ಕೇಂದ್ರ ನಾಗರಿಕ ವಿಮಾನಯಾನ ಸಚಿವ ಶ್ರೀ ರಾಮ್ ಮೋಹನ್ ನಾಯ್ಡು ಅವರನ್ನು ಸೋಮವಾರ ನವದೆಹಲಿಯಲ್ಲಿ ಭೇಟಿ ಮಾಡಿದ ಸಂಸದ ಬಿ.ವೈ.ರಾಘವೇಂದ್ರ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಂಬಂಧಿಸಿದ ಪ್ರಮುಖ ವಿಚಾರಗಳನ್ನು ಪ್ರಸ್ತಾಪಿಸಿ, ಅವುಗಳ ಕುರಿತು ಶೀಘ್ರ ಕ್ರಮ ಕೈಗೊಳ್ಳುವಂತೆ ಕೇಂದ್ರ ಸಚಿವರಿಗೆ ವಿವರವಾದ ಮನವಿ ಸಲ್ಲಿಸಿದರು.

ಕನ್ನಡಪ್ರಭ ವಾರ್ತೆ ಶಿವಮೊಗ್ಗ

ಕೇಂದ್ರ ನಾಗರಿಕ ವಿಮಾನಯಾನ ಸಚಿವ ಶ್ರೀ ರಾಮ್ ಮೋಹನ್ ನಾಯ್ಡು ಅವರನ್ನು ಸೋಮವಾರ ನವದೆಹಲಿಯಲ್ಲಿ ಭೇಟಿ ಮಾಡಿದ ಸಂಸದ ಬಿ.ವೈ.ರಾಘವೇಂದ್ರ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಂಬಂಧಿಸಿದ ಪ್ರಮುಖ ವಿಚಾರಗಳನ್ನು ಪ್ರಸ್ತಾಪಿಸಿ, ಅವುಗಳ ಕುರಿತು ಶೀಘ್ರ ಕ್ರಮ ಕೈಗೊಳ್ಳುವಂತೆ ಕೇಂದ್ರ ಸಚಿವರಿಗೆ ವಿವರವಾದ ಮನವಿ ಸಲ್ಲಿಸಿದರು.

ಅಕ್ಟೋಬರ್ 15ರಿಂದ ಶಿವಮೊಗ್ಗ–ಬೆಂಗಳೂರು ನಡುವೆ ವಿಮಾನ ಸೇವೆ ಆರಂಭಿಸಲು ಸ್ಟಾರ್ ಏರ್ ಮುಂದಾಗಿರುವ ಹಿನ್ನೆಲೆಯಲ್ಲಿ, ಈ ಸೇವೆ ಶೀಘ್ರವಾಗಿ ಆರಂಭವಾಗಲು ಅಗತ್ಯ ಅನುಮತಿ ಹಾಗೂ ಅನುಮೋದನೆಗಳನ್ನು ಆದ್ಯತೆಯ ಮೇರೆಗೆ ನೀಡುವಂತೆ ಸಂಸದ ಬಿ.ವೈ.ರಾಘವೇಂದ್ರ ಅವರು ಕೇಂದ್ರ ಸಚಿವರನ್ನು ಒತ್ತಾಯಿಸಿದರು.

ನವೆಂಬರ್ ನಂತರವೂ ವಿಮಾನ ಸೇವೆಯಲ್ಲಿ ಯಾವುದೇ ವ್ಯತ್ಯಯವಾಗದಂತೆ ಕ್ರಮ ತೆಗೆದುಕೊಳ್ಳಿ: ಶಿವಮೊಗ್ಗದಿಂದ ಹೈದರಾಬಾದ್, ತಿರುಪತಿ ಹಾಗೂ ಗೋವಾಕ್ಕೆ ಸಂಪರ್ಕ ಕಲ್ಪಿಸುತ್ತಿರುವ ಸ್ಟಾರ್ ಏರ್‌ನ ಪ್ರಸ್ತುತ ವಿಮಾನ ಸೇವೆಯನ್ನು ನವೆಂಬರ್ 2026ರ ನಂತರವೂ ಮುಂದುವರಿಸುವಂತೆ ಕೇಂದ್ರ ನಾಗರಿಕ ವಿಮಾನಯಾನ ಸಚಿವರನ್ನು ಒತ್ತಾಯಿಸಿದ್ದಾರೆ.

