ಅರಸೀಕೆರೆ: ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಕ್ಷೇತ್ರದ ಶಾಸಕ ಕೆ.ಎಂ. ಶಿವಲಿಂಗೇಗೌಡ ಹಾಗೂ ಉಪ್ಪಾರ ಸಮಾಜದ ಹಿರಿಯ ನಾಯಕ ಪುಟ್ಟರಂಗಶೆಟ್ಟಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ತಾಲೂಕು ಉಪ್ಪಾರ ಸಮಾಜದ ಮುಖಂಡರು ಯಾದಪುರದ ಜೇನುಕಲ್ಲು ಸಿದ್ದೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಇದೇ ವೇಳೆ 101 ತೆಂಗಿನಕಾಯಿ ಒಡೆದು ತಮ್ಮ ಮನವಿ ಈಡೇರಿಸುವಂತೆ ದೇವರಲ್ಲಿ ಪ್ರಾರ್ಥನೆ ಸಲ್ಲಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ತಾಲೂಕು ಉಪ್ಪಾರ ಸಮಾಜದ ಅಧ್ಯಕ್ಷ ಕೆ.ಸಿ.ಡಿ. ಕುಮಾರ್‌, ಶಿವಲಿಂಗೇಗೌಡರು ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದು, ರೈತರು, ಶೋಷಿತರು ಹಾಗೂ ಹಿಂದುಳಿದ ವರ್ಗಗಳ ಪರವಾಗಿ ನಿರಂತರವಾಗಿ ಧ್ವನಿಯಾಗಿದ್ದಾರೆ. ಕ್ಷೇತ್ರದ ಅಭಿವೃದ್ಧಿಯ ಜೊತೆಗೆ ರಾಜ್ಯ ಮಟ್ಟದಲ್ಲಿಯೂ ಉತ್ತಮ ರಾಜಕೀಯ ನಾಯಕತ್ವವನ್ನು ಪ್ರದರ್ಶಿಸಿರುವ ಅವರಿಗೆ ಸಚಿವ ಸ್ಥಾನ ನೀಡಿದರೆ ಸರ್ಕಾರದ ಕಾರ್ಯಕ್ಷಮತೆಗೆ ಹಾಗೂ ಪಕ್ಷ ಸಂಘಟನೆಗೆ ಮತ್ತಷ್ಟು ಬಲ ದೊರೆಯಲಿದೆ ಎಂದು ಹೇಳಿದರು.ಕಾರ್ಯದರ್ಶಿ ಚನ್ನಬಸಪ್ಪ ಮಾತನಾಡಿ, ಸರ್ಕಾರ ರಚನೆಯಾದ ಸಂದರ್ಭದಲ್ಲಿ ಶಿವಲಿಂಗೇಗೌಡರಿಗೆ ಸಚಿವ ಸ್ಥಾನ ಸಿಗಲಿದೆ ಎಂಬ ನಿರೀಕ್ಷೆ ಕ್ಷೇತ್ರದ ಜನತೆಯಲ್ಲಿತ್ತು. ಅದು ಸಾಧ್ಯವಾಗದ ಹಿನ್ನೆಲೆಯಲ್ಲಿ ಈಗ ನಡೆಯಲಿರುವ ಸಚಿವ ಸಂಪುಟ ವಿಸ್ತರಣೆಯಲ್ಲಿ ಅವರಿಗೆ ಅವಕಾಶ ಕಲ್ಪಿಸಬೇಕು ಎಂಬುದು ತಾಲೂಕಿನ ಜನರ ಒಕ್ಕೊರಲಿನ ಬೇಡಿಕೆಯಾಗಿದೆ. ಇದೇ ರೀತಿಯಲ್ಲಿ ಉಪ್ಪಾರ ಸಮಾಜದ ನಾಯಕ ಪುಟ್ಟರಂಗಶೆಟ್ಟಿಗೂ ಸಚಿವ ಸಂಪುಟದಲ್ಲಿ ಸೂಕ್ತ ಸ್ಥಾನಮಾನ ನೀಡಬೇಕು ಎಂದು ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಉಪ್ಪಾರ ಸಮಾಜದ ಉಪಾಧ್ಯಕ್ಷ ಪುನೀತ್, ಮುಖಂಡರಾದ ನಾಗಪ್ಪ, ಗಂಗಾಧರ್, ಜಯಣ್ಣ, ಕುಮಾರ್‌, ಸಿದ್ದಪ್ಪ, ರಂಗಪ್ಪ, ಹೊನ್ನಪ್ಪ, ಮಂಜಪ್ಪ ಸೇರಿದಂತೆ ಸಮಾಜದ ಪ್ರಮುಖರು ಉಪಸ್ಥಿತರಿದ್ದರು.