ಸಾರಾಂಶ
ಕನ್ನಡಪ್ರಭ ವಾರ್ತೆ, ತುಮಕೂರುತೀವ್ರ ಕುತೂಹಲ ಮೂಡಿಸಿದ್ದ ತುಮಕೂರು ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ (ತುಮುಲ್) ಅಧ್ಯಕ್ಷ ಸ್ಥಾನಕ್ಕೆ ಬುಧವಾರ ನಡೆದ ಚುನಾವಣೆಯಲ್ಲಿ ಪಾವಗಡ ಕ್ಷೇತ್ರದ ಶಾಸಕ ಎಚ್.ವಿ. ವೆಂಕಟೇಶ್ ಅವರು ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಬೆಳಿಗ್ಗೆ 9 ಗಂಟೆಗೆ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಶಾಸಕ ವೆಂಕಟೇಶ್ 2 ನಾಮಪತ್ರ ಹಾಗೂ ಎನ್ಡಿಎ ಅಭ್ಯರ್ಥಿಯಾಗಿ ಶಿರಾ ಕ್ಷೇತ್ರದ ಎಸ್.ಆರ್. ಗೌಡ ನಾಮಪತ್ರ ಸಲ್ಲಿಸಿದರು. ಮಧ್ಯಾಹ್ನ 12 ಗಂಟೆಯಾದರೂ ಯಾರು ನಾಮಪತ್ರವನ್ನು ಹಿಂಪಡೆಯದ ಕಾರಣ ಚುನಾವಣಾಧಿಕಾರಿ ಗೌರವ್ ಕುಮಾರ್ ಶೆಟ್ಟಿ ಚುನಾವಣೆ ಪ್ರಕ್ರಿಯೆ ಮುಂದುವರೆಸಿದರು. ನಂತರ ಗೌಪ್ಯ ಮತದಾನ ನಡೆಯಿತು.
ಶಾಸಕ ಹೆಚ್.ವಿ.ವೆಂಕಟೇಶ್ ಅವರ ಪರವಾಗಿ 9 ಮತಗಳು, ಎಸ್.ಆರ್.ಗೌಡ ಪರವಾಗಿ 5 ಮತಗಳು ಚಲಾವಣೆಗೊಂಡ ಹಿನ್ನೆಲೆಯಲ್ಲಿ ಶಾಸಕ ವೆಂಕಟೇಶ್ ಅವರು ತುಮುಲ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಘೋಷಿಸಿದರು. ತುಮಕೂರು ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಅಧ್ಯಕ್ಷ ಗದ್ದುಗೆಗೇರಲು ತೀವ್ರ ಪೈಪೋಟಿಯೇ ನಡೆದಿತ್ತು. ಆದರೆ ಇತ್ತೀಚೆಗೆ ನಡೆದ ಅಚ್ಚರಿ ಬೆಳವಣಿಗೆಯಲ್ಲಿ ಪಾವಗಡ ಶಾಸಕ ಎಚ್.ವಿ. ವೆಂಕಟೇಶ್ ಅವರನ್ನು ಸರ್ಕಾರ ನಾಮ ನಿರ್ದೇಶನ ಸದಸ್ಯರಾಗಿ ನೇಮಕ ಮಾಡಿತ್ತು. ಇದೇ ಮೊದಲ ಬಾರಿಗೆ ತುಮುಲ್ ಇತಿಹಾಸದಲ್ಲಿ ನಾಮನಿರ್ದೇಶಿತ ಸದಸ್ಯರು ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.ತುಮುಲ್ನಲ್ಲಿ 10 ಮಂದಿ ಚುನಾಯಿತ ನಿರ್ದೇಶಕರು, ನಾಮ ನಿರ್ದೇಶಿತರು ಹಾಗೂ ಅಧಿಕಾರಿಗಳು ಸೇರಿ ಒಟ್ಟು 15 ಮಂದಿ ಮತದಾನ ಮಾಡುವ ಹಕ್ಕು ಹೊಂದಿದ್ದರು. ಈ ಪೈಕಿ ಕಾಂಗ್ರೆಸ್ ಬೆಂಬಲಿತ ನಿರ್ದೇಶಕರು ಐವರು, ಒಬ್ಬರು ಕೆಎಂಎಫ್ ಪ್ರತಿನಿಧಿ, ಒಬ್ಬರು ಸರ್ಕಾರದಿಂದ ನಾಮ ನಿರ್ದೇಶಿತ ಸದಸ್ಯರು , ಜಿಲ್ಲಾ ಸಹಕಾರ ಸಂಘಗಳ ಜಂಟಿ ನಿಬಂಧಕರು, ಪಶು ಸಂಗೋಪನಾ ಇಲಾಖೆಯ ಉಪನಿರ್ದೇಶಕರು, ಎನ್ಡಿಡಿಬಿಯ ಒಬ್ಬರು ಮತ ಚಲಾಯಿಸುವ ಹಕ್ಕು ಹೊಂದಿದ್ದರು. ಈ ಬಾರಿ ತುಮುಲ್ ಅಧ್ಯಕ್ಷ ಸ್ಥಾನದ ಗದ್ದುಗೆಗೇರಲು ಗುಬ್ಬಿ ಶಾಸಕ ಎಸ್.