ಶನಿವಾರಸಂತೆ: ಕಾಂಗ್ರೆಸ್ ಸರ್ಕಾರ ಯಾವಗಾಲದರೂ ಬೀಳಬಹುದು ಸರ್ಕಾರದಲ್ಲಿ ಮೂರನೇ ಮಖ್ಯಮಂತ್ರಿ ಆದರೂ ಅಚ್ಚರಿ ಇಲ್ಲ. ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸ್ಥಾನ ಪಡೆಯಲು ಪೇಮೆಂಟ್ ಕೋಟ ಮತ್ತು ಮ್ಯಾನೇಜ್‌ಮೆಂಟ್ ಕೋಟ ಎಂದು ಕಾಂಗ್ರಸ್ ವಿಂಗಡಣೆ ಮಾಡಿದೆ. ಅದರಂತೆ ಸಚಿವರಾಗುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಲೇವಡಿ ಮಾಡಿದ್ದಾರೆ.

ಅವರು ಶನಿವಾರ ಸಮೀಪದ ಖಾಸಗಿ ರೆಸಾರ್ಟ್‌ನಲ್ಲಿ ನಡೆದ ಬಿಜೆಪಿ ಕೊಡಗು ಜಿಲ್ಲಾ ಕಾರ್ಯಕಾರಿಣಿ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.

ಈಗಾಗಲೇ ಅನೇಕ ಶಾಸಕರು ದೆಹಲಿಯಲ್ಲಿ ಸಚಿವ ಸ್ಥಾನಕ್ಕಾಗಿ ಲಾಬಿ ನಡೆಸುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರದಿಂದ ಅಭಿವೃದ್ಧಿ ಕಾಣಲು ಸಾಧ್ಯವಿಲ್ಲ. ಬಿಜೆಪಿ ಸಂಘಟನೆಯಲ್ಲಿ ಕೊಡಗು ಜಿಲ್ಲೆ ರಾಜ್ಯಕ್ಕೆ ಮಾದರಿಯಾಗಿದೆ. ಈ ಹಿಂದೆ ಸಣ್ಣ ತಪ್ಪಿನಿಂದ ಎರಡು ಕ್ಷೇತ್ರವನ್ನು ನಾವು ಕಳೆದುಕೊಂಡಿದ್ದೇವೆ. ಮುಂದೆ ಆಗದಂತೆ ನೋಡಿಕೊಳ್ಳಬೇಕು. ಈ ನಿಟ್ಟಿನಲ್ಲಿ ಕೊಡಗು ಜಿಲ್ಲೆ ಬಿಜೆಪಿ ಸಂಘಟನೆಯನ್ನು ಮತ್ತಷ್ಟು ಶಕ್ತಿದಾಯಕವಾಗಿ ಬೆಳೆಸುವಂತೆ ಪಕ್ಷದ ಕಾರ್ಯಕರ್ತರಿಗೆ ಮನವಿ ಮಾಡಿದರು.

ಕೊಡಗು-ಮೈಸೂರು ಸಂಸದ ಯದುವೇರ್ ಕೃಷ್ಣದತ್ತ ಒಡೆಯರ್ ಮಾತನಾಡಿ, ಜಿಲ್ಲೆಯಲ್ಲಿ ವನ್ಯಜೀವಿ ಮಾನವ ಸಂಘರ್ಷ ಸೇರಿದಂತೆ ಅನೇಕ ಸಮಸ್ಯೆಗಳಿವೆ. ಈ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನೀಡುವಲ್ಲಿ ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ವ್ಯವಸ್ಥಿತ ಹೋರಾಟಕ್ಕೆ ರೂಪುರೇಶೆ ಸಿದ್ದ ಪಡಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಮುಂದಿನ ಎಲ್ಲಾ ಚುನಾವಣೆಗಳಲ್ಲೂ ಬಿಜೆಪಿ ಹೆಚ್ಚು ಸ್ಥಾನ ಪಡೆಯಲು ಎಲ್ಲರೂ ಪ್ರಾಮಾಣಿಕವಾಗಿ ಕೆಲಸ ಮಾಡೋಣ ಎಂದು ಹೇಳಿದರು.

ಬಿಜೆಪಿ ಜಿಲ್ಲಾಧ್ಯಕ್ಷ ರವಿ ಕಾಳಪ್ಪ, ಮಾಜಿ ಶಾಸಕರಾದ ಕೆ.ಜಿ.ಬೋಪಯ್ಯ, ಎಂ.ಪಿ.ಅಪ್ಪಚ್ಚು ರಂಜನ್, ಎಂಎಲ್‌ಸಿ ಸುಜಾ ಕುಶಾಲಪ್ಪ, ಪಕ್ಷದ ಪ್ರಮುಖರಾದ ಡಾ.ನವೀನ್ ಕುಮಾರ್, ಎಸ್.ಜೆ.ಮೇದಪ್ಪ, ಬಿ.ಬಿ.ಭಾರತೀಶ್, ರೀನಾ ಪ್ರಕಾಶ್, ಲೋಕೇಶ್ ಮುಂತಾದವರಿದ್ದರು.