ಸಾರಾಂಶ
ಹೊಸಪೇಟೆ: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ನಿಮಿತ್ತ ಸೆ.15ರಂದು ನಡೆಯಲಿರುವ ಮಾನವ ಸರಪಳಿ ಕಾರ್ಯಕ್ರಮಕ್ಕೆ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ.ಈಗಾಗಲೇ ಶಾಲಾ-ಕಾಲೇಜು ವಿದ್ಯಾರ್ಥಿಗಳು, ನರೇಗಾ ಕಾರ್ಮಿಕರು, ಆಶಾ, ಅಂಗನವಾಡಿ ಕಾರ್ಯಕರ್ತೆಯರು, ಸಂಘ-ಸಂಸ್ಥೆಗಳ ಪದಾಧಿಕಾರಿಗಳಿಗೆ ಸಂದೇಶ ರವಾನಿಸಲಾಗಿದೆ. ಮಾನವ ಸರಪಳಿಯಲ್ಲಿ 40 ಸಾವಿರ ಜನರು ಸೇರಿ ಯಶಸ್ವಿಗೊಳಿಸಲು ಎಲ್ಲ ಸಿದ್ಧತೆ ನಡೆದಿದೆ.
ಪ್ರಜಾಪ್ರಭುತ್ವದ ಏಕತೆ, ಸದೃಢತೆ, ಸಾಮರಸ್ಯಕ್ಕಾಗಿ ಮಾನವ ಸರಪಳಿ ರೂಪಿಸಿ, ಸಂವಿಧಾನದ ಜಾಗೃತಿ ಕಾರ್ಯಕ್ರಮ ನಡೆಸಲಾಗುತ್ತಿದೆ. ರಾಜ್ಯಾದ್ಯಂತ ನಡೆಯಲಿರುವ ಈ ಐತಿಹಾಸಿಕ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಕೊಪ್ಪಳ, ವಿಜಯನಗರ ಮತ್ತು ಬಳ್ಳಾರಿ ಜಿಲ್ಲೆಗಳನ್ನು ಒಂದು ವಿಭಾಗವನ್ನಾಗಿಸಲಾಗಿದೆ. ಹಾಗಾಗಿ ಮಾನವ ಸರಪಳಿ ಯಶಸ್ವಿಗೆ ವಿಜಯನಗರ ಜಿಲ್ಲಾಡಳಿತ ಕೂಡ ಸಕಲ ಸಿದ್ಧತೆ ಮಾಡಿಕೊಂಡಿದೆ.ಎಲ್ಲಿಂದ ಎಲ್ಲಿವರೆಗೆ?: ನಗರದ ಹತ್ತಿರದ ಟಿಬಿಡ್ಯಾಂ ಗಣೇಶ ಗುಡಿಯ ಬಳಿಯ ಮೊದಲನೇ ಸೇತುವೆಯಿಂದ ಆರಂಭವಾಗಿ ನಗರದ ಭುವನಹಳ್ಳಿ ವರೆಗೆ ಸುಮಾರು 40 ಕಿ.ಮೀ. ಉದ್ದ ನಡೆಯಲಿದೆ. ಈ ಮಾನವ ಸರಪಳಿ ರಚನೆಗೆ ಸಾವಿರಾರು ಸಂಖ್ಯೆಯಲ್ಲಿ ಜನರು ಸೇರಬೇಕಿದೆ. ಇದಕ್ಕಾಗಿ ಪ್ರೌಢಶಾಲೆ, ಹಾಸ್ಟೆಲ್ ಮತ್ತು ಕಾಲೇಜು ವಿದ್ಯಾರ್ಥಿಗಳು, ಸ್ವಸಹಾಯ ಸಂಘಗಳ ಸದಸ್ಯರು, ಎನ್.ಜಿ.ಒ.ಗಳು ಮತ್ತು ಸಾರ್ವಜನಿಕರು ಭಾಗವಹಿಸಲಿದ್ದಾರೆ. ಕೊಪಳ ಜಿಲ್ಲೆಯ ಗಡಿಯಿಂದ ಬಳ್ಳಾರಿ ಜಿಲ್ಲೆಯ ಗಡಿ ವರೆಗೆ ಮಾನವ ಸರಪಳಿಯಲ್ಲಿ ಜಿಲ್ಲೆ ಜನತೆ ಭಾಗವಹಿಸಲಿದ್ದಾರೆ.
