ಇತ್ತೀಚಿಗೆ ಅರೆಬೊಮ್ಮನಹಳ್ಳಿ ಗ್ರಾಪಂ ವ್ಯಾಪ್ತಿಯಲ್ಲಿ ರಂಗೋಲಿ ಸ್ಪರ್ಧೆ ಮಾಡಿದ ಸಂದರ್ಭ ಮಹಿಳೆಯರು ರಸ್ತೆ, ಚರಂಡಿ ಕಾಮಗಾರಿ ಮಾಡಿಸಿಕೊಡುವಂತೆ ಮನವಿ ಮಾಡಿದ್ದರು.

ತ್ಯಾಮಗೊಂಡ್ಲು ಹೋಬಳಿ ಅರೆಬೊಮ್ಮನಹಳ್ಳಿ ಗ್ರಾಮದಲ್ಲಿ ರಸ್ತೆ, ಚರಂಡಿ ಅಭಿವೃದ್ಧಿ ಕಾಮಗಾರಿಗೆ ಚಾಲನೆಕನ್ನಡಪ್ರಭ ವಾರ್ತೆ ದಾಬಸ್‍ಪೇಟೆ

ಕ್ಷೇತ್ರದ ಪ್ರತೀ ಹಳ್ಳಿಗೂ ಮೂಲ ಸೌಕರ್ಯ ಒದಗಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದು ಜೊತೆಗೆ ಸಾರ್ವಜನಿಕರ ಕುಂದುಕೊರತೆ ಆಲಿಸಿ ಅವರಿಗೆ ಕೇವಲ ಆಶ್ವಾಸನೆ ನೀಡದೆ ಕಾರ್ಯರೂಪಕ್ಕೆ ತರುವ ಮೂಲಕ ಜನರಿಗೆ ಸ್ಪಂದಿಸುವ ಕೆಲಸ ಮಾಡಲಾಗುತ್ತಿದೆ ಎಂದು ಶಾಸಕ ಎನ್.ಶ್ರೀನಿವಾಸ್ ತಿಳಿಸಿದರು.

ತ್ಯಾಮಗೊಂಡ್ಲು ಹೋಬಳಿ ಅರೆಬೊಮ್ಮನಹಳ್ಳಿ ಗ್ರಾ.ಪಂ.ವ್ಯಾಪ್ತಿಯಲ್ಲಿ ಸುಮಾರು 3.50 ಕೋಟಿ ವೆಚ್ಚದ ವಿವಿಧ ರಸ್ತೆ ಹಾಗೂ ಚರಂಡಿ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.

ಇತ್ತೀಚಿಗೆ ಅರೆಬೊಮ್ಮನಹಳ್ಳಿ ಗ್ರಾಪಂ ವ್ಯಾಪ್ತಿಯಲ್ಲಿ ರಂಗೋಲಿ ಸ್ಪರ್ಧೆ ಮಾಡಿದ ಸಂದರ್ಭ ಮಹಿಳೆಯರು ರಸ್ತೆ, ಚರಂಡಿ ಕಾಮಗಾರಿ ಮಾಡಿಸಿಕೊಡುವಂತೆ ಮನವಿ ಮಾಡಿದ್ದರು. ಆಗ ನೀಡಿದ ಭರವಸೆಯಂತೆ ಇಂದು ಸುಮಾರು 3.5ಕೋಟಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದ್ದೇನೆ ಎಂದು ತಿಳಿಸಿದರು.ಕೊಡಗಿಬೊಮ್ಮನಹಳ್ಳಿಯಿಂದ ಅರೆಬೊಮ್ಮನಹಳ್ಳಿ ಗ್ರಾಮದವರೆಗೆ ರಸ್ತೆ ಡಾಂಬರೀಕರಣಕ್ಕೆ 2 ಕೋಟಿ ರು., ಮೆಳೆಗತ್ತಿಗನೂರು ಗ್ರಾಮದಲ್ಲಿ 1 ಕೋಟಿ ವೆಚ್ಚದಲ್ಲಿ ಎಸ್‌ಇಪಿ ಟಿಎಸ್‌ಪಿ ಯೋಜನೆಯಡಿ ರಸ್ತೆ ಹಾಗೂ ಚರಂಡಿ ಕಾಮಗಾರಿ, ತಾಳೆಕೆರೆ ಗ್ರಾಮದಲ್ಲಿ ಶಾಸಕರ ಅನುದಾನದಲ್ಲಿ 7.5 ಲಕ್ಷ ವೆಚ್ಚದಲ್ಲಿ ಶುದ್ಧ ನೀರಿನ ಘಟಕ ನಿರ್ಮಾಣ, ಅರೆಬೊಮ್ಮನಹಳ್ಳಿ ಗ್ರಾಮದ ಅಲ್ಪಸಂಖ್ಯಾತ ಕಾಲೋನಿಗೆ 50 ಲಕ್ಷ ರು. ವೆಚ್ಚದಲ್ಲಿ ರಸ್ತೆ ಹಾಗೂ ಚರಂಡಿ ಕಾಮಗಾರಿಗೆ ಚಾಲನೆ ನೀಡಲಾಗಿದೆ ಎಂದು ತಿಳಿಸಿದರು.

