ವಿವೇಕಾನಂದ ಪದವಿಪೂರ್ವ ಕಾಲೇಜಿನ ಕೇಶವ ಸಂಕಲ್ಪ ಸಭಾಂಗಣದಲ್ಲಿ ನಡೆದ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿ-ಪೋಷಕರ ಸಮಾವೇಶ ?ವಿವೇಕ ಸಂಕಲ್ಪ-೨೦೨೬ ಇದರಲ್ಲಿ ‘ಸುಗಮ ಪಾಲನೆಗೆ ಹೊಸ ತಲೆಮಾರಿನ ಸವಾಲುಗಳು’
ಪುತ್ತೂರು: ಯಾವ ಮಗುವಿಗೆ ತಂದೆ, ತಾಯಿಯ ಪ್ರೀತಿ, ಮಮತೆ, ವಿಶ್ವಾಸ ದೊರಕುವುದೋ, ಆ ಮಗು ಯಾವುದೇ ದುಷ್ಚಟಗಳಿಗೆ ಬಲಿಯಾಗುವುದಿಲ್ಲ. ಉತ್ತಮ ಪೋಷಕತ್ವದಿಂದ ಮಕ್ಕಳ ಭವಿಷ್ಯ ಸುಭದ್ರವಾಗಿ ರೂಪುಗೊಳ್ಳಲು ಸಾಧ್ಯ ಎಂದು ಉಡುಪಿ ಡಾ. ಎ. ವಿ. ಬಾಳಿಗ ಸ್ಮಾರಕ ಆಸ್ಪತ್ರೆ ಮನೋವೈದ್ಯ ಹಾಗೂ ಲೇಖಕ ಡಾ.ವಿರೂಪಾಕ್ಷ ದೇವರಮನೆ ಹೇಳಿದರು.
ಅವರು ವಿವೇಕಾನಂದ ಪದವಿಪೂರ್ವ ಕಾಲೇಜಿನ ಕೇಶವ ಸಂಕಲ್ಪ ಸಭಾಂಗಣದಲ್ಲಿ ನಡೆದ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿ-ಪೋಷಕರ ಸಮಾವೇಶ ?ವಿವೇಕ ಸಂಕಲ್ಪ-೨೦೨೬ ಇದರಲ್ಲಿ ‘ಸುಗಮ ಪಾಲನೆಗೆ ಹೊಸ ತಲೆಮಾರಿನ ಸವಾಲುಗಳು’ ಎಂಬ ವಿಷಯದ ಕುರಿತು ಪೋಷಕರನ್ನುದ್ದೇಶಿಸಿ ಮಾತನಾಡಿದರು. ಹದಿ ವಯಸ್ಸು ಎನ್ನುವುದು ವ್ಯಕ್ತಿಯ ಬೆಳವಣಿಗೆಯಲ್ಲಿ ಅತ್ಯಂತ ಸೂಕ್ಷ್ಮವಾದ ಹಂತ. ಈ ಹಂತದಲ್ಲಿ ಮಕ್ಕಳಿಗೆ ಸೂಕ್ತ ಮಾರ್ಗದರ್ಶನದ ಕೊರತೆ ಉಂಟಾದಲ್ಲಿ ಮುಂದಿನ ದಿನಗಳಲ್ಲಿ ಗಂಭೀರ ಸಮಸ್ಯೆಗಳು ತಲೆದೋರಬಹುದು ಎಂದು ಹೇಳಿದರು.ಅಧ್ಯಕ್ಷತೆ ವಹಿಸಿದ್ದ ವಿವೇಕಾನಂದ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ರವೀಂದ್ರ ಪಿ. ಮಾತನಾಡಿ, ಭಾರತೀಯ ಆಚಾರ-ವಿಚಾರ, ಸಂಸ್ಕೃತಿಯ ಅಡಿಪಾಯದೊಂದಿಗೆ ತಲೆಯೆತ್ತಿದ ಸಂಸ್ಥೆಗೆ ಸುಮಾರು ಏಳಕ್ಕಿಂತಲೂ ಹೆಚ್ಚಿನ ರಾಜ್ಯಗಳಿಂದ 27 ಜಿಲ್ಲೆಗಳಿಂದ ವಿದ್ಯಾರ್ಥಿಗಳು ಸೇರ್ಪಡೆಗೊಂಡಿರುವುದು ನಮಗೆಲ್ಲರಿಗೂ ಹೆಮ್ಮೆಯ ವಿಷಯ ಎಂದರು. ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ೫೯೦ ಕ್ಕಿಂತ ಅಧಿಕ ಅಂಕ ಗಳಿಸಿದ ಸಾಧಕ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಕಾಲೇಜಿನಲ್ಲಿ ಲಭ್ಯವಿರುವ ಜೆ.ಇ.ಇ, ಕೆ.ಸಿ.ಇ.ಟಿ, ನೀಟ್ ಪ್ರವೇಶ ಪರೀಕ್ಷೆಗಳ ತರಬೇತಿ ಮಾಹಿತಿಗಳನ್ನು ಹಾಗೂ ವಿದ್ಯಾರ್ಥಿಗಳ ಅಂಕಗಳನ್ನು ದಾಖಲಿಸುವ ಕುರಿತಾದ ಮಾಹಿತಿಗಳನ್ನು ಉಪನ್ಯಾಸಕ ಭೀಮ ಭಾರಧ್ವಾಜ್ ಹಾಗೂ ಶ್ಯಾಮ್ ಪ್ರಸಾದ್ ನೀಡಿದರು. ವಸತಿ ನಿಲಯದ ಮುಖ್ಯ ನಿಯಮಪಾಲಕ ಚೇತನ್ ವಸತಿ ನಿಲಯದ ನಿಯಮಗಳ ಬಗ್ಗೆ ಮಾಹಿತಿ ನೀಡಿದರು. ಬಳಿಕ ವಿದ್ಯಾರ್ಥಿಗಳಿಗೆ ವೈದೇಹಿ ಸಭಾಂಗಣದಲ್ಲಿ ಮುಂದಿನ ಶೈಕ್ಷಣಿಕ ಚಟುವಟಿಕೆಗಳ ಕುರಿತು ಸೂಚನೆಗಳನ್ನು ಭೌತಶಾಸ್ತ್ರ ವಿಭಾಗದ ಉಪನ್ಯಾಸಕ ಹರೀಶ್ ಶಾಸ್ತ್ರಿ ನೀಡಿದರು.ಕಾಲೇಜು ಆಡಳಿತ ಮಂಡಳಿ ಸದಸ್ಯೆ ವತ್ಸಲಾ ರಾಜ್ಞಿ ಹಾಗೂ ಡಾ.ಕೆ.ಎನ್. ಸುಬ್ರಹ್ಮಣ್ಯ ಉಪಸ್ಥಿತರಿದ್ದರು. ಪ್ರಾಂಶುಪಾಲ ದೇವಿಚರಣ್ ರೈ ಎಂ. ಸ್ವಾಗತಿಸಿದರು. ರಸಾಯನಶಾಸ್ತ್ರ ವಿಭಾಗದ ಉಪನ್ಯಾಸಕಿ ದಯಾಮಣಿ ಟಿ. ಕೆ ವಂದಿಸಿದರು. ಹರ್ಷಿತಾ ಪಿ. ನಿರೂಪಿಸಿದರು.