ಪ್ರಜಾಪ್ರಭುತ್ವದ ನೈಜ ಶಕ್ತಿ ದೇಶದ ಪ್ರತಿಯೊಬ್ಬ ಭಾರತೀಯ ಪ್ರಜೆಗಳಲ್ಲಿದ್ದು, ಪ್ರಜಾಪ್ರಭುತ್ವದ ಆಶಯಗಳನ್ನು ಎತ್ತಿಹಿಡಿದು ದೇಶದ ಪ್ರಗತಿಗೆ ಎಲ್ಲರೂ ಶ್ರಮಿಸಬೇಕು ಎಂದು ಜಿಲ್ಲಾಧಿಕಾರಿ ಪೂವಿತಾ ಎಸ್. ಅಭಿಪ್ರಾಯ ವ್ಯಕ್ತಪಡಿಸಿದರು

ಕನ್ನಡಪ್ರಭ ವಾರ್ತೆ ರಾಯಚೂರು

ಪ್ರಜಾಪ್ರಭುತ್ವದ ನೈಜ ಶಕ್ತಿ ದೇಶದ ಪ್ರತಿಯೊಬ್ಬ ಭಾರತೀಯ ಪ್ರಜೆಗಳಲ್ಲಿದ್ದು, ಪ್ರಜಾಪ್ರಭುತ್ವದ ಆಶಯಗಳನ್ನು ಎತ್ತಿಹಿಡಿದು ದೇಶದ ಪ್ರಗತಿಗೆ ಎಲ್ಲರೂ ಶ್ರಮಿಸಬೇಕು ಎಂದು ಜಿಲ್ಲಾಧಿಕಾರಿ ಪೂವಿತಾ ಎಸ್. ಅಭಿಪ್ರಾಯ ವ್ಯಕ್ತಪಡಿಸಿದರು.

ಸ್ಥಳೀಯ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಮಹಾನಗರ ಪಾಲಿಕೆ, ಸಮಾಜ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಉನ್ನತ ಶಿಕ್ಷಣ ಇಲಾಖೆ ಮತ್ತು ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ 19 ನೇ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಹಾಗೂ ತಾಲೂಕು, ಜಿಲ್ಲಾ ಮಟ್ಟದ ಯುವ ಸಂಸತ್ತು ಸಭೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಂಗಳವಾರ ಮಾತನಾಡಿದ ಅವರು, ದೇಶದ ಭವಿಷ್ಯದ ರೂವಾರಿಗಳಾದ ವಿದ್ಯಾರ್ಥಿಗಳು ಸಂವಿಧಾನ ನೀಡಿದ ಹಕ್ಕುಗಳು ಹಾಗೂ ಜವಾಬ್ದಾರಿಗಳನ್ನು ಅರ್ಥೈಸಿಕೊಂಡು, ಈ ಸಂದೇಶವನ್ನು ತಮ್ಮ ಮನೆ-ಮನಗಳಿಗೆ ತಲುಪಿಸುವ ರಾಯಭಾರಿಗಳಾಗಬೇಕು. ಪ್ರಜಾಪ್ರಭುತ್ವದ ಆಶಯಗಳನ್ನು ಎತ್ತಿಹಿಡಿದು ದೇಶದ ಪ್ರಗತಿಗೆ ತಾವೆಲ್ಲರೂ ಶ್ರಮಿಸಬೇಕು ಎಂದರು.

ಜಿಪಂ ಮುಖ್ಯಕಾರ್ಯನಿರ್ವಹಕ ಅಧಿಕಾರಿಗಳಾದ ಈಶ್ವರ್ ಕಾಂದೂ ಮಾತನಾಡಿ, ಪ್ರಜಾಪ್ರಭುತ್ವದ ಅತಿ ದೊಡ್ಡ ಕೊಡುಗೆ ನಮ್ಮ ಸಂವಿಧಾನ. ಸಂವಿಧಾನವು ನಮಗೆ ಮೂಲಭೂತ ಹಕ್ಕುಗಳನ್ನು ನೀಡಿದಂತೆ, ಸಮಾಜ ಮತ್ತು ಪರಿಸರದ ಕಡೆಗೆ ಕೆಲವು ಮೂಲಭೂತ ಕರ್ತವ್ಯಗಳನ್ನು ಸಹ ನಿಗದಿಪಡಿಸಿದೆ. ಆದ್ದರಿಂದ ಜಿಲ್ಲೆ ಯಲ್ಲಿ ಸ್ವಚ್ಛತೆ ಮತ್ತು ಉತ್ತಮ ಆಡಳಿತವನ್ನು ಕಾಯ್ದುಕೊಳ್ಳುವುದು ಕೇವಲ ಅಧಿಕಾರಿಗಳ ಹೊಣೆಗಾರಿಕೆಯಲ್ಲ, ಪ್ರತಿಯೊಬ್ಬ ನಾಗರಿಕ ಹಾಗೂ ವಿದ್ಯಾರ್ಥಿಗಳ ಜವಾಬ್ದಾರಿಯಾಗಿದೆ ಎಂದು ಹೇಳಿದರು.

