ಸಾರಾಂಶ
ಕನ್ನಡಪ್ರಭ ವಾರ್ತೆ ಹನೂರುಹನೂರು ಸರ್ಕಾರಿ ಆಸ್ಪತ್ರೆಯನ್ನು ತಾಲೂಕು ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸಲು ಮುಂದಿನ ಬಜೆಟ್ ಒಳಗಡೆ ಸರ್ಕಾರದ ಮಟ್ಟದಲ್ಲಿ ಗಮನ ಸೆಳೆದು ಎಲ್ಲ ಸೌಲಭ್ಯ ಕಲ್ಪಿಸುವೆ ಎಂದು ಶಾಸಕ ಎಂ.ಆರ್.ಮಂಜುನಾಥ್ ಭರವಸೆ ನೀಡಿದರು.
ಕನ್ನಡಪ್ರಭ ವಾರ್ತೆ ಹನೂರು
ಹನೂರು ಸರ್ಕಾರಿ ಆಸ್ಪತ್ರೆಯನ್ನು ತಾಲೂಕು ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸಲು ಮುಂದಿನ ಬಜೆಟ್ ಒಳಗಡೆ ಸರ್ಕಾರದ ಮಟ್ಟದಲ್ಲಿ ಗಮನ ಸೆಳೆದು ಎಲ್ಲ ಸೌಲಭ್ಯ ಕಲ್ಪಿಸುವೆ ಎಂದು ಶಾಸಕ ಎಂ.ಆರ್.ಮಂಜುನಾಥ್ ಭರವಸೆ ನೀಡಿದರು.ರಾಮಾಪುರದ ಸರ್ಕಾರಿ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಕೇಂದ್ರ ಹಾಗೂ ಎರಡು ಆ್ಯಂಬುಲೆನ್ಸ್ ಸೇವೆಗೆ ಚಾಲನೆ ನೀಡಿ ಮಾತನಾಡಿ, ತಾಲೂಕಿನಲ್ಲಿ ಮೂತ್ರಕೋಶದ ತೊಂದರೆಯಿಂದ ಬಳಲುತ್ತಿರುವ ಐವತ್ತಕ್ಕೂ ಹೆಚ್ಚು ಬಡ ರೋಗಿಗಳಿಗೆ ಈ ಕೇಂದ್ರ ಹೆಚ್ಚು ಅನುಕೂಲವಾಗಲಿದೆ. ಪ್ರಸ್ತುತ ಎರಡು ಆ್ಯಂಬುಲೆನ್ಸ್ ಸೇವೆ ಜೊತೆಗೆ ಡಯಾಲಿಸಿಸ್ ಸೌಲಭ್ಯಕ್ಕೆ ಚಾಲನೆ ನೀಡಲಾಗಿದ್ದು, ಅಗತ್ಯವಿರುವವರು ಇದರ ಸದುಪಯೋಗ ಮಾಡಿಕೊಂಡು ಆರೋಗ್ಯ ಸುಧಾರಿಸಿಕೊಳ್ಳಬೇಕು ಎಂದರು.
ಕಳೆದ ಹಲವು ವರ್ಷಗಳ ಹಿಂದೆಯೇ ಸರ್ಕಾರ ರಾಮಾಪುರದ ಸರ್ಕಾರಿ ಆಸ್ಪತ್ರೆಯನ್ನು ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಮೇಲ್ದರ್ಜೆಗೆ ಹೆಸರಿಗಷ್ಟೇ ಏರಿಸಿದ್ದರಾದರೂ ಆಸ್ಪತ್ರೆಯಲ್ಲಿ ಹೆಚ್ಚಿನ ಸೌಲಭ್ಯಗಳನ್ನು ಕಲ್ಪಿಸದ ಹಿನ್ನೆಲೆ ಈ ಭಾಗದ ಗುಡ್ಡಗಾಡು ಪ್ರದೇಶದ ಹಾಗೂ ಕಾಡಂಚಿನ ಜನತೆಗೆ ದಿನನಿತ್ಯ ತೊಂದರೆ ಆಗುತ್ತಿತ್ತು. ಇದನ್ನು ಮನಗಂಡು ಸರ್ಕಾರದ ಮಟ್ಟದಲ್ಲಿ ಗಮನ ಸೆಳೆದು ಈ ಆಸ್ಪತ್ರೆಗೆ ಹೆಚ್ಚಿನ ಸೌಲಭ್ಯವನ್ನು ಕಲ್ಪಿಸಲು ಮುಂದಾಗಿದ್ದೇನೆ ಎಂದು ತಿಳಿಸಿದರು.ಜಿಲ್ಲಾಧಿಕಾರಿ ಶಿಲ್ಪಾನಾಗ್ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಜಿಲ್ಲೆಯಲ್ಲಿ ಹುಟ್ಟಿಗಿಂತ ಮರಣ ಹೊಂದುವವರ ಸಂಖ್ಯೆ ಹೆಚ್ಚಾಗುತ್ತಿದೆ. ಹಾಗಾಗಿ ಆರೋಗ್ಯ ಇಲಾಖೆಯ ಅಧಿಕಾರಿಗಳು ರೋಗಗಳನ್ನು ತಡೆಯಲು ಮತ್ತು ಜನರು ಆರೋಗ್ಯದಿಂದ ಜೀವಿಸಲು ಶ್ರಮಿಸಬೇಕು ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಅಧಿಕಾರಿ ಚಿದಂಬರ, ಕೊಳ್ಳೇಗಾಲ ವಿಭಾಗಾಧಿಕಾರಿ ಮಹೇಶ್, ತಾಲೂಕು ಆರೋಗ್ಯ ಅಧಿಕಾರಿ ಡಾ.ಪ್ರಕಾಶ್, ಗ್ರಾಮ ಪಂಚಾಯಿತಿ ಅಧ್ಯಕ್ಷ ರವಿ, ಪಿಡಿಒ ಪುಷ್ಪಲತಾ, ವೈದ್ಯಾಧಿಕಾರಿ ಡಾ.ಮನು ಮತ್ತಿತರರಿದ್ದರು.