ಬೆಳ್ತಂಗಡಿ: ಪರಿಸರ ಉಳಿಸಿ ಬೆಳೆಸುವಲ್ಲಿ ಸಂಘ ಸಂಸ್ಥೆಗಳ ಪಾತ್ರ ಮಹತ್ವದ್ದಾಗಿದೆ ಎಂದು ಮೂಡಬಿದಿರೆ ವಲಯ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪಿ. ಶ್ರೀಧರ್ ಅಭಿಪ್ರಾಯಪಟ್ಟರು.
ಬೆಳ್ತಂಗಡಿ ತಾಲೂಕಿನ ಕುತ್ಲೂರು ಸರ್ಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಕರ್ನಾಟಕ ಅರಣ್ಯ ಇಲಾಖೆ ಮೂಡುಬಿದಿರೆ ಉಪ ವಿಭಾಗ ಹಾಗೂ ಕುತ್ಲೂರು ಸರ್ಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯ ವನಸಿರಿ ಇಕೋ ಕ್ಲಬ್ ವತಿಯಿಂದ ಆಯೋಜಿಸಲಾದ ವನಮಹೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಶಾಲಾ ಮಕ್ಕಳಲ್ಲಿ ಪರಿಸರದ ಕುರಿತು ಜಾಗೃತಿ ಮೂಡಿಸುವ ಕಾರ್ಯ ನಿರಂತರವಾಗಿ ನಡೆಯಬೇಕಾಗಿದೆ ಎಂದು ಹೇಳಿದರು.ಸರ್ಕಾರಿ ಶಾಲೆಯಲ್ಲಿ ಕಲಿತ ಮಕ್ಕಳೆಂಬ ಕೀಳರಿಮೆ ಬೇಡ. ಸರ್ಕಾರಿ ಶಾಲೆಯಲ್ಲಿ ಕಲಿತವರು ಇಂದು ದೇಶದ ಉನ್ನತ ಹುದ್ದೆಯಲ್ಲಿ ಸೇವೆ ಸಲ್ಲಿಸುತ್ತಿರುವ ಹಲವು ಉದಾರಹಣೆಗಳಿವೆ ಎಂದು ಹೇಳಿದರು.
ಇದೇ ವೇಳೆ ಅರಣ್ಯ ಇಲಾಖೆಯಲ್ಲಿ ಉತ್ತಮ ಸೇವೆ ಸಲ್ಲಿಸುತ್ತಿರುವ ಹಾಗೂ ಈ ಸರ್ಕಾರಿ ಶಾಲೆಗೆ ನೆರವು ನೀಡಿದ ಶ್ರೀಧರ್ ಅವರನ್ನು ಸನ್ಮಾನಿಸಲಾಯಿತು.ಕಾರ್ಯಕ್ರಮದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಶ್ರೀನಿವಾಸ್ ನಾಯಕ್ ಇಂದಾಜೆ, ದಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್ ಬಿ.ಎನ್., ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಕನಕವರ್ಮ ಜೈನ್, ಉಪಾಧ್ಯಕ್ಷೆ ಶ್ವೇತಾ ಜಗದೀಶ್ ಇದ್ದರು.ಶಾಲಾಭಿವೃದ್ಧಿಗೆ ನೆರವು: ಗಿಡನೆಟ್ಟು ಉತ್ತಮ ರೀತಿಯಲ್ಲಿ ಪೋಷಿಸುವ ಈ ಶಾಲಾ ವಿದ್ಯಾರ್ಥಿಗಳಿಗೆ ತಲಾ 200 ರು. ಬಹುಮಾನ, ಶಾಲಾ ಶಿಕ್ಷಕರೊಬ್ಬರ 8 ಸಾವಿರ ರು. ಮಾಸಿಕ ವೇತನ ಹಾಗೂ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ತಮ್ಮ ವೈಯುಕ್ತಿಕ ಕೊಡುಗೆ ನೀಡುವುದಾಗಿ ಘೋಷಿಸಿದರು. ಅರಣ್ಯ ಇಲಾಖೆ ವತಿಯಿಂದ ಶಾಲಾ ಆವರಣದಲ್ಲಿ ಫ್ರೂಟ್ ಪಾರ್ಕ್ ನಿರ್ಮಿಸಿ ಕೊಡುವುದಾಗಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಧರ್ ತಿಳಿಸಿದರು.