ಬ್ಯಾಡರಹಳ್ಳಿ ಗ್ರಾಮದಿಂದ ಲಕ್ಕಸಂದ್ರ ಅರೆಬೊಮ್ಮನಹಳ್ಳಿ ಗ್ರಾಮದವರೆಗೆ ಸುಮಾರು 4.5 ಕೋಟಿ ರು. ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಹಾಗೂ ತುಮಕೂರು ರಾಷ್ಟ್ರೀಯ ಹೆದ್ದಾರಿಯಿಂದ ಆನಂದನಗರ ಗ್ರಾಮದ ರಸ್ತೆ ಅಗಲೀಕರಣಕ್ಕೆ 5 ಕೋಟಿ ರು. ವೆಚ್ಚದ ಕಾಮಗಾರಿಗೆ ಅನುಮೋದನೆ ನೀಡುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದೇನೆ. ನಂತರ ಅರೆಬೊಮ್ಮನಹಳ್ಳಿ ಪರಿಶಿಷ್ಟ ಜಾತಿ ಪಂಗಡದ ಕಾಲೋನಿಗಳ ಅಭಿವೃದ್ಧಿಗೆ ಶ್ರಮಿಸುತ್ತೇನೆ ಎಂದು ತಿಳಿಸಿದರು.

ನೆಲಮಂಗಲ ತಾಲೂಕಿನಲ್ಲಿ ಕುಡಿಯುವ ನೀರಿಗೆ ತೊಂದರೆಯಾಗದಂತೆ ಈಗಾಗಲೇ ಅಗತ್ಯವಿರುವ ಗ್ರಾಮಗಳಲ್ಲಿ ಕೊಳವೆ ಬಾವಿ ಕೊರೆಯಲಾಗುತ್ತಿದೆ. ಕೆಲವೆಡೆ ನೀರು ಸಿಗದ ಹಿನ್ನೆಲೆಯಲ್ಲಿ ಟ್ಯಾಂಕರ್ ಮೂಲಕ ಪೂರೈಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು.

ಗ್ರಾ.ಪಂ ಮಾಜಿ ಅಧ್ಯಕ್ಷ ಶೈಲೇಂದ್ರ, ಮುಖಂಡರಾದ ಮೆಳೆಗತ್ತಿಗನೂರು ಶ್ರೀನಿವಾಸ್, ಬ್ಯಾಡರಹಳ್ಳಿ ಬಿ.ಟಿ.ರಾಮಚಂದ್ರ, ತಾಳಕೆರೆ ರವಿಕುಮಾರ್, ವಾಸುದೇವ್, ಗಂಗರಾಜು, ರವಿಕುಮಾರ್, ವಿಜಯ್, ರಾಮಚಂದ್ರಯ್ಯ ಮತ್ತೀತ್ತರಿದ್ದರು.-------------

ಪೋಟೋ5

ತ್ಯಾಮಗೊಂಡ್ಲು ಹೋಬಳಿ ಅರೆಬೊಮ್ಮನಹಳ್ಳಿ ಗ್ರಾಮದಲ್ಲಿ ರಸ್ತೆ ಹಾಗೂ ಚರಂಡಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ಎನ್.ಶ್ರೀನಿವಾಸ್ ಭೂಮಿ ಪೂಜೆ ನೆರವೇರಿದರು.