ಯುವ ವಿದ್ಯಾರ್ಥಿಗಳು ಭಾರತದ ಭವಿಷ್ಯದ ಶಕ್ತಿಗಳಾಗಿದ್ದು, ಅವರಲ್ಲಿನ ಸೃಜನಶೀಲತೆ ಮತ್ತು ನಾವೀನ್ಯತೆಗೆ ಸೂಕ್ತ ವೇದಿಕೆ ಕಲ್ಪಿಸುವುದು ಇಂದಿನ ಅಗತ್ಯವಾಗಿದೆ ಎಂದು ಭೀಮಸಮುದ್ರದ ಶ್ರೀಶೈಲ ಎಜುಕೇಷನಲ್ ಟ್ರಸ್ಟ್ ಅಧ್ಯಕ್ಷ ಜಿ.ಎಂ.ಪ್ರಸನ್ನ ಕುಮಾರ ಅಭಿಪ್ರಾಯಪಟ್ಟಿದ್ದಾರೆ.
- ಭೀಮಸಮುದ್ರದ ಶ್ರೀಶೈಲ ಎಜುಕೇಷನಲ್ ಟ್ರಸ್ಟ್ ಅಧ್ಯಕ್ಷ ಪ್ರಸನ್ನ ಕುಮಾರ । ಜಿಎಂ ವಿ.ವಿ.ಯಲ್ಲಿ ''''ಮಲ್ಲಿಕಾ 26.0'''' ಸಮಾರೋಪ
- - -ಕನ್ನಡಪ್ರಭ ವಾರ್ತೆ ದಾವಣಗೆರೆ
ಯುವ ವಿದ್ಯಾರ್ಥಿಗಳು ಭಾರತದ ಭವಿಷ್ಯದ ಶಕ್ತಿಗಳಾಗಿದ್ದು, ಅವರಲ್ಲಿನ ಸೃಜನಶೀಲತೆ ಮತ್ತು ನಾವೀನ್ಯತೆಗೆ ಸೂಕ್ತ ವೇದಿಕೆ ಕಲ್ಪಿಸುವುದು ಇಂದಿನ ಅಗತ್ಯವಾಗಿದೆ ಎಂದು ಭೀಮಸಮುದ್ರದ ಶ್ರೀಶೈಲ ಎಜುಕೇಷನಲ್ ಟ್ರಸ್ಟ್ ಅಧ್ಯಕ್ಷ ಜಿ.ಎಂ.ಪ್ರಸನ್ನ ಕುಮಾರ ಅಭಿಪ್ರಾಯಪಟ್ಟರು.ನಗರದ ಜಿಎಂ ವಿಶ್ವವಿದ್ಯಾಲಯದಲ್ಲಿ ಶನಿವಾರ ಶೈಕ್ಷಣಿಕ ಸಾಧನೆ ಮತ್ತು ಸಾಂಸ್ಕೃತಿಕ ಪ್ರತಿಭೆಗಳ ''''ಮಲ್ಲಿಕಾ 26.0'''' ವಾರ್ಷಿಕ ಸಾಂಸ್ಕೃತಿಕ ಉತ್ಸವದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.
''''ಮಲ್ಲಿಕಾ-2026'''' ಇಂತಹ ಸಾಂಸ್ಕೃತಿಕ ಹಬ್ಬಗಳು ಕೇವಲ ಮನೋರಂಜನೆಗೆ ಸೀಮಿತವಾಗದೇ, ವಿದ್ಯಾರ್ಥಿಗಳಲ್ಲಿ ನಾಯಕತ್ವ, ತಂಡವಾಗಿ ಕೆಲಸ ಮಾಡುವ ಕಲೆ, ಸಂವಹನ ಕೌಶಲ್ಯ ಮತ್ತು ಆತ್ಮವಿಶ್ವಾಸವನ್ನು ವೃದ್ಧಿಸುತ್ತವೆ. ಇಂದಿನ ಆಧುನಿಕ ಯುಗದಲ್ಲಿ ಕೃತಕ ಬುದ್ಧಿಮತ್ತೆ (ಎಐ) ನಂತಹ ತಂತ್ರಜ್ಞಾನಗಳನ್ನು ಜವಾಬ್ದಾರಿಯುತವಾಗಿ ಬಳಸಿಕೊಳ್ಳಬೇಕು. ತಂತ್ರಜ್ಞಾನದ ಜೊತೆಗೆ ನಮ್ಮ ಸಂಸ್ಕೃತಿ, ಮಾನವೀಯತೆ ಮತ್ತು ನೈತಿಕ ಮೌಲ್ಯಗಳನ್ನು ಕಾಪಾಡಿಕೊಳ್ಳುವುದು ಅತಿ ಮುಖ್ಯವಾಗಿದೆ. ಇಂಟರ್ನ್ಶಿಪ್ಗಳು ಮತ್ತು ಕೈಗಾರಿಕಾ ಅನುಭವಗಳ ಮೂಲಕ ಪ್ರಾಯೋಗಿಕ ಜ್ಞಾನ ಬೆಳೆಸಿಕೊಳ್ಳಲು ವಿದ್ಯಾರ್ಥಿಗಳಿಗೆ ಕರೆ ನೀಡಿದರು.ಜಿಎಂ ವಿ.ವಿ. ಕುಲಪತಿ ಡಾ. ಎಸ್.ಆರ್. ಶಂಕಪಾಲ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಶಿಕ್ಷಣ ಎಂದರೆ ಕೇವಲ ತರಗತಿ ಅಥವಾ ಪ್ರಯೋಗಾಲಯಕ್ಕೆ ಸೀಮಿತವಾಗಿಲ್ಲ. ಮಲ್ಲಿಕಾದಂತಹ ವೇದಿಕೆಗಳು ವಿದ್ಯಾರ್ಥಿಗಳಲ್ಲಿ ಸೃಜನಶೀಲತೆ, ಆತ್ಮವಿಶ್ವಾಸ ಮತ್ತು ತಂಡದ ಮನೋಭಾವವನ್ನು ಬೆಳೆಸುತ್ತವೆ. ಜಿಎಂ ವಿಶ್ವವಿದ್ಯಾಲಯವು ಕೇವಲ ಶೈಕ್ಷಣಿಕ ಕ್ಷೇತ್ರದಲ್ಲಿ ಮಾತ್ರವಲ್ಲದೇ, ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾದ ಇಂತಹ ಸಾಂಸ್ಕೃತಿಕ ವೇದಿಕೆಗಳನ್ನು ಕಲ್ಪಿಸಿಕೊಡುವಲ್ಲಿ ಮುಂಚೂಣಿಯಲ್ಲಿದೆ ಎಂದು ತಿಳಿಸಿದರು.
