ವಿಜಯೇಂದ್ರ ಸಂಧಾನ ಯಶಸ್ವಿ, ಷರತ್ತಿಲ್ಲದೆ ಅರುಣ್‌ ಕುಮಾರ್‌ ಪುತ್ತಿಲ ಬಿಜೆಪಿಗೆ

| Published : Mar 15 2024, 01:16 AM IST / Updated: Mar 15 2024, 12:20 PM IST

ವಿಜಯೇಂದ್ರ ಸಂಧಾನ ಯಶಸ್ವಿ, ಷರತ್ತಿಲ್ಲದೆ ಅರುಣ್‌ ಕುಮಾರ್‌ ಪುತ್ತಿಲ ಬಿಜೆಪಿಗೆ
Share this Article
  • FB
  • TW
  • Linkdin
  • Email

ಸಾರಾಂಶ

ದ.ಕ. ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಹೊಸ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಿರುವ ಬೆನ್ನಿಗೇ ಪುತ್ತೂರಿನ ಪುತ್ತಿಲ ಪರಿವಾರದ ಮುಖಂಡ ಅರುಣ್‌ ಕುಮಾರ್‌ ಪುತ್ತಿಲ ಗುರುವಾರ ರಾತ್ರಿ ಬೆಂಗಳೂರಿನಲ್ಲಿ ದಿಢೀರನೆ ಬೇಷರತ್‌ ಆಗಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ಕನ್ನಡಪ್ರಭ ವಾರ್ತೆ ಮಂಗಳೂರು

ದ.ಕ. ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಹೊಸ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಿರುವ ಬೆನ್ನಿಗೇ ಪುತ್ತೂರಿನ ಪುತ್ತಿಲ ಪರಿವಾರದ ಮುಖಂಡ ಅರುಣ್‌ ಕುಮಾರ್‌ ಪುತ್ತಿಲ ಗುರುವಾರ ರಾತ್ರಿ ಬೆಂಗಳೂರಿನಲ್ಲಿ ದಿಢೀರನೆ ಬೇಷರತ್‌ ಆಗಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. 

ಮಾತ್ರವಲ್ಲ, ಪುತ್ತಿಲ ಪರಿವಾರ ಕೂಡ ಬಿಜೆಪಿಯಲ್ಲಿ ವಿಲೀನಗೊಂಡಿದೆ. ಇದರೊಂದಿಗೆ ಪುತ್ತೂರಿನಲ್ಲಿ ಬಿಜೆಪಿಗೆ ದೊಡ್ಡ ಸವಾಲಾಗಿದ್ದ ಪುತ್ತಿಲ ಪರಿವಾರದ ಬಿಕ್ಕಟ್ಟು ಸಂಪೂರ್ಣ ಶಮನಗೊಂಡಂತಾಗಿದೆ.

ವಿಜಯೇಂದ್ರ ಅವರು ಗುರುವಾರ ಅರುಣ್‌ ಕುಮಾರ್‌ ಪುತ್ತಿಲ, ಪುತ್ತಿಲ ಪರಿವಾರ ಹಾಗೂ ಬಿಜೆಪಿ ಮುಖಂಡರನ್ನು ಮಾತುಕತೆಗೆ ಆಹ್ವಾನಿಸಿದ್ದರು.

ಅದರಂತೆ ಗುರುವಾರವೇ ದ.ಕ.ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್‌ ಕುಂಪಲ ನೇತೃತ್ವದಲ್ಲಿ ಪುತ್ತೂರು ಮಂಡಲ ಸಮಿತಿ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ ಮತ್ತು ನಗರ ಅಧ್ಯಕ್ಷ ಪಿ.ಜಿ.ಜಗನ್ನಿವಾಸ ರಾವ್‌, ಪುತ್ತಿಲ ಪರಿವಾರದ ಅಧ್ಯಕ್ಷ ಪ್ರಸನ್ನ ಮಾರ್ತ ಸೇರಿದಂತೆ ಪ್ರಮುಖರು ಬೆಂಗಳೂರಿನ ಬಿಜೆಪಿ ಕಚೇರಿ ಜಗನ್ನಾಥ ಸೌಧಕ್ಕೆ ತೆರಳಿದ್ದರು. ಅಲ್ಲಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಮುಖಂಡರಾದ ಸುನಿಲ್‌ ಕುಮಾರ್‌ ಮತ್ತಿತರರ ಜತೆ ಮಾತುಕತೆ ನಡೆಯಿತು.

