ಕೆನರಾ ಬ್ಯಾಂಕ್‌, ಗ್ರಾಮ ದತ್ತು ಸ್ವೀಕಾರ ಯೋಜನೆಯಡಿ ಜಿಲ್ಲೆಯ ಒಂದು ಗ್ರಾಮವನ್ನು ದತ್ತು ಪಡೆದು ವಿವಿಧ ಅಭಿವೃದ್ಧಿ ಕಾರ್ಯ ಕೈಗೊಳ್ಳುತ್ತಿರುವುದು ಗ್ರಾಮೀಣ ಪ್ರದೇಶದ ಸಮಗ್ರ ಅಭಿವೃದ್ಧಿಗೆ ಪೂರಕ ಎಂದು ಜಿಲ್ಲಾಧಿಕಾರಿ ಸ್ನೇಹಲ್ ಆರ್. ಹೇಳಿದರು.

ಧಾರವಾಡ:

ಕೆನರಾ ಬ್ಯಾಂಕ್‌, ಗ್ರಾಮ ದತ್ತು ಸ್ವೀಕಾರ ಯೋಜನೆಯಡಿ ಜಿಲ್ಲೆಯ ಒಂದು ಗ್ರಾಮವನ್ನು ದತ್ತು ಪಡೆದು ವಿವಿಧ ಅಭಿವೃದ್ಧಿ ಕಾರ್ಯ ಕೈಗೊಳ್ಳುತ್ತಿರುವುದು ಗ್ರಾಮೀಣ ಪ್ರದೇಶದ ಸಮಗ್ರ ಅಭಿವೃದ್ಧಿಗೆ ಪೂರಕ ಎಂದು ಜಿಲ್ಲಾಧಿಕಾರಿ ಸ್ನೇಹಲ್ ಆರ್. ಹೇಳಿದರು.

ಕೆನರಾ ಬ್ಯಾಂಕ್‌ನ ಗ್ರಾಮ ದತ್ತು ಸ್ವೀಕಾರ ಯೋಜನೆಯಡಿ ಗ್ರಾಮೀಣ ಅಭಿವೃದ್ಧಿಗೆ ಚೆಕ್ ನೀಡುವ ಸಂದರ್ಭದಲ್ಲಿ ಮಾತನಾಡಿದ ಅವರು, ಗ್ರಾಮಗಳ ಸ್ಥಳೀಯ ಅಗತ್ಯತೆ ಗುರುತಿಸಿ ಶಿಕ್ಷಣ, ಕುಡಿಯುವ ನೀರು, ಆರೋಗ್ಯ, ಕ್ರೀಡೆ ಹಾಗೂ ಸಾರ್ವಜನಿಕ ಮೂಲಸೌಕರ್ಯಗಳ ಅಭಿವೃದ್ಧಿಗೆ ಆದ್ಯತೆ ನೀಡುತ್ತಿರುವುದು ಶ್ಲಾಘನೀಯ ಎಂದರು.

ಈ ಯೋಜನೆಯಡಿ ಶಾಲೆಗಳಲ್ಲಿ ಗ್ರಂಥಾಲಯ, ಡೆಸ್ಕ್‌, ಪೀಠೋಪಕರಣ ಹಾಗೂ ಕಂಪ್ಯೂಟರ್ ಉಪಕರಣಗಳ ಸೌಲಭ್ಯ ಕಲ್ಪಿಸುವುದು, ಬಾಲಕಿಯರಿಗೆ ಶೌಚಾಲಯ ನಿರ್ಮಾಣ, ಶುದ್ಧ ಕುಡಿಯುವ ನೀರಿನ ವ್ಯವಸ್ಥೆ, ಸಮುದಾಯ ಭವನ ಅಭಿವೃದ್ಧಿ, ಕ್ರೀಡಾ ಸೌಲಭ್ಯ, ಓಪನ್ ಜಿಮ್ ಹಾಗೂ ಬಸ್ ತಂಗುದಾಣ ನಿರ್ಮಾಣ ಸೇರಿದಂತೆ ಹಲವು ಜನಪರ ಅಭಿವೃದ್ಧಿ ಕಾರ್ಯಕೈಗೊಳ್ಳಲಾಗುತ್ತಿದೆ. ಗ್ರಾಮದ ಮೂಲಭೂತ ಸೌಲಭ್ಯ ಸುಧಾರಿಸಲು ಇಂತಹ ಕಾರ್ಯಗಳಿಂದ ಗ್ರಾಮಸ್ಥರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದರು.

ಕೆನರಾ ಬ್ಯಾಂಕ್ ಡೆಪ್ಯೂಟಿ ಜನರಲ್ ಮ್ಯಾನೇಜರ್ ರಾಜೀವಕುಮಾರ ಪಾಂಡೆ ಮಾತನಾಡಿ. ಬ್ಯಾಂಕ್‌ನ ಗ್ರಾಮ ದತ್ತು ಸ್ವೀಕಾರ ಯೋಜನೆ ಗ್ರಾಮೀಣ ಅಭಿವೃದ್ಧಿಗೆ ₹ 10 ಲಕ್ಷ ನೆರವು ನೀಡಲಾಗುವುದು. ಈ ಯೋಜನೆಯಡಿ ಜಿಲ್ಲೆಯ ಒಂದು ಗ್ರಾಮವನ್ನು ದತ್ತು ಪಡೆದು, ಗ್ರಾಮದ ಸಮಗ್ರ ಅಭಿವೃದ್ಧಿಗಾಗಿ ವಿವಿಧ ಮೂಲಸೌಕರ್ಯ ಹಾಗೂ ಜನಪರ ಅಭಿವೃದ್ಧಿ ಕಾರ್ಯಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.