ರಾಷ್ಟ್ರೀಯ ಹೆದ್ದಾರಿ ಸರ್ವೀಸ್ ರಸ್ತೆಯಿಂದ ಕವಲೊಡೆಯುವ ಹಳೆಗೇಟು- ಮರ್ಧಾಳ ರಾಜ್ಯ ಹೆದ್ದಾರಿಗೆ ಹಳೆಗೇಟು ಬಳಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಕಾಂಕ್ರೀಟ್ ಕಾಮಗಾರಿ ನಡೆಯುತ್ತಿದ್ದು, ಸ್ಥಳಕ್ಕಾಗಮಿಸಿ ಕಾಮಗಾರಿ ವೀಕ್ಷಿಸಿದ ಶಾಸಕ ಅಶೋಕ್ ಕುಮಾರ್ ರೈ ಕಾಮಗಾರಿಯ ಬಗ್ಗೆ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕರಿಗೆ ಸೂಕ್ತ ನಿರ್ದೇಶನ ನೀಡಿದರು.
ಉಪ್ಪಿನಂಗಡಿ: ರಾಷ್ಟ್ರೀಯ ಹೆದ್ದಾರಿ ಸರ್ವೀಸ್ ರಸ್ತೆಯಿಂದ ಕವಲೊಡೆಯುವ ಹಳೆಗೇಟು- ಮರ್ಧಾಳ ರಾಜ್ಯ ಹೆದ್ದಾರಿಗೆ ಹಳೆಗೇಟು ಬಳಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಕಾಂಕ್ರೀಟ್ ಕಾಮಗಾರಿ ನಡೆಯುತ್ತಿದ್ದು, ಸ್ಥಳಕ್ಕಾಗಮಿಸಿ ಕಾಮಗಾರಿ ವೀಕ್ಷಿಸಿದ ಶಾಸಕ ಅಶೋಕ್ ಕುಮಾರ್ ರೈ ಕಾಮಗಾರಿಯ ಬಗ್ಗೆ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕರಿಗೆ ಸೂಕ್ತ ನಿರ್ದೇಶನ ನೀಡಿದರು. ಈಗಾಗಲೇ ಇಲ್ಲಿ ಕಾಂಕ್ರೀಟ್ ಕೆಲಸ ಆರಂಭಿಸಲಾಗಿದ್ದು, ಅಲ್ಲಿ ತೋಡೊಂದಕ್ಕೆ ಹಾಕಲಾಗಿರುವ ಮೋರಿ ಹಾಗೂ ತಡೆಗೋಡೆ ಕುಸಿಯುವ ಹಂತದಲ್ಲಿದ್ದರೂ ಚತುಷ್ಪಥ ಹೆದ್ದಾರಿ ಕಾಮಗಾರಿಯ ಗುತ್ತಿಗೆದಾರರು ಅದನ್ನು ಸರಿಪಡಿಸದೇ ಅದರ ಮೇಲೆಯೇ ಕಾಂಕ್ರೀಟ್ ಕಾಮಗಾರಿ ನಡೆಸಲು ಸಿದ್ಧತೆ ನಡೆಸಿದ್ದರು. ಈ ಬಗ್ಗೆ ಆತಂಕ ವ್ಯಕ್ತಪಡಿಸಿ ಸಾರ್ವಜನಿಕರು ಶಾಸಕರಿಗೆ ದೂರು ನೀಡಿದ್ದರು.
ಈ ಹಿನ್ನೆಲೆಯಲ್ಲಿ ಮಂಗಳವಾರ ಸ್ಥಳಕ್ಕಾಗಮಿಸಿದ ಶಾಸಕ ಅಶೋಕ್ ಕುಮಾರ್ ರೈ, ದೂರವಾಣಿ ಮೂಲಕ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕರನ್ನು ಸಂಪರ್ಕಿಸಿ, ಇಲ್ಲಿ ಮೋರಿ ಹಾಗೂ ತಡೆಗೋಡೆ ನಿರ್ಮಿಸಿದ ಬಳಿಕ ಕಾಂಕ್ರೀಟ್ ಕಾಮಗಾರಿ ನಡೆಸಬೇಕು ಎಂದರಲ್ಲದೆ, ಪ್ರಯಾಣಿಕರ ಹಾಗೂ ವಾಹನಗಳ ಸುರಕ್ಷತೆಯ ದೃಷ್ಟಿಗಾಗಿ ಬೇಕಾದ ಮುನ್ನೆಚ್ಚರಿಕೆಗಳನ್ನು ತೆಗೆದುಕೊಂಡು ಗುಣಮಟ್ಟದ ಕಾಮಗಾರಿ ನಡೆಸಬೇಕು ಎಂದು ಸೂಚಿಸಿದರು. ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಶಾಸಕ ಅಶೋಕ್ ಕುಮಾರ್ ರೈ, ಉಪ್ಪಿನಂಗಡಿಯ ನೇತ್ರಾವತಿ ಸೇತುವೆಯಿಂದ ಜಂಕ್ಷನ್ ತನಕದ ರಸ್ತೆಯ ಚತುಷ್ಪಥ ಕಾಮಗಾರಿಗಾಗಿ ಈಗಾಗಲೇ ಮೂರು ಕೋ.ರು. ಅನುದಾನ ಬಿಡುಗಡೆಗೊಂಡಿದೆ ಎಂದು ತಿಳಿಸಿದರು.ಚತುಷ್ಪಥ ಹೆದ್ದಾರಿ ಕಾಮಗಾರಿ ಸಂಸ್ಥೆಯ ಎಂಜಿನಿಯರ್ ರಾಜು, ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ತೌಸೀಫ್ ಯು.ಟಿ., ಪಂಚ ಗ್ಯಾರಂಟಿ ಯೋಜನೆಯ ಅನುಷ್ಠಾನ ಸಮಿತಿಯ ಅಧ್ಯಕ್ಷ ಉಮಾನಾಥ ಶೆಟ್ಟಿ ಪೆರ್ನೆ, ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್, ಗ್ರಾ.ಪಂ. ಮಾಜಿ ಸದಸ್ಯ ಅಬ್ದುಲ್ ರಶೀದ್, ಮತ್ತಿತರರು ಇದ್ದರು.