ಸಾರಾಂಶ
ಕೇವಲ ಅಲ್ಪಸಂಖ್ಯಾತರ ಮತಗಳಿಂದ ಮಾತ್ರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿದ್ದಿರಾ?
ಕನ್ನಡಪ್ರಭ ವಾರ್ತೆ ಬೆಳಗಾವಿ
ರೈತರಿಗೆ ಬರ ಪರಿಹಾರ ನೀಡಲು ಕೇಂದ್ರ ಸರ್ಕಾರದ ಕಡೆ ಬೊಟ್ಟು ಮಾಡುವ ಸಿಎಂ ಸಿದ್ದರಾಮಯ್ಯನವರು ಅಲ್ಪಸಂಖ್ಯಾತರಿಗೆ ₹10 ಸಾವಿರ ಕೋಟಿ ಕೊಡಲು ಎಲ್ಲಿಂದ ದುಡ್ಡು ತರುತ್ತಾರೆ?. ನೀವು ಕೇವಲ ಅಲ್ಪಸಂಖ್ಯಾತರ ಮತಗಳಿಂದ ಮಾತ್ರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿದ್ದಿರಾ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರಶ್ನಿಸಿದರು.ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಲ್ಪಸಂಖ್ಯಾತರಿಗೆ ₹10 ಸಾವಿರ ಕೋಟಿ ಕೊಡುತ್ತೇನೆ ಎಂದು ಹೇಳುವ ಮುಖ್ಯಮಂತ್ರಿಗೆ ರೈತರ ಸಮಸ್ಯೆಗಳಿಗೆ ಯಾಕೆ ಸ್ಪಂದಿಸಲು ಆಗುತ್ತಿಲ್ಲ. ನಿಮಗೆ ರಾಜಕೀಯ ಪುನರ್ಜನ್ಮ ಕೊಟ್ಟಿದ್ದು, ಉತ್ತರ ಕರ್ನಾಟಕದ ಬಾದಾಮಿ ವಿಧಾನಸಭೆ ಕ್ಷೇತ್ರ. ಹಾಗಾಗಿ, ಉತ್ತರ ಕರ್ನಾಟಕದ ಜನ, ರೈತರ ಬಗ್ಗೆ ಸ್ವಲ್ಪವಾದರೂ ಕಾಳಜಿ ಇದ್ದಿದ್ದರೆ ರಾಜ್ಯ ಸರ್ಕಾರ ಮತ್ತು ಮುಖ್ಯಮಂತ್ರಿಗಳು ಈ ರೀತಿ ವರ್ತಿಸುತ್ತಿರಲಿಲ್ಲ. ರಾಜ್ಯದ ಸಾಮಾನ್ಯ ಜನರು ಈ ಬಗ್ಗೆ ಪ್ರಶ್ನಿಸುತ್ತಿದ್ದಾರೆ. ನಾವು ಜವಾಬ್ದಾರಿಯುತ ವಿರೋಧ ಪಕ್ಷದ ಸ್ಥಾನದಲ್ಲಿದ್ದು ಸುಮ್ಮನೆ ಕುಳಿತುಕೊಳ್ಳಲು ಬರೋದಿಲ್ಲ. ಹಾಗಾಗಿ ನಮ್ಮದೇ ರೀತಿಯಲ್ಲಿ ಹೋರಾಟ ಮಾಡುತ್ತೇವೆ. ಈ ನಾಡಿಗೆ ಅನ್ನ ಹಾಕುವ ರೈತರ ಜತೆಗೆ ಬಿಜೆಪಿ ಎಂದಿಗೂ ನಿಲ್ಲುತ್ತದೆ ಎಂದು ಹೇಳಿದರು.
ಕಾಂಗ್ರೆಸ್ ಸಿಎಲ್ಪಿ ಸಭೆಗೆ ಎಸ್.ಟಿ.ಸೋಮಶೇಖರ್, ಶಿವರಾಮ ಹೆಬ್ಬಾರ್, ಎಚ್.ವಿಶ್ವನಾಥ ಭಾಗಿಯಾಗಿದ್ದ ವಿಚಾರಕ್ಕೆ ಪ್ರತಿಕ್ರಿಯಿಸಿ, ಇದರ ಬಗ್ಗೆ ಮಾಹಿತಿ ಸಿಕ್ಕಿದೆ. ಅವರ ಉದ್ದೇಶ ಏನು ಎಂಬುದನ್ನು ಚರ್ಚೆ ಮಾಡುತ್ತೇನೆ. ಇದು ಬಹಳ ಗಂಭೀರ ವಿಷಯ. ಶೀಘ್ರವೇ ಆ ಬಗ್ಗೆ ಚರ್ಚೆ ಮಾಡಲಿದ್ದೇನೆ ಎಂದರು.