ವಿಜಯಪುರ ಬಸ್‌ ನಿಲ್ದಾಣಕ್ಕೆ ರಾಣಿ ಚನ್ನಮ್ಮ ಹೆಸರು

| Published : May 03 2025, 12:17 AM IST

ಸಾರಾಂಶ

ವಿಜಯಪುರ ಕೇಂದ್ರ ಬಸ್‌ ನಿಲ್ದಾಣಕ್ಕೆ ಕಿತ್ತೂರು ಚನ್ನಮ್ಮ ಬಸ್ ನಿಲ್ದಾಣ ಎಂದು ಹೆಸರು ನಾಮಕರಣ ಮಾಡಲು ಸರ್ಕಾರ ಆದೇಶ

ಕನ್ನಡಪ್ರಭ ವಾರ್ತೆ ವಿಜಯಪುರ

ವಿಜಯಪುರ ಕೇಂದ್ರ ಬಸ್‌ ನಿಲ್ದಾಣಕ್ಕೆ ಕಿತ್ತೂರು ಚನ್ನಮ್ಮ ಬಸ್ ನಿಲ್ದಾಣ ಎಂದು ಹೆಸರು ನಾಮಕರಣ ಮಾಡಲು ಸರ್ಕಾರ ಆದೇಶ ಹೊರಡಿಸಿದೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ ತಿಳಿಸಿದ್ದಾರೆ.

ವಿಜಯಪುರ ಹೃದಯ ಭಾಗದ ಕೇಂದ್ರ ಬಸ್ ನಿಲ್ದಾಣದಲ್ಲಿ ಈಗಾಗಲೇ ಅಶ್ವಾರೂಢ ವೀರರಾಣಿ ಚನ್ನಮ್ಮನವರ ಪ್ರತಿಮೆ ಸ್ಥಾಪಿಸಲಾಗಿದೆ. ಶಕ್ತಿ ಯೋಜನೆ ಉದ್ಘಾಟನೆ ಸಂದರ್ಭದಲ್ಲಿ ಬಸ್ ನಿಲ್ದಾಣಕ್ಕೆ ರಾಣಿ ಚನ್ನಮ್ಮನವರ ಹೆಸರಿಡುತ್ತೇನೆ ಎಂದು ಭರವಸೆ ನೀಡಿದ್ದೆ. ಈ ಕುರಿತು ಸಿಎಂಗೆ ಪತ್ರ ಬರೆದಿದ್ದೆ. ಮುಖ್ಯಮಂತ್ರಿಗಳು ಕೇಂದ್ರ ಬಸ್ ನಿಲ್ದಾಣಕ್ಕೆ ಕಿತ್ತೂರು ಚನ್ನಮ್ಮನವರ ಹೆಸರಿಡಲು ಅಗತ್ಯ ಕ್ರಮ ಕೈಗೊಳ್ಳಲು ಸಾರಿಗೆ ಸಚಿವರಿಗೆ ಸೂಚಿಸಿದ್ದರು. ನನ್ನ ಕೋರಿಕೆ ಹಾಗೂ ಮುಖ್ಯಮಂತ್ರಿಗಳ ಸೂಚನೆ ಪರಿಗಣಿಸಿ ಇದೀಗ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಚನ್ನಮ್ಮ ಹೆಸರು ನಾಮಕರಣ ಮಾಡಲು ಆದೇಶ ಹೊರಡಿಸಿದ್ದಾರೆ ಎಂದು ತಿಳಿಸಿದ್ದಾರೆ.

ಅಲ್ಲದೇ, ವಿಜಯಪುರ ವಿಮಾನ ನಿಲ್ದಾಣಕ್ಕೆ ವಿಶ್ವಗುರು ಬಸವೇಶ್ವರರ ಹೆಸರು ನಾಮಕರಣಗೊಳಿಸಲಾಗಿದೆ. ಮಮದಾಪುರದಲ್ಲಿ 1200 ಎಕರೆ ಪ್ರದೇಶವನ್ನು ಸಿದ್ದೇಶ್ವರ ಶ್ರೀ ಜೀವವೈವಿದ್ಯತೆಯ ಪಾರಂಪರಿಕ ಸಂರಕ್ಷಿತ ಅರಣ್ಯ ಪ್ರದೇಶ ಎಂದು ಈಗಾಗಲೇ ಹೆಸರಿಸಲಾಗಿದೆ. ಮಹಿಳಾ ವಿಶ್ವವಿದ್ಯಾಲಯಕ್ಕೆ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ಎಂದು ನಾಮಕರಣಗೊಳಿಸಿದೆ. ಹೀಗೆ ಹಲವು ಪುಣ್ಯಪುರುಷರ ಹೆಸರು ನಾಮಕರಣಗೊಳಿಸುವುದರ ಮೂಲಕ ಅವರ ಆದರ್ಶಗಳು ಶಾಶ್ವತವಾಗಿ ಜನಮಾನಸದಲ್ಲಿ ನೆಲೆಗೊಳ್ಳುವಂತೆ ಮಾಡಲಾಗಿದೆ. ವಿಜಯಪುರದಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಗೆ ಆಗಮಿಸುವ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ವಿಜಯಪುರ ಕೇಂದ್ರ ಬಸ್ ನಿಲ್ದಾಣದಲ್ಲಿ ಸ್ಥಾಪಿಸಿರುವ ರಾಣಿ ಚನ್ನಮ್ಮನವರ ಬೃಹತ್ ಪ್ರತಿಮೆ ಅನಾವರಣ ಹಾಗೂ ನಾಮಕರಣಗೊಳಿಸುವರು ಎಂದು ಸಚಿವ ಎಂ.ಬಿ.ಪಾಟೀಲ ಪ್ರಕಟನೆಯಲ್ಲಿ ತಿಳಿಸಿದ್ದಾರೆ.