ಜಿಎಂ ವಿ.ವಿ. ಕುಲಾಧಿಪತಿ ಜಿ.ಎಂ. ಲಿಂಗರಾಜು ಮಾತನಾಡಿ, ಕೇವಲ ಪಠ್ಯ ಮತ್ತು ಪ್ರವಚನಗಳಿಗೆ ಸೀಮಿತವಾಗದೇ, ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳು ಅತ್ಯಗತ್ಯ. ವಿದ್ಯಾರ್ಥಿಗಳು ಉತ್ತಮ ವ್ಯಾಸಂಗ ಮಾಡಿ ಡಿಸ್ಟಿಂಕ್ಷನ್ನಲ್ಲಿ ಉತ್ತೀರ್ಣರಾಗುವುದರ ಜೊತೆಗೆ ಉತ್ತಮ ಉದ್ಯೋಗಗಳನ್ನು ಪಡೆದು ತಮ್ಮ ಪೋಷಕರಿಗೆ ಹಾಗೂ ಸಂಸ್ಥೆಗೆ ಕೀರ್ತಿ ತರಬೇಕು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.ವಿವಿಧ ಜಿಲ್ಲೆಗಳ ನೂರಾರು ಕಾಲೇಜುಗಳಿಂದ ಆಗಮಿಸಿದ್ದ ವಿದ್ಯಾರ್ಥಿಗಳು ಕಲೆ, ಸಂಗೀತ ಮತ್ತು ನೃತ್ಯ ಸ್ಪರ್ಧೆಗಳಲ್ಲಿ ತಮ್ಮ ಅದ್ಭುತ ಪ್ರತಿಭೆಯನ್ನು ಪ್ರದರ್ಶಿಸಿದರು. ಸಹ ಉಪ ಕುಲಪತಿಗಳಾದ ಡಾ. ಎಂ.ವೇಣುಗೋಪಾಲ ರಾವ್, ಕುಲಸಚಿವ ಡಾ. ಬಿ.ಎಸ್. ಸುನೀಲ್ ಕುಮಾರ, ಜಿಎಂ ಹಾಲಮ್ಮ ಪಪೂ ಕಾಲೇಜಿನ ಎಎಒ ಜಿ.ಜೆ.ಶಿವಕುಮಾರ, ವಿದ್ಯಾರ್ಥಿ ವ್ಯವಹಾರಗಳ ನಿರ್ದೇಶನಾಲಯದ ನಿರ್ದೇಶಕ ಡಾ. ಎಚ್.ಎಸ್. ಕಿರಣ್ ಕುಮಾರ, ಉಪ ನಿರ್ದೇಶಕ ಡಾ. ಎಂ. ಸಂತೋಷ್ ಕುಮಾರ ಇತರರು ಭಾಗವಹಿಸಿದ್ದರು.
ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳ ವಿಜೇತರಿಗೆ ಆಕರ್ಷಕ ಟ್ರೋಫಿ ಮತ್ತು ಬಹುಮಾನಗಳ ವಿತರಿಸಿ, ಗೌರವಿಸಲಾಯಿತು. ಗಾಯಕ ವಿಜಯ್ ಪ್ರಕಾಶ್ ಸಂಗೀತ ಸಂಜೆ ಮನರಂಜನೆ ಜೊತೆಗೆ ಸಂಗೀತದ ರಸದೌತಣ ನೀಡಿತು. ವಿದ್ಯಾರ್ಥಿಗಳು ವಿಜಯ್ ಪ್ರಕಾಶ್ ಅವರ ಹಾಡಿನ ಜೊತೆಗೆ ತಾವು ಕೇಕೆ ಹಾಕುತ್ತಾ, ಹಾಡುತ್ತಾ ಕುಣಿದು ಕುಪ್ಪಳಿಸಿದರು.- - -
-10ಕೆಡಿವಿಜಿ31:ದಾವಣಗೆರೆಯ ಜಿಎಂ ವಿ.ವಿ.ಯಲ್ಲಿ ಕುಲಪತಿ ಡಾ. ಎಸ್.ಆರ್. ಶಂಕಪಾಲ್ ಅಧ್ಯಕ್ಷತೆಯಲ್ಲಿ ''''ಮಲ್ಲಿಕಾ 26.0'''' ಸಮಾರೋಪ ಸಮಾರಂಭ ನಡೆಯಿತು.