ಮಂಗಳೂರು: ಮಳೆಗಾಲದಲ್ಲಿ ರಸ್ತೆಗಳಲ್ಲಿ ಹೊಂಡ-ಗುಂಡಿಗಳಿಗೆ ಬಿದ್ದು, ಅವಘಡ, ಪ್ರಾಣ ಹಾನಿ ಸಂಭವಿಸಿದರೆ ಸಂಬಂಧಿಸಿದ ಎಂಜಿನಿಯರ್‌ಗಳೇ ಹೊಣೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ.ಖಾದರ್‌ ಎಚ್ಚರಿಕೆ ನೀಡಿದ್ದಾರೆ.

ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಳೆಗಾಲದ ಸಿದ್ಧತೆಗಳ ಕುರಿತು ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು.

ಮುಖ್ಯವಾಗಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು ಲೋಕೋಪಯೋಗಿ ಇಲಾಖೆಗಳು ರಸ್ತೆಯಲ್ಲಿ ನೀರು ನಿಲ್ಲುವ ಪ್ರಕರಣಗಳನ್ನು ಸಮನ್ವಯದಿಂದ ನಿರ್ವಹಿಸಬೇಕು. ತುರ್ತು ಸಂದರ್ಭಗಳಲ್ಲಿ ಸಾರ್ವಜನಿಕ ಹಿತಾಸಕ್ತಿಯಿಂದ ವ್ಯಾಪ್ತಿ ಮೀರಿ ಕ್ರಮ ಕೈಗೊಳ್ಳಬೇಕು ಎಂದರು.ಮಳೆಗಾಲದಲ್ಲಿ ರಸ್ತೆ ಹೊಂಡದಲ್ಲಿ ನೀರು ನಿಂತ ಕಾರಣ ಅಪಘಾತಗಳಾಗಿ ಸಾರ್ವಜನಿಕರ ಪ್ರಾಣ ಹಾನಿ ಸಂಭವಿಸಿದರೆ ಸಂಬಂಧಿಸಿದ ಇಲಾಖಾ ಎಂಜಿನಿಯರ್‌ಗಳನ್ನೇ ನೇರ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಎಚ್ಚರಿಸಿದ ಸಚಿವರು, ಪದೇ ಪದೇ ಹೊಂಡ ಮುಚ್ಚುವ ಕೆಲಸದ ಬದಲು ಶಾಶ್ವತ ಕಾಮಗಾರಿಗೆ ಒತ್ತು ನೀಡಲು ಸೂಚಿಸಿದರು. ಮಳೆಗಾಲದಲ್ಲಿ ಎದುರಾಗುವ ಯಾವುದೇ ವಿಪತ್ತುಗಳನ್ನು ಎದುರಿಸಲು ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ನಿರ್ವಹಿಸಬೇಕು ಎಂದು ಸಲಹೆ ನೀಡಿದರು.

ಮೆಸ್ಕಾಂ ವ್ಯಾಪ್ತಿಯಲ್ಲಿ ಮಳೆಗಾಲದಲ್ಲಿ ವಿದ್ಯುತ್ ಸಂಪರ್ಕ ನಿರ್ವಹಣೆಗೆ ಹೆಚ್ಚುವರಿ ಲೈನ್ ಮ್ಯಾನ್ ಮತ್ತು ವಾಹನಗಳನ್ನು ಒದಗಿಸಬೇಕು. ವಿದ್ಯುತ್ ಸಂಪರ್ಕ ಮರುಸ್ಥಾಪನೆಗೆ ತ್ವರಿತ ಕ್ರಮ ಕೈಗೊಳ್ಳಬೇಕು ಎಂದು ಸಚಿವರು ಮೆಸ್ಕಾಂ ಅಧಿಕಾರಿಗಳಿಗೆ ಸೂಚಿಸಿದರು.

ಮಳೆಗಾಲದಲ್ಲಿ ಮಾನವ ನಿರ್ಮಿತ ಸಮಸ್ಯೆಗಳನ್ನು ತಗ್ಗಿಸಲು ಗಮನಹರಿಸಬೇಕು. ನೆರೆಯಿಂದ ರಸ್ತೆ ತಡೆಗಳನ್ನು ಆಯಾ ಸ್ಥಳೀಯ ಸಂಸ್ಥೆಗಳು ವಿಳಂಬಿಸದೆ ತೆರವುಗೊಳಿಸಬೇಕು. ಪರಿಹಾರ ಕ್ರಮಗಳನ್ನು ಕೈಗೊಳ್ಳುವಾಗ ಸ್ಥಳೀಯ ಸಂಘ ಸಂಸ್ಥೆಗಳು ಮತ್ತು ಸಾರ್ವಜನಿಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಎಂದು ಯು.ಟಿ. ಖಾದರ್ ಸೂಚಿಸಿದರು.


ಟಾಸ್ಕ್ ಫೋರ್ಸ್‌ಗಳನ್ನು ಸಕ್ರಿಯಗೊಳಿಸಬೇಕು. ಪ್ರತಿ ಗ್ರಾಮ ಪಂಚಾಯತ್‌ಗಳಿಗೆ ನೋಡಲ್ ಅಧಿಕಾರಿಗಳನ್ನು ನೇಮಿಸಬೇಕು ಎಂದು ಅವರು ಸೂಚಿಸಿದರು.

ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ. ಅವರು ಮಳೆಗಾಲ ನಿರ್ವಹಣೆಗೆ ಕೈಗೊಳ್ಳಗಿರುವ ಸಿದ್ಧತೆಗಳನ್ನು ಸಭೆಗೆ ವಿವರಿಸಿದರು.

ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ, ಜಿಲ್ಲಾ ಪೊಲೀಸ್ ಅಧೀಕ್ಷಕ ಅರುಣ್, ಡಿಸಿಎಫ್ ರವಿಶಂಕರ್, ಉಪವಿಭಾಗಾಧಿಕಾರಿ ಮೀನಾಕ್ಷಿ ಆರ್ಯ ಮತ್ತಿತರರು ಇದ್ದರು.