ಕನ್ನಡಪ್ರಭ ವಾರ್ತೆ ಮಡಿಕೇರಿ

ಮಹತ್ಮಾ ಗಾಂಧಿ ನರೇಗಾ ಯೋಜನೆ ಬದಲಾಗಿ ಕೇಂದ್ರ ಸರ್ಕಾರ ರೂಪಿಸಿರುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆ ಇಂದಿನಿಂದ ದೇಶಾದ್ಯಂತ ಜಾರಿಗೆ ಬಂದಿದ್ದು, ವಿರಾಜಪೇಟೆ ತಾಲೂಕಿನಲ್ಲಿ ಕಾರ್ಯಾಗಾರ ನಡೆಯಿತು. ವಿರಾಜಪೇಟೆ ತಾಲೂಕು ಸಾಮರ್ಥ್ಯ ಸೌಧದಲ್ಲಿ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ ಗಾರ್ ಅಂಡ್ ಆಜೀವಿಕ ಮಿಷನ್ (ಗ್ರಾಮೀಣ) ಯೋಜನೆ ಸಂಬಂಧಿಸಿದಂತೆ ಒಂದು ದಿನದ ಕಾರ್ಯಾಗಾರಕ್ಕೆ ವಿರಾಜಪೇಟೆ ತಾ.ಪಂ.ಇಒ ರಾಜೇಶ್ ಚಾಲನೆ ನೀಡಿದರು.ನಂತರ ಮಾತನಾಡಿದ ಅವರು ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಆಜಿವಿಕ್ ಮಿಷನ್ (ಗ್ರಾಮೀಣ) ಯೋಜನೆಯನ್ನು ಯಶಸ್ವಿಯಾಗಿ ಅನುಷ್ಠಾನ ಮಾಡುವ ಉದ್ದೇಶದಿಂದ ರೂಪುರೇಷೆ ಸಿದ್ದ ಮಾಡಿಕೊಳ್ಳಲಾಗುತ್ತಿದ್ದು, ಗ್ರಾಮೀಣ ಜನರಿಗೆ ಉದ್ಯೋಗ ಕಲ್ಪಿಸುವ ಜೊತೆಗೆ ಮೂಲ ಸೌಕರ್ಯ ಅಭಿವೃದ್ಧಿ ಕಾಮಗಾರಿ ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಬೇಕು ಎಂದರು.ವಿಬಿಜಿ ರಾಮ್‌ಜಿ ಕಾಯ್ದೆ ವೈಶಿಷ್ಟಗಳು, ರಚನೆ ಮತ್ತು ಸಾಂಸ್ಥಿಕ ಚೌಕಟ್ಟು, ಯೋಜನಾ ಪ್ರಕ್ರಿಯೆಯ ಹಂತಗಳು ಮತ್ತು ಒಗ್ಗೂಡಿಸುವಿಕೆ ಬಗ್ಗೆ ಸಹಾಯಕ ನಿರ್ದೇಶಕರಾದ ಎಂ.ಡಿ.ಶ್ರೀನಿವಾಸ್ (ಗ್ರಾ.ಉ) ಮಾಹಿತಿ ನೀಡಿದರು.ಯೋಜನೆ ಅಡಿಯಲ್ಲಿ ತಂತ್ರಜ್ಞಾನದ ಪಾತ್ರ ಮತ್ತು ಅನುಮತಿಸಲಾದ ಕಾಮಗಾರಿ ಬಗ್ಗೆ ತಾಲೂಕು ಐಇಸಿ ಸಂಯೋಜಕ ನರೇಂದ್ರ ಮಾಹಿತಿ ನೀಡಿದರು.

ಅರ್ಹ ಗ್ರಾಮೀಣ ಕುಟುಂಬಕ್ಕೆ ಒಂದು ಆರ್ಥಿಕ ವರ್ಷದಲ್ಲಿ 125 ದಿನಗಳ ಉದ್ಯೋಗ ಕಲ್ಪಿಸಲಾಗುವುದು. (ಗಂಡು ಹೆಣ್ಣಿಗೆ ಸಮಾನ ಕೂಲಿ ರೂ.382.) ಈ ಯೋಜನೆಯು ಕೇಂದ್ರ ಸರ್ಕಾರದ ಮಹತ್ವಕಾಂಕ್ಷೆಯ ದೃಷ್ಟಿಕೋನವಾಗಿದ್ದು, ಸ್ವಾತಂತ್ರ್ಯದ 100 ವರ್ಷಗಳ ನೆನಪಿಗಾಗಿ 2047ರ ವೇಳೆಗೆ ಭಾರತವನ್ನು ಸಂಪೂರ್ಣ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ಗುರಿ ಹೊಂದಿದೆ ಎಂದು ಮಾಹಿತಿ ನೀಡಿದರು. ಕಾರ್ಯಗಾರದಲ್ಲಿ ವಿವಿಧ ಗ್ರಾಮ ಪಂಚಾಯಿತಿಗಳ ಆಡಳಿತಾಧಿಕಾರಿ, ವಿರಾಜಪೇಟೆ/ ಪೊನ್ನಂಪೇಟೆ ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳು, ನರೇಗಾ ಯೋಜನೆಯ ತಾಂತ್ರಿಕ ಸಿಬ್ಬಂದಿ ವರ್ಗದವರು ಹಾಗೂ ಗ್ರಾಮ ಪಂಚಾಯಿತಿ ಡೇಟಾ ಎಂಟ್ರಿ ಅಪರೇಟರ್, ಇತರರು ಉಪಸ್ಥಿತರಿದ್ದರು.