ಕನ್ನಡಪ್ರಭ ವಾರ್ತೆ ಮೈಸೂರು

ನಾವು ಯಾವುದನ್ನು ಶಿಕ್ಷಣ, ಸಂಸ್ಕೃತಿ, ಧರ್ಮ ಅಥವಾ ಬದುಕು ಎಂದು ಭಾವಿಸಿದ್ದೇವೆಯೋ ಅದಕ್ಕೆ ಮಾತೃಸ್ಪರ್ಶದ ಸಂವೇದನೆ ಬಹಳ ಮುಖ್ಯ ಎಂದು ಜೆಎಸ್ಎಸ್ ಮಹಾವಿದ್ಯಾಪೀಠ ಕಾಲೇಜು ಶಿಕ್ಷಣ ವಿಭಾಗದ ನಿರ್ದೇಶಕ ಪ್ರೊ. ಮೊರಬದ ಮಲ್ಲಿಕಾರ್ಜುನ ಹೇಳಿದರು.

ನಗರದ ಊಟಿ ರಸ್ತೆಯ ಜೆಎಸ್ಎಸ್ ಪದವಿಪೂರ್ವ ಕಾಲೇಜಿನ ಸುವರ್ಣ ಮಹೋತ್ಸವ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ 2026-27ನೇ ಶೈಕ್ಷಣಿಕ ಸಾಲಿನ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಸಾಂಸ್ಕೃತಿಕ ಮತ್ತು ಕ್ರೀಡಾ ವೇದಿಕೆಗಳ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.

ಮನುಷ್ಯನ ಅಂತರಂಗದಲ್ಲಿ ಸುಪ್ತವಾಗಿರುವ ಸತ್ವವನ್ನು ಅರಳಿಸುವ ಶಕ್ತಿ ಇರುವುದೇ ಆ ಮಾತೃಸ್ಪರ್ಶದಲ್ಲಿ. ವಿದ್ಯಾರ್ಥಿಗಳ ಅಂತರಂಗದಲ್ಲಿರುವ ಪ್ರತಿಭೆ, ಸಾಮರ್ಥ್ಯಗಳನ್ನು ಅರಳಿಸುವುದೇ ನಿಜವಾದ ಶಿಕ್ಷಣ ಎಂದು ವಿವೇಕಾನಂದರು ಹೇಳಿರುವುದಾಗಿ ತಿಳಿಸಿದರು.

ಕಾರ್ಯಕ್ರಮ ಉದ್ಘಾಟಿಸಿದ ಡಿಡಿಪಿಯು ಎಂ.ಪಿ. ನಾಗಮ್ಮ ಮಾತನಾಡಿ, ಶಿಕ್ಷಣ ಎನ್ನುವುದು ಕೇವಲ ಪುಸ್ತಕಗಳ ಓದಿಗಷ್ಟೇ ಸೀಮಿತ ಎಂದು ಪರಿಭಾವಿಸಬಾರದು. ಶಿಕ್ಷಣ ಹಾಗೂ ಇತರ ಕ್ಷೇತ್ರಗಳಲ್ಲಿ ಹಿಂದೆಂದಿಗಿಂತಲೂ ಇಂದು ಅವಕಾಶಗಳು ಹೆಚ್ಚಾಗಿವೆ. ಕೀಳಾರಿಮೆಯನ್ನು ಬಿಟ್ಟು ವಿದ್ಯಾಭ್ಯಾಸದ ಜೊತೆ ಜೊತೆಗೇ ವಿದ್ಯಾರ್ಥಿಗಳು ತಮಗೆ ಪ್ರತಿಭೆ ಇರುವ ವಿವಿಧ ಕ್ಷೇತ್ರಗಳಲ್ಲಿ ತೊಡಗಿಕೊಳ್ಳಬೇಕು. ಸಮಾಜ ಕಂಟಕ ವಿಷಯಗಳಿಂದ ದೂರವಿರಬೇಕು ಎಂದು ಹೇಳಿದರು.


ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಜೆಎಸ್ಎಸ್ ಕಾಲೇಜು ಸಮುಚ್ಚಯದ ಮುಖ್ಯ ಕಾರ್ಯನಿರ್ವಾಹಕ ಪ್ರೊ.ಬಿ.ವಿ. ಸಾಂಬಶಿವಯ್ಯ ಅವರು, . ವಿದ್ಯಾರ್ಥಿಗಳಲ್ಲಿರುವ ಸುಪ್ತ ಕೌಶಲ್ಯ ಹೊರತರುವ ಉದ್ದೇಶದಿಂದಲೇ ಈ ಹಂತದಲ್ಲಿ ಸಾಂಸ್ಕೃತಿಕ ವೇದಿಕೆಗಳು, ಕ್ರೀಡಾ ಚಟುವಟಿಕೆಗಳು ಹಾಗೂ ಎನ್.ಸಿಸಿ, ಎನ್ಎಸ್ಎಸ್, ಸ್ಕೌಟ್ಸ್, ರೆಡ್ ಕ್ರಾಸ್, ಮುಂತಾದ ಯೋಜನೆಗಳಿರುವುದು ಎಂದರು.

ಜೆಎಸ್ಎಸ್ (ಪಿಡಿಎ)ವಾಸ್ತುಶಿಲ್ಪ ವಿಭಾಗದ ಉಪನ್ಯಾಸಕಿ ಹಾಗೂ ಗಾಯಕಿ ಅಮೂಲ್ಯ ಮಾತನಾಡಿದರು.

ಅಂತಾರಾಷ್ಟ್ರೀಯ ಅಥ್ಲೆಟಿಕ್ ಕ್ರೀಡಾಪಟು ವಿ. ಅಂಬಿಕಾ ಮಾತನಾಡಿ, ಪ್ರತಿಯೊಬ್ಬರೂ ದಿನಕ್ಕೆ ಅರ್ಧ ಗಂಟೆಯಷ್ಟಾದರೂ ಸಮಯವನ್ನು ಯಾವುದಾದರೊಂದು ಬಗೆಯ ಕ್ರೀಡೆಯಲ್ಲಿ ತೊಡಗಿಕೊಳ್ಳಲು ಮೀಸಲಿಡಬೇಕು ಎಂದರು.

2025-26 ನೇ ಸಾಲಿನ ಪಿಯುಸಿ ಅಂತಿಮ ಪರೀಕ್ಷೆಯಲ್ಲಿ ಅತಿಹೆಚ್ಚು ಅಂಕ ಗಳಿಸಿದ ವಿವಿಧ ಸಂಯೋಜನೆಯ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿದರು.

ಜೆಎಸ್ಎಸ್ ಪಿಯು ಕಾಲೇಜು ಪ್ರಾಂಶುಪಾಲ ಎಚ್.ಪಿ. ಮಹದೇವಸ್ವಾಮಿ, ಸಾಂಸ್ಕೃತಿಕ ಸಮಿತಿ ಸಂಚಾಲಕಿ ವಿ. ವಾಣಿ ಹಾಗೂ ಕ್ರೀಡಾ ಸಮಿತಿ ಸಂಚಾಲಕ ಟಿ. ಅರವಿಂದ ಇದ್ದರು.