ನೋಡಲ್ ಅಧಿಕಾರಿಗಳ ನಿಯೋಜನೆ: ಮಾನವ ಸರಪಳಿ ಯಶಸ್ವಿ ನಿರ್ವಹಣೆಗಾಗಿ ಪ್ರತಿ 100 ಮೀಟರ್ಗೆ ಒಬ್ಬರನ್ನು ಸೆಕ್ಟರ್ ಅಧಿಕಾರಿಗಳಾಗಿ ತಾಲೂಕು ಮಟ್ಟದ ಅಧಿಕಾರಿಗಳನ್ನು ಪ್ರತಿ 1 ಕಿ.ಮೀ.ಗೆ ಒಬ್ಬರಂತೆ ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ಪ್ರತಿ 3 ಕಿ.ಮೀ.ಗೆ ಒಬ್ಬರಂತೆ ನೋಡಲ್ ಅಧಿಕಾರಿಗಳಾಗಿ ನೇಮಕ ಮಾಡಲಾಗಿದೆ. ಮಕ್ಕಳನ್ನು ಸುರಕ್ಷಿತವಾಗಿ ಕರೆತರಲು ಶಾಲಾ ವಾಹನಗಳ ವ್ಯವಸ್ಥೆ ಕಲ್ಪಿಸಿದೆ. ಮಾನವ ಸರಪಳಿಯಲ್ಲಿ ಪಾಲ್ಗೊಳ್ಳುವ ಎಲ್ಲರಿಗೂ ಅಗತ್ಯ ಕುಡಿಯುವ ನೀರು, ವಿದ್ಯಾರ್ಥಿಗಳಿಗೆ ಬಿಸ್ಕೇಟ್ ವಿತರಣೆಗೂ ವ್ಯವಸ್ಥೆ ಮಾಡಲಾಗಿದೆ. ಹತ್ತು ಆ್ಯಂಬುಲೆನ್ಸ್ ವ್ಯವಸ್ಥೆ ಮಾಡಲಾಗಿದ್ದು, ವೈದ್ಯರು ಹಾಗೂ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ.ವೇಳಾಪಟ್ಟಿ: ಸೆ.15ರ ಬೆಳಗ್ಗೆ 9:30 ರಿಂದ 9:37ರವರೆಗೆ ಮಾನವ ಸರಪಳಿಯಲ್ಲಿ ಭಾಗವಹಿಸುವವರು ಸರತಿ ಸಾಲಿನಲ್ಲಿ ನಿಲ್ಲಲಿದ್ದಾರೆ. 9:37ರಿಂದ 9:40ರ ವರೆಗೆ ನಾಡಗೀತೆ, 9:40ರಿಂದ 9:55ರ ವರೆಗೆ ಭಾಷಣ, 9:55 ರಿಂದ 9:57ರ ವರೆಗೆ ಸಂವಿಧಾನ ಪ್ರಸ್ತಾವನೆ ಓದುವುದು. 9.57ರಿಂದ 9:59ರ ವರೆಗೆ ಮಾನವ ಸರಪಳಿಯಲ್ಲಿ ಕೈ, ಕೈ ಹಿಡಿದು ನಿಲ್ಲುವುದು. ಬೆಳಗ್ಗೆ 10 ಗಂಟೆಗೆ ಮಾನವ ಸರಪಳಿಯಲ್ಲಿಯೇ ಎರಡೂ ಕೈಗಳನ್ನು ಮೇಲೆತ್ತಿ "ಜೈ ಹಿಂದ್, ಜೈ ಕರ್ನಾಟಕ " ಘೋಷಣೆ ಮೊಳಗಲಿದೆ. ನಗರದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಸಂವಿಧಾನ ಪ್ರಸ್ತಾವನೆ ಓದುವ ಕಾರ್ಯಕ್ರಮ ಆಯೋಜಿಸಲಾಗಿದೆ. ಡ್ರೋನ್ ಕ್ಯಾಮೆರಾದ ಮೂಲಕ ಚಿತ್ರೀಕರಣಕ್ಕೂ ವ್ಯವಸ್ಥೆ ಮಾಡಲಾಗಿದೆ.
ವಿಜಯನಗರ ಜಿಲ್ಲೆಯಲ್ಲಿ ನಡೆಯುವ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಹೊಸಪೇಟೆ ನಗರ ಸೇರಿದಂತೆ ಜಿಲ್ಲೆಯ ಜನರು ಭಾಗಿಯಾಗಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎನ್ನುತ್ತಾರೆ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್.