ಸಾರಾಂಶ
ರಾಮನಗರ: ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ(ತಿದ್ದುಪಡಿ) ಅಧಿನಿಯಮ 2024ರ ಅನ್ವಯ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಭಾಷೆಯನ್ನು ಕಡ್ಡಾಯವಾಗಿ ಬಳಸಲು ಜಿಲ್ಲೆಯಲ್ಲಿ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಸಂಘಟನೆಯ ಪದಾಧಿಕಾರಿಗಳು ಶನಿವಾರ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.
ನಗರದ ಜಿಲ್ಲಾ ಕಚೇರಿಗಳ ಸಂಕೀರ್ಣದ ಆವರಣದಲ್ಲಿ ಅಪರ ಜಿಲ್ಲಾಧಿಕಾರಿ ಕಚೇರಿಯ ಅಧಿಕಾರಿಯನ್ನು ಭೇಟಿಯಾಗಿ ಮನವಿ ಸಲ್ಲಿಸುವ ಮೂಲಕ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಭಾಷೆಯನ್ನು ಬಳಸಲು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.ಈ ವೇಳೆ ಸಂಘಟನೆಯ ಜಿಲ್ಲಾಧ್ಯಕ್ಷ ಕಬ್ಬಾಳೆಗೌಡ ಮಾತನಾಡಿ, ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ(ತಿದ್ದುಪಡಿ) ಅಧಿನಿಯಮ 2024ರ ಅನ್ವಯ ಸರ್ಕಾರ ಮತ್ತು ಸ್ಥಳೀಯ ಪ್ರಾಧಿಕಾರಗಳಿಂದ ಅನುಮತಿ ಮತ್ತು ಮಂಜೂರಾತಿಯೊಂದಿಗೆ ಕಾರ್ಯನಿರ್ವಹಿಸುತ್ತಿರುವ ವಾಣಿಜ್ಯ ಕೈಗಾರಿಕೆ ಮತ್ತು ವ್ಯವಹಾರ, ಉದ್ಯಮಗಳು, ಟ್ರಸ್ಟ್, ಸಮಾಲೋಚನಾ ಕೇಂದ್ರ, ಆಸ್ಪತ್ರೆ, ಸಿನಿಮಾ, ಮನರಂಜನಾ ಸ್ಥಳಗಳು ಸೇರಿದಂತೆ ಸಾರ್ವಜನಿಕ ಸ್ಥಳಗಳ ನಾಮಫಲಕಗಳಲ್ಲಿ ಕನ್ನಡ ಭಾಷೆಯನ್ನು ಶೇ.60ರಷ್ಟು ಬಳಕೆ ಮಾಡುವಂತೆ ನಿಯಮ ರೂಪಿಸಲಾಗಿದೆ. ಹಾಗಾಗಿ ಈ ನಿಯಮವನ್ನುರಾಮನಗರ ಜಿಲ್ಲಾಡಳಿತ ಸಮಪರ್ಕವಾಗಿ ಅನುಷ್ಠಾನ ಮಾಡಬೇಕೆಂದು ಆಗ್ರಹಿಸಿದರು.
ಜಿಲ್ಲಾ ವ್ಯಾಪ್ತಿಯ ಗ್ರಾಪಂ, ಪಟ್ಟಣ ಪಂಚಾಯಿತಿ, ಪುರಸಭೆ, ನಗರಸಭೆ ವ್ಯಾಪ್ತಿಯಲ್ಲಿನ ವಾಣಿಜ್ಯ ಸಂಸ್ಥೆಗಳು, ಕೈಗಾರಿಕೆಗಳಲ್ಲಿ ಅಳವಡಿಸಬೇಕು. ಒಂದು ವೇಳೆ ಈ ಕಾನೂನನ್ನು ಪಾಲಿಸದೆ ನಿರ್ಲಕ್ಷ್ಯ ವಹಿಸುವ ಮತ್ತು ಇತರೆ ಭಾಷೆಗಳಲ್ಲಿ ನಾಮಫಲಕಗಳನ್ನು ಮುಂದುವರೆಸಿದರೆ ಸಂಸ್ಥೆಯ ವಿರುದ್ಧ ಕ್ರಮ ಕೈಗೊಳ್ಳಬೇಕು. ಒಂದೊಮ್ಮೆ ಜಿಲ್ಲಾಡಳಿತದಿಂದಲೂ ಈ ಬಗ್ಗೆ ನಿರ್ಲಕ್ಷ್ಯ ಕಂಡುಬಂದರೆ, ನಮ್ಮ ಸಂಘಟನೆಯ ಅನ್ಯ ಭಾಷೆಯಲ್ಲಿರುವ ನಾಮಫಲಕಗಳನ್ನು ತೆರವುಗೊಳಿಸಲು ಮುಂದಾಗುತ್ತೇವೆ ಎಂದು ಎಚ್ಚರಿಕೆ ನೀಡಿದರು.ಜಿಲ್ಲಾಡಳಿತ ಇದಕ್ಕೆ ಅವಕಾಶ ನೀಡದೆ, ಸರ್ಕಾರ ರೂಪಿಸಿರುವ ಈ ನಿಯಮವನ್ನು ಕೂಡಲೇ ಜಾರಿಗೊಳಿಸಲು ಜಿಲ್ಲಾ ವ್ಯಾಪ್ತಿಯ ಎಲ್ಲಾ ಸ್ಥಳೀಯ ಪ್ರಾಧಿಕಾರಗಳಿಗೆ ಸೂಕ್ತ ನರ್ದೇಶ ನೀಡಬೇಕೆಂದು ಆಗ್ರಹಿಸಿದರು.
ಈ ವೇಳೆ ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಎಂ.ಎನ್. ಸತ್ಯನಾರಾಯಣ್, ಜಿಲ್ಲಾ ಉಪಾಧ್ಯಕ್ಷ ಪುಟ್ಟಸ್ವಾಮಿ, ತಾಲೂಕು ಅಧ್ಯಕ್ಷರಾದ ದೇವರಾಜು, ಸಾಗರ್, ಹಾರೋಹಳ್ಳಿ ಶ್ರೀನಿವಾಸ್ಮೂರ್ತಿ, ಕನಕಪುರ ಜಯರಾಮೇಗೌಡ, ಯುವ ಘಟಕದ ಅಧ್ಯಕ್ಷ ನಿತಿನ್ ಚನ್ನಪಟ್ಟಣ ಮುಖಂಡ ಕೇಶವಮೂರ್ತಿ ಮತ್ತಿತರರಿದ್ದರು.2ಕೆಆರ್ ಎಂಎನ್ 3.ಜೆಪಿಜಿ
ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಸಂಘಟನೆಯ ಪದಾಧಿಕಾರಿಗಳು ಜಿಲ್ಲಾಧಿಕಾರಿ ಕಚೇರಿಯ ಅಧಿಕಾರಿಗೆ ಮನವಿ ಸಲ್ಲಿಸಿದರು.