ಆರ್. ಶ್ರೀನಿವಾಸ್ ರವರ ಪತ್ನಿ ಭಾರತಿದೇವಿ, ಮಧುಗಿರಿಯ ನಿರ್ದೇಶಕ ಹಾಗೂ ಸಹಕಾರ ಸಚಿವ ಕೆ.ಎನ್. ರಾಜಣ್ಣನವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ನಾಗೇಶ್ಬಾಬು, ಶಿರಾ ನಿರ್ದೇಶಕ ಎಸ್.ಆರ್. ಗೌಡ, ತಿಪಟೂರು ತಾಲೂಕು ಮಾದಿಹಳ್ಳಿ ಪ್ರಕಾಶ್ ಅವರ ನಡುವೆ ತೀವ್ರ ಪೈಪೋಟಿ ನಡೆದಿತ್ತು. ಆದರೆ ಅಚ್ಚರಿ ಬೆಳವಣಿಗೆಯಲ್ಲಿ ಪಾವಗಡ ಶಾಸಕ ಎಚ್.ವಿ. ವೆಂಕಟೇಶ್ ಅವರು ಅಧ್ಯಕ್ಷರಾಗಿ ಆಯ್ಕೆಯಾಗುವ ಚುನಾಯಿತ ಸದಸ್ಯರ ಎಲ್ಲ ಕಸರತ್ತುಗಳಿಗೆ ತೆರೆ ಬಿದ್ದಂತಾಗಿದೆ.
ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಎಚ್.ವಿ. ವೆಂಕಟೇಶ್ ಅವರು, ತುಮಕೂರು ಹಾಲು ಒಕ್ಕೂಟದಲ್ಲಿ ಎಲ್ಲ ನಿರ್ದೇಶಕರ ಸಹಕಾರ ಪಡೆದು ಉತ್ತಮವಾಗಿ ಆಡಳಿತ ನಡೆಸುತ್ತೇನೆ ಎಂದರು. ತುಮಕೂರು ಹಾಲು ಒಕ್ಕೂಟದ ಎಲ್ಲ ನಿರ್ದೇಶಕರನ್ನು ಒಗ್ಗೂಡಿಸಿಕೊಂಡು ಉತ್ತಮವಾಗಿ ಕೆಲಸ ಮಾಡುತ್ತೇನೆ. ಮುಂದಿನ ದಿನಗಳಲ್ಲಿ ಒಕ್ಕೂಟದಲ್ಲಿ ಅಗತ್ಯ ಇರುವ ಬದಲಾವಣೆ ತರಲು ಸಹ ಶ್ರಮಿಸುತ್ತೇನೆ ಎಂದು ಅವರು ತಿಳಿಸಿದರು.ಗೃಹ ಸಚಿವ ಡಾ. ಜಿ. ಪರಮೇಶ್ವರ್, ಸಹಕಾರ ಸಚಿವ ಕೆ.ಎನ್. ರಾಜಣ್ಣ ಹಾಗೂ ಪಕ್ಷದ ಎಲ್ಲ ನಾಯಕರ ಆಶೀರ್ವಾದದಿಂದ ಅಧ್ಯಕ್ಷನಾಗಿ ಆಯ್ಕೆಯಾಗಿದ್ದೇನೆ. ನನ್ನ ಆಯ್ಕೆಗೆ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಹೇಳಿದರು.ತುಮುಲ್ ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಶಾಸಕ ವೆಂಕಟೇಶ್ ಅವರು ಗೆಲುವು ಸಾಧಿಸಿದ್ದರಿಂದ ಪಾವಗಡ ತಾಲೂಕಿನಿಂದ ಆಗಮಿಸಿದ್ದ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಅವರ ಬೆಂಬಲಿಗರು ತುಮುಲ್ ಆಡಳಿತ ಕಚೇರಿ ಮುಂಭಾಗ ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿದರು. ತಮ್ಮ ನೆಚ್ಚಿನ ನಾಯಕ ಅಧ್ಯಕ್ಷರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಕೈ ಕಾರ್ಯಕರ್ತರ ಹರ್ಷೋದ್ಘಾರ ಮುಗಿಲು ಮುಟ್ಟಿತ್ತು.
