ಸಿ.ಕೆ. ನಾಗರಾಜ

ಹೊಸಪೇಟೆ: 2026-27ನೇ ಶೈಕ್ಷಣಿಕ ಸಾಲಿನಲ್ಲಿ ಜಿಲ್ಲೆಯ ಶಾಲೆಗಳು ಮೇ 29ರಿಂದ ಆರಂಭವಾಗಲಿವೆ. ಶಾಲೆ ಆರಂಭವಾಗಲು ಇನ್ನು ಕೇವಲ ಏಳು ದಿನಗಳು ಮಾತ್ರ ಬಾಕಿ ಇದೆ. ಆದರೆ ಸರ್ಕಾರಿ ಶಾಲೆಗಳಲ್ಲಿ ಬಹುತೇಕ ಶಿಕ್ಷಕರ ಹುದ್ದೆಗಳು ಖಾಲಿ ಉಳಿದಿವೆ.

ಜಿಲ್ಲೆಯ ಸರ್ಕಾರಿ ಪ್ರಾಥಮಿಕ, ಪ್ರೌಢಶಾಲೆಗಳಲ್ಲಿ 6614 ಶಿಕ್ಷಕರ ಹುದ್ದೆಗಳು ಮಂಜೂರಾಗಿವೆ. ಈ ಪೈಕಿ 5403 ಶಿಕ್ಷಕರು ಕಾರ್ಯ ನಿರ್ವಹಿಸುತ್ತಿದ್ದು, 1211 ಶಿಕ್ಷಕರ ಹುದ್ದೆಗಳು ಖಾಲಿ ಇವೆ.

ಹೂವಿನಹಡಗಲಿ ತಾಲೂಕಿನಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ 782 ಹುದ್ದೆಗಳು ಮಂಜೂರಾಗಿದ್ದು, ಇವುಗಳಲ್ಲಿ 674 ಶಿಕ್ಷಕರು ಕಾರ್ಯ ನಿರ್ವಹಿಸುತ್ತಿದ್ದಾರೆ. 108 ಶಿಕ್ಷಕರ ಹುದ್ದೆಗಳು ಖಾಲಿ ಇವೆ. ಹಗರಿಬೊಮ್ಮನಹಳ್ಳಿ ತಾಲೂಕಿನಲ್ಲಿ 878 ಹುದ್ದೆಗಳು ಮಂಜೂರಾಗಿದ್ದು, ಇವುಗಳಲ್ಲಿ 704 ಶಿಕ್ಷಕರು ಕಾರ್ಯ ನಿರ್ವಹಿಸುತ್ತಿದ್ದು, 174 ಶಿಕ್ಷಕರ ಹುದ್ದೆಗಳು ಖಾಲಿ ಇವೆ. ಹರಪನಹಳ್ಳಿ ತಾಲೂಕಿನಲ್ಲಿ 1328 ಹುದ್ದೆಗಳು ಮಂಜೂರಾಗಿದ್ದು, 1100 ಶಿಕ್ಷಕರು ಕಾರ್ಯ ನಿರ್ವಹಿಸುತ್ತಿದ್ದಾರೆ. 228 ಶಿಕ್ಷಕರ ಹುದ್ದೆಗಳು ಖಾಲಿ ಇವೆ. ಹೊಸಪೇಟೆ ತಾಲೂಕಿನಲ್ಲಿ 1037 ಹುದ್ದೆಗಳು ಮಂಜೂರಾಗಿದ್ದು, 805 ಶಿಕ್ಷಕರು ಕಾರ್ಯ ನಿರ್ವಹಿಸುತ್ತಿದ್ದಾರೆ. 232 ಶಿಕ್ಷಕರ ಹುದ್ದೆಗಳು ಖಾಲಿ ಇವೆ. ಕೂಡ್ಲಿಗಿ ತಾಲೂಕಿನಲ್ಲಿ 1373 ಹುದ್ದೆಗಳು ಮಂಜೂರಾಗಿದ್ದು, 1131 ಶಿಕ್ಷಕರು ಕಾರ್ಯ ನಿರ್ವಹಿಸುತ್ತಿದ್ದಾರೆ. 242 ಶಿಕ್ಷಕರ ಹುದ್ದೆಗಳು ಖಾಲಿ ಇವೆ.

ಪ್ರೌಢಶಾಲೆ:


ಹೂವಿನಹಡಗಲಿ ತಾಲೂಕಿನ ಸರ್ಕಾರಿ ಪ್ರೌಢ ಶಾಲೆಗಳಿಗೆ 245 ಹುದ್ದೆಗಳು ಮಂಜೂರಿದ್ದು, ಇವುಗಳಲ್ಲಿ 191 ಶಿಕ್ಷಕರು ಕಾರ್ಯ ನಿರ್ವಹಿಸುತ್ತಿದ್ದಾರೆ. 54 ಶಿಕ್ಷಕರ ಹುದ್ದೆ ಖಾಲಿ ಇವೆ. ಹಗರಿಬೊಮ್ಮನಹಳ್ಳಿ ತಾಲೂಕಿನಲ್ಲಿ 183 ಹುದ್ದೆಗಳು ಮಂಜೂರಾಗಿದ್ದು, ಇವುಗಳಲ್ಲಿ 158 ಶಿಕ್ಷಕರು ಕಾರ್ಯ ನಿರ್ವಹಿಸುತ್ತಿದ್ದಾರೆ. 25 ಶಿಕ್ಷಕರು ಹುದ್ದೆ ಖಾಲಿ ಇವೆ. ಹರಪನಹಳ್ಳಿ ತಾಲೂಕಿನಲ್ಲಿ 253 ಹುದ್ದೆಗಳು ಮಂಜೂರಾಗಿದ್ದು, ಇವುಗಳಲ್ಲಿ 217 ಶಿಕ್ಷಕರು ಕಾರ್ಯ ನಿರ್ವಹಿಸುತ್ತಿದ್ದಾರೆ. 36 ಶಿಕ್ಷಕರ ಹುದ್ದೆ ಖಾಲಿ ಇವೆ. ಹೊಸಪೇಟೆ ತಾಲೂಕಿನಲ್ಲಿ 299 ಹುದ್ದೆಗಳು ಮಂಜೂರಾಗಿದ್ದು, 242 ಶಿಕ್ಷಕರು ಕಾರ್ಯ ನಿರ್ವಹಿಸುತ್ತಿದ್ದಾರೆ. 57 ಶಿಕ್ಷಕರು ಹುದ್ದೆ ಖಾಲಿ ಇವೆ. ಕೂಡ್ಲಿಗಿ ತಾಲೂಕಿನಲ್ಲಿ 236 ಹುದ್ದೆಗಳು ಮಂಜೂರಾಗಿದ್ದು, 181 ಶಿಕ್ಷಕರು ಕಾರ್ಯ ನಿರ್ವಹಿಸುತ್ತಿದ್ದಾರೆ. 55 ಶಿಕ್ಷಕರ ಹುದ್ದೆಗಳು ಖಾಲಿ ಇವೆ.

ಶಿಕ್ಷಕರ ಕೊರತೆಯಿಂದ ಶೈಕ್ಷಣಿಕ ಚಟುವಟಿಕೆಗಳು ತೊಂದರೆಯಾಗುವ ಸಾಧ್ಯತೆ ಹೆಚ್ಚಾಗಿದೆ. ಸರ್ಕಾರಿ ಶಾಲೆಗಳಲ್ಲಿರುವ ಶಿಕ್ಷಕರ ಕೊರತೆ ನೀಗಿಸುವುದಕ್ಕೆ ಅತಿಥಿ ಶಿಕ್ಷಕರೇ ಪ್ರಮುಖ ಆಧಾರವಾಗಿದ್ದಾರೆ. ಬೇಡಿಕೆ ಇರುವಷ್ಟು ಶಿಕ್ಷಕರ ಹುದ್ದೆಗಳ ಭರ್ತಿಗೆ ಸರ್ಕಾರ ಒಲವು ತೋರದಿರುವುದರಿಂದ ಅತಿಥಿ ಶಿಕ್ಷಕರ ಅವಲಂಬನೆ ಅನಿವಾರ್ಯವಾಗಿದೆ. ಶಿಕ್ಷಕರ ಕೊರತೆಯಿಂದಾಗಿ ಮಕ್ಕಳ ಶೈಕ್ಷಣಿಕ ಪ್ರಗತಿ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ ಸಾಧ್ಯತೆ ಇದೆ. ಇದನ್ನು ಮನಗಂಡು ಶಿಕ್ಷಕರ ಕೊರತೆ ನೀಗಿಸುವ ದೃಷ್ಟಿಯಿಂದಲೇ ರಾಜ್ಯ ಸರ್ಕಾರ ಮತ್ತು ಶಾಲಾ ಶಿಕ್ಷಣ ಇಲಾಖೆ ತ್ವರಿತ ಕ್ರಮ ವಹಿಸಬೇಕಿದೆ. ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದಲ್ಲಿ 15 ಸಾವಿರ ಶಿಕ್ಷಕರ ನೇಮಕಾತಿಗೆ ಆದೇಶಿಸಿರುವುದರಿಂದ ಕಲ್ಯಾಣ ಕರ್ನಾಟಕದ ವಿಜಯನಗರ ಜಿಲ್ಲೆಯಲ್ಲಿ ಶಿಕ್ಷಕರ ನೇಮಕಾತಿಯಲ್ಲಿ ಬಹುಪಾಲು ಶಿಕ್ಷಕರ ಹುದ್ದೆಗಳು ಭರ್ತಿಯಾಗುವ ನಿರೀಕ್ಷೆ ಇದೆ.

ಜಿಲ್ಲೆಯ ಸರ್ಕಾರಿ ಪ್ರಾಥಮಿಕ, ಪ್ರೌಢಶಾಲೆಗಳಲ್ಲಿ ಸುಮಾರು 1211 ಶಿಕ್ಷಕರ ಹುದ್ದೆಗಳು ಖಾಲಿ ಇವೆ. ಜೂನ್ ಮೊದಲ ವಾರ ಅತಿಥಿ ಶಿಕ್ಷಕರ ನೇಮಕಕ್ಕೆ ಸರ್ಕಾರ ಅವಕಾಶ ಕಲ್ಪಿಸಲಿದ್ದು, ಸರ್ಕಾರದ ಸೂಚನೆಯಂತೆ ಅತಿಥಿ ಶಿಕ್ಷಕರ ನೇಮಕಕ್ಕೆ ಕ್ರಮ ವಹಿಸಲಾಗುವುದು. -ವೆಂಕಟೇಶ್‌ ರಾಮಚಂದ್ರಪ್ಪ, ಡಿಡಿಪಿಐ, ವಿಜಯನಗರ