ಸಾರಾಂಶ
ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ದೇವರ ದಾಸಿಮಯ್ಯ ಜಯಂತಿ ಕಾರ್ಯಕ್ರಮ ಆಯೋಜಿಸಲಾಯಿತು. ಉಡುಪಿ ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ವಚನಗಳ ಬಗ್ಗೆ ಮಾತನಾಡಿದರು.
ಕನ್ನಡಪ್ರಭ ವಾರ್ತೆ ಮಣಿಪಾಲ
ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ದೇವರ ದಾಸಿಮಯ್ಯ ಅವರ ವಚನಗಳ ಕೊಡುಗೆ ಮಹತ್ತರವಾಗಿದ್ದು, ಅವರ ವಚನಗಳ ಅರ್ಥ, ಭಾವನೆ ಹಾಗೂ ಆಲೋಚನೆಗಳು ಇಂದಿನ ಕಾಲಘಟ್ಟಕ್ಕೂ ಅನ್ವಯವಾಗುವಂತದ್ದು ಎಂದು ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಹೇಳಿದರು.ಅವರು ಶನಿವಾರ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ನಡೆದ ದೇವರ ದಾಸಿಮಯ್ಯ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ದೇವರ ದಾಸಿಮಯ್ಯ ಅವರ ಆದರ್ಶ ಹಾಗೂ ಅವರು ನೀಡಿರುವ ಚಿಂತನೆಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡಾಗ ಜಯಂತಿ ಆಚರಣೆಗೆ ಅರ್ಥಪೂರ್ಣತೆ ನೀಡಿದಂತಾಗುತ್ತದೆ ಎಂದರು.ಕಾರ್ಯಕ್ರಮದಲ್ಲಿ ಮಾತನಾಡಿದ ಪದ್ಮಶಾಲಿ ಒಕ್ಕೂಟ ಅಧ್ಯಕ್ಷ ರಾಮದಾಸ್ ಶೆಟ್ಟಿಗಾರ್, ಸಾಮಾಜಿಕ ಪಿಡುಗು ತೊಲಗಿಸಲು ಶ್ರಮಿಸಿದ ದೇವರ ದಾಸಿಮಯ್ಯ ತಮ್ಮ ವೈಚಾರಿಕ ನಿಲುವಿನೊಂದಿಗೆ ಎಲ್ಲರ ಗಮನ ಸೆಳೆಯುತ್ತಾರೆ ಎಂದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಸಮುದಾಯದ ಮುಖಂಡ ಗಿರೀಶ್ ಶೆಟ್ಟಿಗಾರ್, ಸಾಮಾಜಿಕ ಸಮಾನತೆಯ ಮಹತ್ವವನ್ನು ವಚನಗಳ ಮೂಲಕ ಸರಳವಾದ ರೀತಿಯಲ್ಲಿ ಜನರಿಗೆ ಬೋಧಿಸಿದ ದೇವರ ದಾಸಿಮಯ್ಯ ಸಾಮಾಜಿಕ ಶೋಷಣೆಯನ್ನು ತಪ್ಪಿಸುವಲ್ಲಿ ಸಹಕರಿಯಾದರು ಎಂದರು.ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಪ್ರತೀಕ್ ಬಾಯಲ್, ಕರಾವಳಿ ಕಾವಲು ಪಡೆಯ ಎಸ್ಪಿ ಮಿಥುನ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಎಸ್.ಟಿ. ಸಿದ್ದಲಿಂಗಪ್ಪ, ಡಿ.ಎಫ್.ಓ ಗಣಪತಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ನಿರೂಪಿಸಿ, ವಂದಿಸಿದರು.