ಬಿಜೆಪಿಗೆ ಬೇಷರತ್‌ ಆಗಿ ಪಕ್ಷ ಸೇರ್ಪಡೆಗೊಳ್ಳಬೇಕು. ಪುತ್ತಿಲ ಪರಿವಾರವನ್ನು ಬಿಜೆಪಿ ಜತೆ ವಿಲೀನಗೊಳಿಸಬೇಕು. ಪಕ್ಷಕ್ಕೆ ಸೇರ್ಪಡೆಯಾದ ಬಳಿಕವೇ ಸೂಕ್ತ ಸ್ಥಾನಮಾನ ಬಗ್ಗೆ ನಾಯಕರು ನಿರ್ಧರಿಸುತ್ತಾರೆ.

ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಗೆಲುವಿಗೆ ಶ್ರಮಿಸಬೇಕು ಎಂದು ವಿಜಯೇಂದ್ರ ಮಾತುಕತೆ ವೇಳೆ ತಿಳಿಸಿದ್ದರು. ಈ ಎಲ್ಲ ಬೇಡಿಕೆಗಳ ಬಗ್ಗೆ ಪುತ್ತಿಲ ಒಪ್ಪಿಗೆ ಸೂಚಿಸಿದ್ದು, ಅಲ್ಲಿಯೇ ಬೇಷರತ್‌ ಆಗಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. 

ಪುತ್ತಿಲ ಪರಿವಾರವನ್ನು ಕೂಡ ಬಿಜೆಪಿ ಜತೆ ವಿಲೀನಗೊಳಿಸಿದ್ದಾರೆ. ಅರುಣ್‌ ಕುಮಾರ್‌ ಪುತ್ತಿಲ ಅವರನ್ನು ಹೂಗುಚ್ಛ ನೀಡುವ ಮೂಲಕ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಪಕ್ಷಕ್ಕೆ ಬರಮಾಡಿಕೊಂಡರು ಎಂದು ಜಿಲ್ಲಾಧ್ಯಕ್ಷ ಸತೀಶ್‌ ಕುಂಪಲ ತಿಳಿಸಿದ್ದಾರೆ.

ಪುತ್ತಿಲ ಹಾಗೂ ಪುತ್ತಿಲ ಪರಿವಾರದ ಪ್ರಮುಖರು ಶುಕ್ರವಾರ ಸಂಜೆ 6 ಗಂಟೆಗೆ ಮಂಗಳೂರಿನ ಬಿಜೆಪಿ ಜಿಲ್ಲಾ ಚುನಾವಣಾ ಕಚೇರಿಯಲ್ಲಿ ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಯಾಗಲಿದ್ದಾರೆ. 

ಅರುಣ್‌ ಕುಮಾರ್‌ ಪುತ್ತಿಲಗೆ ಸದ್ಯಕ್ಕೆ ಲೋಕಸಭಾ ಚುನಾವಣೆಯ ಉಸ್ತುವಾರಿಯಂತಹ ಹುದ್ದೆ ನೀಡುವ ಸಾಧ್ಯತೆ ಇದೆ. ಬಳಿಕ, ಪಕ್ಷದಲ್ಲಿ ಸೂಕ್ತ ಸ್ಥಾನಮಾನ ನೀಡುವ ಬಗ್ಗೆ ಪಕ್ಷ ನಾಯಕರು ಭರವಸೆ ನೀಡಿದ್ದಾರೆ ಎಂದು ಹೇಳಲಾಗಿದೆ.

ಈ ಮಧ್ಯೆ, ಇನ್ನೊಂದು ವಾರದಲ್ಲಿ ಪುತ್ತೂರಿನಲ್ಲಿ ಬಿಜೆಪಿಯ ದೊಡ್ಡ ಕಾರ್ಯಕ್ರಮ ನಡೆಯಲಿದ್ದು, ಅರುಣ್‌ ಕುಮಾರ್‌ ಪುತ್ತಿಲ ಅವರ ಬಲ ಪ್ರದರ್ಶನಕ್ಕೆ ಅದು ವೇದಿಕೆಯಾಗುವ ನಿರೀಕ್ಷೆ ಹೊಂದಲಾಗಿದೆ.