ಸಾರಾಂಶ
ಕನ್ನಡಪ್ರಭ ವಾರ್ತೆ ಕೋಲಾರಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಜು.೧೩ ರಂದು ಜನತಾ ನ್ಯಾಯಾಲಯ ನಡೆಸಲಾಗುವುದು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಹಾಗೂ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ನ್ಯಾ. ಜಿ.ಎ.ಮಂಜುನಾಥ ತಿಳಿಸಿದರು.
ಗುರುವಾರ ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ನವದೆಹಲಿ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ನಿರ್ದೇಶನದ ಮೇರೆಗೆ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ ಅದಾಲತ್ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಾಕಿಯಿರುವ ಪ್ರಕರಣಗಳನ್ನು ಶೀಘ್ರ ಇತ್ಯರ್ಥ ಪಡಿಸಿಕೊಳ್ಳಲು ಇಚ್ಚಿಸಿದಲ್ಲಿ ಮುಂಚಿತವಾಗಿ ಸಂಬಂಧಪಟ್ಟ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ತಾಲೂಕು ಕಾನೂನು ಸೇವಾ ಸಮಿತಿಗಳನ್ನು ಸಂಪರ್ಕಿಸಿ ಬಗೆಹರಿಸಿಕೊಳ್ಳುವಂತೆ ಸಲಹೆ ನೀಡಿದರು.ರಾಜೀ ಮೂಲಕ ಇತ್ಯರ್ಥ
ಲೋಕ ಅದಾಲತ್ನಲ್ಲಿ ಸಾರ್ವಜನಿಕರು ನ್ಯಾಯಾಲಯದಲ್ಲಿ ಬಾಕಿಯಿರುವ ಪ್ರಕರಣಗಳು ಹಾಗೂ ವ್ಯಾಜ್ಯಪೂರ್ವ ಪ್ರಕರಣಗಳನ್ನು ಸಹ ರಾಜೀ ಸಂಧಾನದ ಮೂಲಕ ಬಗೆಹರಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಇನ್ನೂ ಒಂದು ತಿಂಗಳು ಇರುವಾಗಲೇ ೫೦೦೦ ಅರ್ಜಿಗಳು ಪ್ರಕರಣಗಳ ರಾಜೀ ಸಂಧಾನದ ಇತ್ಯರ್ಥಕ್ಕೆ ಬಂದಿವೆ ಎಂದರು. ಪ್ರಾಧಿಕಾರದ ಪೂರ್ವಭಾವಿ ಸಭೆಜುಲೈ ೧೩ ರಂದು ನಡೆಯಲಿರುವ ಅದಾಲತ್ನಲ್ಲಿ ನ್ಯಾಯಾಲಯದಲ್ಲಿ ಬಾಕಿಯಿರುವ ಪ್ರಕರಣಗಳ ಜೊತೆಗೆ ನ್ಯಾಯಾಲಯಕ್ಕೆ ದಾಖಲಾಗುವ ಮುನ್ನ ವ್ಯಾಜ್ಯಪೂರ್ವ ಪ್ರಕರಣಗಳ (ಬ್ಯಾಂಕ್ ವಸೂಲಾತಿ ಪ್ರಕರಣಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ಕಾರ್ಮಿಕ ವಿವಾದ ಪ್ರಕರಣಗಳು) ಕ್ಷಕಿಗಾರರಿಗೆ ನೋಟಿಸ್ ನೀಡಿ ಕರೆಸಿ ಪ್ರಾಧಿಕಾರದ ವತಿಯಿಂದ ಪೂರ್ವಭಾವಿ ಸಭೆ ನಡೆಸಲಾಗುವುದು. ಇಂತಹ ಪ್ರಕರಣಗಳಿಗೆ ನ್ಯಾಯಾಲಯದ ಶುಲ್ಕ ಪಾವತಿಸುವ ಅವಶ್ಯಕತೆಯಿರುವುದಿಲ್ಲ. ವಕೀಲರ ಮೂಲಕ ಅಥವಾ ಖುದ್ಧಾಗಿ ಪ್ರಾಧಿಕಾರಕ್ಕೆ ಭೇಟಿ ನೀಡಿ ಪ್ರಕರಣಗಳನ್ನು ರಾಜೀ ಮಾಡಿಕೊಳ್ಳಬಹುದಾಗಿದೆಂದು ಅವರು ತಿಳಿಸಿದರು. ವಿಶೇಷ ಲೋಕ್ ಅದಾಲತ್ ಸರ್ವೋಚ್ಛ ನ್ಯಾಯಾಲಯದಲ್ಲಿ ಚಾಲ್ತಿಯಿರುವ ಕೋಲಾರ ಜಿಲ್ಲೆಯ ಪ್ರಕರಣಗಳ ಬಗ್ಗೆ ವಿಶೇಷ ಲೋಕ ಅದಾಲತ್ ಅನ್ನು ಜುಲೈ ೨೯ರಿಂದ ಆಗಸ್ಟ್ ೩ರ ವರೆಗೆ ಹಮ್ಮಿಕೊಳ್ಳಲಾಗಿದೆ. ವಿಶೇಷ ಅದಾಲತ್ನ ಅಂಗವಾಗಿ ೨೯ನೇ ಜೂನ್ ರಂದು ಆನ್ಲೈನ್ನಲ್ಲಿ ಅಥವಾ ಖುದ್ಧಾಗಿ ಹಾಜರಾಗುವ ಮೂಲಕ ಉಭಯ ಪಕ್ಷಗಾರರು ಹಾಗೂ ಅವರ ವಕೀಲರು ಪೂರ್ವ ಸಂಧಾನ ಪ್ರಕ್ರಿಯೆಯಲ್ಲಿ ಪಾಲ್ಗೊಂಡು ತಮ್ಮ ಪ್ರಕರಣಗಳನ್ನು ರಾಜೀ ಸಂಧಾನ ಮೂಲಕ ಬಗೆಹರಿಸಕೊಳ್ಳುವ ಅವಕಾಶವಿದೆ ಎಂದು ತಿಳಿಸಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಸುನಿಲ ಎಸ್.ಹೊಸಮನಿ ಇದ್ದರು.