು ಸೂಚಿಸಿದರು.ವಿದ್ಯಾರ್ಥಿಗಳಿಗೆ ಸಲಹೆ:ಸರಿಯಾಗಿ ಅಧ್ಯಯನ ಮಾಡಿ ನೌಕರಿ ಪಡೆದುಕೊಳ್ಳಬೇಕು. ಸಮಾಜಕ್ಕೆ ಏನಾದರು ಕೊಡುಗೆ ಕೊಡಬೇಕು. ಪ್ರಾಮಾಣಿಕ ಜೀವನ ನಡೆಸಬೇಕು. ಯಾರಿಗು ಲಂಚಕೊಡಬಾರದು. ಲಂಚ ತೆಗೆದುಕೊಳ್ಳಬಾರದು ಎಂದು ಉಪ ಲೋಕಾಯುಕ್ತರು ವಿದ್ಯಾರ್ಥಿಗಳಿಗೆ ಸಲಹೆ ಮಾಡಿದರು.ಈ ಸಂದರ್ಭದಲ್ಲಿ ಸತ್ರ ನ್ಯಾಯಾಧೀಶ ಸಿ.ಚಂದ್ರಶೇಖರ, ಲೋಕಾಯುಕ್ತ ಬೆಂಗಳೂರಿನ ವಿಚಾರಣೆಯ ಉಪ ನಿಬಂಧಕ ಎಂ.ವಿ. ಚೆನ್ನಕೇಶವ ರೆಡ್ಡಿ, ಹೆಚ್ಚುವರಿ ನಿಬಂಧಕ ಸುದೇಶ ರಾಜಾರಾಂ ಪರದೇಶಿ, ಉಪ ಲೋಕಾಯುಕ್ತರ ಆಪ್ತ ಕಾರ್ಯದರ್ಶಿ ಕಿರಣ್ ಪ್ರಹ್ಲಾದ್‌ರಾವ್ ಮುತಾಲಿಕ್ ಪಾಟೀಲ, ಲೋಕಾಯುಕ್ತ ರಾಯಚೂರಿನ ಪೊಲೀಸ್ ಅಧೀಕ್ಷಕ ಡಾ.ರಾಮ್ ಲಕ್ಷ್ಮಣ ಅರಸಿದ್ದಿ, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ದೇವೇಂದ್ರ ಪಂಡಿತ, ಎಡಿಸಿ ಸಾವಿತ್ರಿ ಕಡಿ, ಸಹಾಯಕ ಆಯುಕ್ತ ಕ್ಯಾ.ಮಹೇಶ ಮಾಲಗಿತ್ತಿ, ಕೊಪ್ಪಳ ಲೋಕಾಯುಕ್ತ ಕಚೇರಿಯ ಪೊಲೀಸ್ ಉಪಾಧೀಕ್ಷಕ ಸಲಿಂ ಪಾಶಾ, ಪೊಲೀಸ್ ಉಪಾಧೀಕ್ಷಕ ಶರಣಬಸಪ್ಪ ಸುಭೇದಾರ, ತಹಸೀಲ್ದಾರ ವಿಠ್ಠಲ ಚೌಗಲಾ, ತಾಪಂ ಇಒ ದುಂಡಪ್ಪ ತುರಾದಿ ಇದ್ದರು.