ಪಾಲಿಕೆಯ ಆಯುಕ್ತರಾದ ಜುಬಿನ್ ಮೊಹಾಪಾತ್ರ ಮಾತನಾಡಿ, ಐದು ವರ್ಷಕ್ಕೊಮ್ಮೆ ಮತದಾನ ಮಾಡುವುದು ಮಾತ್ರವೇ ಪ್ರಜಾಪ್ರಭುತ್ವವಲ್ಲ, ಪ್ರಜೆಗಳೇ ಪ್ರಭುಗಳಾಗಿ ಭಾಗವಹಿಸುವುದೇ ಪ್ರಜಾಪ್ರಭುತ್ವದ ನೈಜ ಬೇರು ಆಗಿದೆ. ಜಗತ್ತಿನ ಪ್ರಥಮ ಆಧ್ಯಾತ್ಮಿಕ ಹಾಗೂ ಪ್ರಜಾಸತ್ತಾತ್ಮಕ ಸಂಸತ್ತು ಎಂದರೆ ಅದು ಬಸವಕಲ್ಯಾಣ ಕರ್ನಾಟಕದ ನೆಲದಲ್ಲಿ ಜಗಜ್ಯೋತಿ ಬಸವಣ್ಣನವರು ಸ್ಥಾಪಿಸಿದ ಅನುಭವ ಮಂಟಪ. ಭಾರತವು ಜಗತ್ತಿನ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ ವಾಗಿದೆ ಎಂದು ನುಡಿದರು.

ಈ ವೇಳೆ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ವಿಶಾಂತ್ರಿ ಕುಲಪತಿ ಜೆ.ಎಸ್.ಪಾಟೀಲ್ ಅವರು ವಿಶೇಷ ಉಪನ್ಯಾಸ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಷು ಗಿರಿ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಕೃಷ್ಣ ಶಾವಂತಗೇರ, ನ್ಯಾಯವಾದಿಗಳ ಸಂಘದ ಅಧ್ಯಕ್ಷ ಎನ್.ಶಿವಶಂಕರ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಸೋಮಶೇಖರಪ್ಪ ಹೊಕ್ರಾಣಿ, ರಾಯಚೂರು ತಹಸೀಲ್ದಾರ್ ಸುರೇಶ ವರ್ಮಾ, ಸೇರಿ ವಿವಿಧ ಇಲಾಖೆಯ ಅಧಿಕಾರಿ, ಸಿಬ್ಬಂದಿಗಳು, ವಿವಿಧ ಸಂಘಟನೆಯ ಮುಖಂಡರು ಹಾಗೂ ವಿದ್ಯಾರ್ಥಿಗಳು ಇದ್ದರು.

--- ಬಾಕ್ಸ್...

ಡಾ.ಬಿ.ಆರ್.ಅಂಬೇಡ್ಕರರ

ಭಾವಚಿತ್ರಕ್ಕೆ ಮಾಲಾರ್ಪಣೆ

19ನೇ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಭಾರತ ರತ್ನ ಹಾಗೂ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ವಿವಿಧ ಗಣ್ಯರಿಂದ ಮಾಲಾರ್ಪಣೆ ಮಾಡಿ, ಗೌರವಿಸಲಾಯಿತು. ನಂತರ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಮಲ್ಲಿಕಾರ್ಜುನ ಜಿ. ಅವರಿಂದ ಭಾರತ ಸಂವಿಧಾನದ ಪೀಠಿಕೆಯನ್ನು ಬೋಧಿಸಲಾಯಿತು.

----------------

ಪೋಸ್ಟರ್ ಬಿಡುಗಡೆ

ಜಿಲ್ಲಾಡಳಿತ, ಜಿಪಂ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಇಲಾಣ ಮತ್ತು ಶಿಕ್ಷಣ ಇಲಾಖೆಯ ವತಿಯಿಂದ ನಿರ್ವಹಿಸಲಾಗುತ್ತಿರುವ ವಸತಿ ನಿಲಯ, ವಸತಿ ಶಾಲೆ, ಆಶ್ರಮ ಶಾಲೆಗಳಲ್ಲಿ ಸ್ವಚ್ಛತೆ ಹಾಗೂ ನೈರ್ಮಲ್ಯ ಕಾಪಾಡುವ ಉದ್ದೇಶದಿಂದ ನಿರ್ಮಲ ನಿಲಯ ಅಭಿಯಾನದ ಪೋಸ್ಟರ್ ಹಾಗೂ ಯುವ ಸಂಸತ್ತು ಪೋಸ್ಟರ್‌ಗಳನ್ನು ವಿವಿಧ ಗಣ್ಯರಿಂದ ಬಿಡುಗಡೆ ಮಾಡಲಾಯಿತು.

----------------

15ಕೆಪಿಆರ್‌ಸಿಆರ್‌ 03: ರಾಯಚೂರಿನ ರಂಗಮಂದಿರದಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಹಾಗೂ ತಾಲೂಕು, ಜಿಲ್ಲಾ ಮಟ್ಟದ ಯುವ ಸಂಸತ್ತು ಸಭೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಗಣ್ಯರು ಭಾರತ ಸಂವಿಧಾನದ ಪೀಠಿಕೆಯ ಪ್ರತಿಜ್ಞಾವಿಧಿಯನ್ನು ಸಾಮೂಹಿಕವಾಗಿ ಬೋಧಿಸಿ ಸ್ವೀಕರಿಸಿದರು.