ಈ ಸಂದರ್ಭದಲ್ಲಿ ಪಾವಗಡ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೇಶ್ ಬಾಬು, ಪುರಸಭಾಧ್ಯಕ್ಷ ರಾಜೇಶ್, ಸದಸ್ಯ ರವಿ, ತುಮಕೂರು ಎಪಿಎಂಸಿ ಮಾಜಿ ಅಧ್ಯಕ್ಷ ಉಮೇಶ್, ಮುಖಂಡರಾದ ಮಂಜುನಾಥ್, ಸುರೇಶ್, ಹನುಮಂತರಾಯಪ್ಪ, ಆನಂದಪ್ಪ, ಹೆಚ್.ಜಿ. ರಂಗಪ್ಪ, ಗ್ರಾ.ಪಂ. ಸದಸ್ಯರಾದ ಶ್ರೀರಾಮ್, ಪ್ರಕಾಶ್ ಸೇರಿದಂತೆ ಹಲವು ಮಂದಿ ಪಾಲ್ಗೊಂಡಿದ್ದರು. ತುಮಕೂರು ಹಾಲು ಒಕ್ಕೂಟದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಶಾಸಕ ಹೆಚ್.ವಿ. ವೆಂಕಟೇಶ್ ಅವರನ್ನು ಒಕ್ಕೂಟದ ನಿರ್ದೇಶಕರುಗಳಾದ ಎಚ್.ಎ. ನಂಜೇಗೌಡ, ಕೆ.ಪಿ. ಭಾರತಿದೇವಿ, ಬಿ.ಎನ್. ಶಿವಪ್ರಕಾಶ್, ಎಂ.ಕೆ. ಪ್ರಕಾಶ್, ಸಿ.ವಿ. ಮಹಲಿಂಗಯ್ಯ, ಡಿ. ಕೃಷ್ಣಕುಮಾರ್, ಬಿ. ನಾಗೇಶ್ಬಾಬು, ಸಿದ್ದಗಂಗಯ್ಯ, ಎಸ್.ಆರ್. ಗೌಡ, ಚಂದ್ರಶೇಖರರೆಡ್ಡಿ, ಅಶ್ವಥ್ ನಾರಾಯಣ, ಆಡಳಿತಾಧಿಕಾರಿ ಉಮೇಶ್, ವ್ಯವಸ್ಥಾಪಕ ನಿರ್ದೇಶಕ ಶ್ರೀನಿವಾಸ್ ಸೇರಿದಂತೆ ಹಾಲು ಒಕ್ಕೂಟದ ಅಧಿಕಾರಿಗಳು ಮತ್ತು ಸಿಬ್ಬಂದಿ ಅಭಿನಂದಿಸಿದರು. ಇದಾದ ನಂತರ ನೂತನ ಅಧ್ಯಕ್ಷ ಎಚ್.ವಿ. ವೆಂಕಟೇಶ್ ಅವರು ಸಿದ್ದಾರ್ಥ ಮೆಡಿಕಲ್ ಕಾಲೇಜಿಗೆ ತೆರಳಿ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ಹಾಗೂ ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರನ್ನು ಭೇಟಿ ಮಾಡಿ ಪುಷ್ಪಗುಚ್ಛ ನೀಡಿ ಅಭಿನಂದನೆ ಸಲ್ಲಿಸಿದರು. ಸಚಿವರುಗಳು ಸಹ ನೂತನ ಅಧ್ಯಕ್ಷ ವೆಂಕಟೇಶ್ರವರಿಗೆ ಅಭಿನಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾಜಿ ಸಚಿವ ವೆಂಕಟರಮಣಪ್ಪ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರಗೌಡ ಇದ್ದರು.