ಹುಬ್ಬಳ್ಳಿ:
ಬೆಂಗಳೂರು-ಮುಂಬೈ ಮಧ್ಯೆ ಸಂಚರಿಸಲಿರುವ ಪ್ರಸ್ತಾವಿತ ಸ್ಲೀಪರ್ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ತುಮಕೂರು-ದಾವಣಗೆರೆ- ಹುಬ್ಬಳ್ಳಿ- ಬೆಳಗಾವಿ- ಪುಣೆ ಮಾರ್ಗದ ಮೂಲಕ ಸಂಚರಿಸುವಂತೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ ಮನವಿ ಮಾಡಿದೆ.ಈ ಕುರಿತು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹಾಗೂ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರಿಗೆ ಪತ್ರ ಬರೆದಿರುವ ಸಂಸ್ಥೆಯ ಅಧ್ಯಕ್ಷ ಜಿ.ಕೆ. ಆದಪ್ಪಗೌಡರ, ಉತ್ತರ ಕರ್ನಾಟಕದ ಜನರ ನ್ಯಾಯಸಮ್ಮತ ಬೇಡಿಕೆಯನ್ನು ಈಡೇರಿಸುವಂತೆ ಒತ್ತಾಯಿಸಿದ್ದಾರೆ. ಪ್ರಸ್ತುತ ಬೆಂಗಳೂರು-ಮುಂಬೈ ಸ್ಲೀಪರ್ ವಂದೇ ಭಾರತ್ ರೈಲನ್ನು ಕಲಬುರ್ಗಿ-ಸೊಲ್ಲಾಪುರ ಮಾರ್ಗದಲ್ಲಿ ಸಂಚರಿಸುವ ಕುರಿತು ಘೊಷಣೆ ಮಾಡಲಾಗಿದೆ. ಆದರೆ, ಉತ್ತರ ಕರ್ನಾಟಕದ ಜನತೆ ಹಾಗೂ ವಿವಿಧ ಸಂಘ-ಸಂಸ್ಥೆಗಳ ಬಹುಕಾಲದ ಬೇಡಿಕೆಯಂತೆ ಈ ರೈಲನ್ನು ತುಮಕೂರು-ದಾವಣಗೆರೆ-ಹುಬ್ಬಳ್ಳಿ- ಬೆಳಗಾವಿ-ಪುಣೆ ಮಾರ್ಗದಲ್ಲಿ ಓಡಿಸುವುದು ಅಗತ್ಯವಾಗಿದೆ ಎಂದು ಮನವಿಯಲ್ಲಿ ವಿವರಿಸಲಾಗಿದೆ.
ಈ ಮಾರ್ಗವು ರಾಜ್ಯದ ಪ್ರಮುಖ ಕೈಗಾರಿಕೆ, ಶೈಕ್ಷಣಿಕ, ವಾಣಿಜ್ಯ, ಕೃಷಿ, ಏರೋಸ್ಪೇಸ್ ಹಾಗೂ ರಕ್ಷಣಾ ಉತ್ಪಾದನಾ ಚಟುವಟಿಕೆಗಳ ಕೇಂದ್ರವಾಗಿದೆ. ಹುಬ್ಬಳ್ಳಿ- ಧಾರವಾಡ, ದಾವಣಗೆರೆ ಮತ್ತು ಬೆಳಗಾವಿ ನಗರಗಳು ಉತ್ತರ ಕರ್ನಾಟಕದ ಆರ್ಥಿಕ ಬೆಳವಣಿಗೆಯ ಪ್ರಮುಖ ಕೇಂದ್ರಗಳಾಗಿವೆ. ಪ್ರತಿದಿನ ಸಾವಿರಾರು ವಿದ್ಯಾರ್ಥಿಗಳು, ಉದ್ಯೋಗಿಗಳು, ವ್ಯಾಪಾರಸ್ಥರು ಹಾಗೂ ಪ್ರಯಾಣಿಕರು ಈ ಮಾರ್ಗವನ್ನು ಅವಲಂಬಿಸಿದ್ದಾರೆ ಎಂದು ತಿಳಿಸಿದ್ದಾರೆ.ಬೆಂಗಳೂರು-ಮುಂಬೈ ಸ್ಲೀಪರ್ ವಂದೇ ಭಾರತ್ ರೈಲನ್ನು ತುಮಕೂರು-ದಾವಣಗೆರೆ-ಹುಬ್ಬಳ್ಳಿ-ಬೆಳಗಾವಿ-ಪುಣೆ ಮಾರ್ಗದ ಮೂಲಕವೇ ಸಂಚರಿಸುವಂತೆ ಕೇಂದ್ರ ಸರ್ಕಾರ ಹಾಗೂ ರೈಲ್ವೆ ಸಚಿವಾಲಯ ಶೀಘ್ರ ಸಕಾರಾತ್ಮಕ ನಿರ್ಧಾರ ಕೈಗೊಳ್ಳಬೇಕೆಂದು ಸಂಸ್ಥೆಯ ಅಧ್ಯಕ್ಷ ಜಿ.ಕೆ. ಆದಪ್ಪಗೌಡರ ಹಾಗೂ ಗೌರವ ಕಾರ್ಯದರ್ಶಿ ಉದಯ ರೇವಣಕರ ಆಗ್ರಹಿಸಿದ್ದಾರೆ.