ಡಿವಿಒಆರ್ ಕಾಮಗಾರಿ:

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿನ ಡಾಪ್ಲರ್ ವೆರಿ ಹೈ ಫ್ರೀಕ್ವೆನ್ಸಿ ಓಮ್ನಿಡೈರೆಕ್ಷನಲ್ ರೇಂಜ್ (ಡಿವಿಒಆರ್‌) ನ್ಯಾವಿಗೇಷನ್ ವ್ಯವಸ್ಥೆಗೆ ಸಂಬಂಧಿಸಿದ ಬಾಕಿ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆಯೂ ಸಂಸದ ಕೇಂದ್ರ ಸಚಿವರನ್ನು ಒತ್ತಾಯಿಸಿದರು.

ಈ ಕಾಮಗಾರಿಗಳನ್ನು ನಾಗರಿಕ ಕಾಮಗಾರಿಗಳನ್ನು ಆದಷ್ಟು ಶೀಘ್ರವಾಗಿ ಪೂರ್ಣಗೊಳಿಸುವಂತೆ ನಿರ್ದೇಶನ ನೀಡಬೇಕೆಂದು ಸಂಸದರು ಕೇಂದ್ರ ಸಚಿವರನ್ನು ಕೋರಿದರು. ಈ ಕಾಮಗಾರಿಗಳು ಇನ್‌ಸ್ಟ್ರುಮೆಂಟ್ ಫ್ಲೈಟ್ ರೂಲ್ಸ್ ಆಧಾರಿತ ವಿಮಾನ ಕಾರ್ಯಾಚರಣೆಗಳಿಗೆ ನೆರವಾಗುವುದರ ಜತೆಗೆ, ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ನೈಟ್ ಲ್ಯಾಂಡಿಂಗ್ ಸೇರಿದಂತೆ ವಿಮಾನ ಸೇವೆಗಳನ್ನು ಹೆಚ್ಚಿಸಲು ಪ್ರಮುಖವಾಗಿವೆ ಎಂದು ತಿಳಿಸಿದ್ದಾರೆ.

ಕೇಂದ್ರ ಸಚಿವರ ಭೇಟಿ ನಂತರ ಪ್ರತಿಕ್ರಿಯಿಸಿದ ಸಂಸದ ಬಿ.ವೈ.ರಾಘವೇಂದ್ರ, ನಮ್ಮ ಮನವಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಶಿವಮೊಗ್ಗ ವಿಮಾನ ನಿಲ್ದಾಣ ಭವಿಷ್ಯದ ವಿಮಾನ ಮಾರ್ಗಗಳ ಯೋಜನೆಯಲ್ಲಿಯೂ ಶಿವಮೊಗ್ಗಕ್ಕೆ ದೊರೆಯಬೇಕಾದ ಆದ್ಯತೆ ದೊರೆಯಬೇಕು ಎಂದಿದ್ದಾರೆ.

ಶಿವಮೊಗ್ಗಕ್ಕೆ ನಿರಂತರ ವಿಮಾನ ಸೇವೆಗಳ, ಹೆಚ್ಚು ವಿಶ್ವಾಸಾರ್ಹ ವಿಮಾನ ಕಾರ್ಯಾಚರಣೆಗೆ ಆಧುನಿಕ ಸೌಲಭ್ಯಗಳು ಹಾಗೂ ಭವಿಷ್ಯದಲ್ಲಿ ಮತ್ತಷ್ಟು ಬಲಿಷ್ಠ ವಿಮಾನ ಸಂಪರ್ಕವನ್ನು ಖಚಿತಪಡಿಸುವ ನಿಟ್ಟಿನಲ್ಲಿ ತಮ್ಮ ಪ್ರಯತ್ನಗಳು ಮುಂದುವರಿಯಲಿವೆ ಎಂದು ಸಂಸದ ಬಿ.ವೈ. ರಾಘವೇಂದ್ರ ತಿಳಿಸಿದ್ದಾರೆ.